ನುಡಿಯರಿಮೆಯ ಇಣುಕುನೋಟ — Blog Series

ಲೇಖಕರು: ಡಾ. ಡಿ. ಎನ್. ಶಂಕರ ಬಟ್
ಪ್ರಕಟಣೆ: dnshankarabhat.net (2014–2024)
ಸಂಬಂಧಿತ ಗ್ರಂಥ: 18 — ಕನ್ನಡ ನುಡಿಯ ಬಗೆಗೆ ಚಿಂತನೆ
ಸಂಗ್ರಹ: 13 ಭಾಗಗಳು ಲಭ್ಯ (ಸರಣಿ ಸಂಖ್ಯೆ: [11, 2, 3, 10, 14, 18, 20, 23, 27, 28, 29, 33, 35])


ಪರಿಚಯ

ಕನ್ನಡ ನುಡಿಯರಿಮೆ (linguistics) ಕುರಿತ ವಿವಿಧ ವಿಷಯಗಳ ಮೇಲೆ ಡಾ. ಬಟ್ ಅವರು ಬರೆದ ಬ್ಲಾಗ್ ಸರಣಿ. ಕನ್ನಡ ನುಡಿಯ ಬರಹ, ಉಚ್ಚಾರಣೆ, ವ್ಯಾಕರಣ, ಪದರಚನೆ, ದ್ರಾವಿಡ ಭಾಷಾಕುಟುಂಬ, ನುಡಿಯ ಸ್ವರೂಪ ಮುಂತಾದ ವಿವಿಧ ಅಂಶಗಳ ಮೇಲೆ ಸರಳ ಕನ್ನಡದಲ್ಲಿ ಬರೆದ ಲೇಖನಗಳ ಸರಣಿ.


ಪರಿವಿಡಿ

  1. ಭಾಗ 11: ಅರಿಮೆಯ ಪದಗಳಿಗೆ ಕನ್ನಡವೇ ಮೇಲು
  2. ಭಾಗ 2: ಮನೆಯ ಹೊರಗಡೆ ಅಡಿಗೆಮನೆ ಪಾಕಶಾಲೆಯಾಗಬೇಕೇ?
  3. ಭಾಗ 3: ಪದಗಳನ್ನು ಓದುವ ಹಾಗೆಯೇ ಬರೆಯಬೇಕು
  4. ಭಾಗ 10: ಓದುವ ಹಾಗೆಯೇ ಬರೆಯುವುದು
  5. ಭಾಗ 14: ಬರಹಕ್ಕೆ ಮೇಲ್ಮೆ ಬಂದುದು ಹೇಗೆ?
  6. ಭಾಗ 18: ನುಡಿಗಳ ನಡುವಿನ ನಂಟಸ್ತಿಕೆ
  7. ಭಾಗ 20: ಬರಹದಲ್ಲಿ ಯಾವುದು ಸರಿ, ಯಾವುದು ತಪ್ಪು?
  8. ಭಾಗ 23: ಕನ್ನಡ ನುಡಿ ಎಶ್ಟು ಹಳೆಯದು?
  9. ಭಾಗ 27: ಪದ ಮತ್ತು ಅದರ ಹುರುಳು
  10. ಭಾಗ 28: ಎಣಿಕೆಯಲ್ಲೂ ಹಲವು ಬಗೆಗಳಿವೆ
  11. ಭಾಗ 29: ಪದಗಳ ಹಿನ್ನಡವಳಿಯನ್ನು ಅರಿಯುವ ಬಗೆ
  12. ಭಾಗ 33: ಕನ್ನಡ ನುಡಿಯ ಸೊಗಡು
  13. ಭಾಗ 35: ದ್ರಾವಿಡ ನುಡಿಗಳು ಅಯ್ದಲ್ಲ, ಇಪ್ಪತ್ತಾರು!

ಭಾಗ 11: ಅರಿಮೆಯ ಪದಗಳಿಗೆ ಕನ್ನಡವೇ ಮೇಲು

ದಿನಾಂಕ: 2014-04-14
ಮೂಲ URL: http://dnshankarabhat.net/%e0%b2%85%e0%b2%b0%e0%b2%bf%e0%b2%ae%e0%b3%86%e0%b2%af-%e0%b2%aa%e0%b2%a6%e0%b2%97%e0%b2%b3%e0%b2%bf%e0%b2%97%e0%b3%86-%e0%b2%95%e0%b2%a8%e0%b3%8d%e0%b2%a8%e0%b2%a1%e0%b2%b5%e0%b3%87-%e0%b2%ae/

ನುಡಿಯರಿಮೆಯ ಇಣುಕುನೋಟ – 11

ಕನ್ನಡದಲ್ಲಿ ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡಬೇಕಾದಾಗಲೆಲ್ಲ ಹೆಚ್ಚಿನ ಅರಿವಿಗರೂ ಸಂಸ್ಕ್ರುತ ಪದಗಳನ್ನೇ ಆರಿಸಿಕೊಳ್ಳುತ್ತಾರೆ; ಇದಕ್ಕಾಗಿ ಕನ್ನಡದವೇ ಆದ ಪದಗಳನ್ನು ಬಳಸುವುದು ತುಂಬಾ ಅಪರೂಪ.

ಈ ಕಾರಣಕ್ಕಾಗಿ, ಕನ್ನಡದವೆಂದು ಹೇಳಲಾಗುವ ಹೆಚ್ಚಿನ ಅರಿಮೆಯ ಪದಕೋಶಗಳಲ್ಲೂ ಇವತ್ತು ನೂರಕ್ಕೆ ಎಂಬತ್ತರಶ್ಟು ಇಲ್ಲವೇ ಅದಕ್ಕಿಂತಲೂ ಹೆಚ್ಚು ಸಂಸ್ಕ್ರುತ ಪದಗಳನ್ನು ಕಾಣಬಹುದು. ಕನ್ನಡ ಅರಿವಿಗರ ಈ ನಿಲುವಿನಿಂದಾಗಿ, ಇವತ್ತು ಕನ್ನಡದ ಅರಿಮೆಯ ಬರಹಗಳು ಸಂಸ್ಕ್ರುತ ಪದಗಳಿಂದ ತುಂಬಿ ತುಳುಕುತ್ತಿವೆ.

ಹಿಂದಿನ ಕಾಲದಲ್ಲಿ ಕನ್ನಡದಲ್ಲಿ ಬರೆಯುವವರಿಗೆ ಬೇಕಾಗಿರುವ ಹೆಚ್ಚಿನ ತಿಳಿವುಗಳೂ ಸಂಸ್ಕ್ರುತದಲ್ಲಿದ್ದುವು; ಹಾಗಾಗಿ, ಅವನ್ನು ಕನ್ನಡಕ್ಕೆ ತರಬೇಕಾದಾಗ, ಅದಕ್ಕೆ ಬೇಕಾಗುವ ಅರಿಮೆಯ ಪದಗಳಲ್ಲಿ ಹೆಚ್ಚಿನವನ್ನೂ ಸಂಸ್ಕ್ರುತದಿಂದಲೇನೇ ಎರವಲು ಪಡೆಯಲಾಗುತ್ತಿತ್ತು, ಮತ್ತು ಆವತ್ತಿಗೆ ಅದು ಸರಿಯಾದ ದಾರಿಯಾಗಿತ್ತು.

ಆದರೆ, ಇವತ್ತು ಅರಿಮೆಯ (ವಿಜ್ನಾನದ) ಬರಹಗಾರರಿಗೆ ಬೇಕಾಗುವ ಹೆಚ್ಚಿನ ತಿಳಿವುಗಳೂ ಇಂಗ್ಲಿಶ್‌ನಲ್ಲಿವೆ; ಹಾಗಾಗಿ, ಅವನ್ನು ಇಂಗ್ಲಿಶ್‌ನಿಂದ ಕನ್ನಡಕ್ಕೆ ತರಬೇಕಾದಾಗ, ಅದಕ್ಕೆ ಬೇಕಾಗುವ ಪದಗಳನ್ನು ಇಂಗ್ಲಿಶ್‌ನಿಂದ ಎರವಲು ಪಡೆಯುವುದು, ಇಲ್ಲವೇ ಕನ್ನಡದಲ್ಲೇನೇ ಹೊಸದಾಗಿ ಉಂಟುಮಾಡಿಕೊಳ್ಳುವುದು ಎಂಬ ಎರಡು ದಾರಿಗಳು ಇವತ್ತಿನ ಮಟ್ಟಿಗೆ ಸರಿಯಾದುವು.

ಹೀಗಿದ್ದರೂ, ಕನ್ನಡದ ಬರಹಗಾರರು ಇವತ್ತಿಗೂ ಅರಿಮೆಯ ಪದಗಳಾಗಿ ಸಂಸ್ಕ್ರುತ ಪದಗಳನ್ನು ಬಳಸುವ ಹಳೆಯ ಸಂಪ್ರದಾಯವನ್ನೇ ಮುಂದುವರಿಸುತ್ತಿದ್ದಾರೆ; ತಮಗೆ ಬೇಕಾಗಿರುವ ಪದಗಳು ಸಂಸ್ಕ್ರುತದಲ್ಲಿಲ್ಲವಾದರೆ, ಹೊಸ ಪದಗಳನ್ನು ಸಂಸ್ಕ್ರುತದಲ್ಲೇನೇ ಉಂಟುಮಾಡಿ ಕನ್ನಡಕ್ಕೆ ತರುವಂತಹ ಇನ್ನೊಂದು ವಿಚಿತ್ರವಾದ ಸಂಪ್ರದಾಯವನ್ನೂ ಅವರು ಹುಟ್ಟುಹಾಕಿಕೊಂಡಿದ್ದಾರೆ.

ಹೀಗೆ ಮಾಡುತ್ತಿರುವುದಕ್ಕಾಗಿ, ಅವರು ಕೆಲವು ನೆವಗಳನ್ನೂ ಕೊಡುತ್ತಿದ್ದಾರೆ: ಇಂಗ್ಲಿಶ್‌ನಲ್ಲಿ ಅರಿಮೆಯ ಪದಗಳಾಗಿ ಲ್ಯಾಟಿನ್ ಇಲ್ಲವೇ ಗ್ರೀಕ್ ಪದಗಳನ್ನು ಬಳಸುವ ಹಾಗೆ ಕನ್ನಡದಲ್ಲಿ ಸಂಸ್ಕ್ರುತ ಪದಗಳನ್ನು ಬಳಸಲಾಗುತ್ತದೆಯೆಂಬುದು ಇವುಗಳಲ್ಲೊಂದು.

ಆದರೆ, ಇಂಗ್ಲಿಶ್‌ಗೆ ಲ್ಯಾಟಿನ್ ಇರುವ ಹಾಗೆ ಕನ್ನಡಕ್ಕೆ ಸಂಸ್ಕ್ರುತ ಅಲ್ಲ; ಯಾಕೆಂದರೆ, ಇಂಗ್ಲಿಶ್ ಮತ್ತು ಲ್ಯಾಟಿನ್‌ಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆ, ಮತ್ತು ಕನ್ನಡ ಮತ್ತು ಸಂಸ್ಕ್ರುತಗಳು ಬೇರೆ ಬೇರೆ ನುಡಿಕುಟುಂಬಗಳಿಗೆ ಸೇರಿವೆ. ಇಂಗ್ಲಿಶ್‌ಗೆ ಬೇಕಾಗುವ ಪದಗಳನ್ನು ಲ್ಯಾಟಿನ್‌ನಲ್ಲಿ ಉಂಟುಮಾಡಿದಾಗ ಹೆಚ್ಚಿನ ತೊಂದರೆಗಳೇನೂ ಎದುರಾಗುವುದಿಲ್ಲ; ಆದರೆ, ಕನ್ನಡಕ್ಕೆ ಬೇಕಾಗುವ ಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಿದಾಗ ಹಲವು ತೊಂದರೆಗಳು ಎದುರಾಗುತ್ತವೆ:

ಇಂಗ್ಲಿಶ್‌ನಲ್ಲಿ ಮುಕ್ಯವಾಗಿ ನವ್ನ್, ವರ‍್ಬ್, ಮತ್ತು ಎಜಕ್ಟಿವ್ ಎಂಬುದಾಗಿ ಮೂರು ಬಗೆಯ ಪದಗಳಿವೆ; ಕನ್ನಡದಲ್ಲೂ ಇಂತಹವೇ ಮೂರು ಬಗೆಯ ಪದಗಳಿವೆ. ಆದರೆ, ಸಂಸ್ಕ್ರುತದಲ್ಲಿ ಮುಕ್ಯವಾಗಿ ನಾಮಪದ ಮತ್ತು ಕ್ರಿಯಾಪದ ಎಂಬ ಎರಡು ಬಗೆಯ ಪದಗಳು ಮಾತ್ರ ಇವೆ.

ಹಾಗಾಗಿ, ಇಂಗ್ಲಿಶ್‌ನ ಅರಿಮೆಯ ಪದಗಳಿಗೆ ಸಮನಾದ ಪದಗಳನ್ನು ಸಂಸ್ಕ್ರುತದಲ್ಲಿ ಉಂಟುಮಾಡಿ ಕನ್ನಡಕ್ಕೆ ತರಹೋದರೆ, ನವ್ನ್ ಮತ್ತು ಎಜಕ್ಟಿವ್‌ಗಳ ನಡುವಿನ ವ್ಯತ್ಯಾಸವನ್ನು ಅವುಗಳಲ್ಲಿ ಸರಿಯಾಗಿ ತೋರಿಸಲು ಬರುವುದಿಲ್ಲ. ಈ ತೊಂದರೆಯಿಂದಾಗಿ, ಇವತ್ತು ಬಳಕೆಯಲ್ಲಿರುವ ಅರಿಮೆಯ ಪದಕೋಶಗಳಲ್ಲಿ ತುಂಬಾ ಗೊಂದಲವುಂಟಾಗಿರುವುದನ್ನು ಕಾಣಬಹುದು.

ಅರಿಮೆಯ ಬರಹಗಳಲ್ಲಿ ಕನ್ನಡ ಪದಗಳನ್ನು ಬಳಸಿದರೆ, ಅವು ಸಂಸ್ಕ್ರುತ ಪದಗಳ ಹಾಗೆ ಕಚಿತವಾದ ಹುರುಳನ್ನು ಕೊಡಲಾರವು ಎಂಬುದು ಇನ್ನೊಂದು ನೆವ; ಆದರೆ, ಸಂಸ್ಕ್ರುತ ಪದಗಳು ಕನ್ನಡದಲ್ಲಿ ಉಂಟುಮಾಡುತ್ತಿರುವ ಮೇಲಿನ ಗೊಂದಲವೇ ಇದನ್ನು ತಳ್ಳಿಹಾಕುತ್ತದೆ.

ಇವತ್ತು ಇಂಗ್ಲಿಶ್‌ನಲ್ಲಿ ಕಂಪ್ಯೂಟರ್‌ಗೆ ಸಂಬಂದಿಸಿದ ಹಲವು ಅರಿಮೆಯ ಪದಗಳನ್ನು ದಿನಬಳಕೆಯ ಪದಗಳನ್ನು ಬಳಸಿಯೇ ಉಂಟುಮಾಡಲಾಗುತ್ತಿದೆ; ಮವ್ಸ್ ‘ಇಲಿ’, ವಿಂಡೋಸ್ ‘ಕಿಟಿಕಿ’, ಟ್ರೀ ‘ಮರ’, ವೆಬ್ ‘ಬಲೆ’ ಎಂಬಂತಹ ಈ ಪದಗಳಿಂದಾಗಿ ಗೊಂದಲವೇನೂ ಉಂಟಾದ ಹಾಗೆ ಕಾಣಿಸುವುದಿಲ್ಲ.

ಹಾಗಾಗಿ, ಕನ್ನಡದ ಅರಿಮೆಯ ಪದಗಳಿಗಾಗಿ ಸಂಸ್ಕ್ರುತದ ಮೊರೆಹೊಗುವ ಇವತ್ತಿನ ಸಂಪ್ರದಾಯವನ್ನು ಬಿಟ್ಟುಕೊಡುವುದೇ ಒಳ್ಳೆಯದು. ಇಂಗ್ಲಿಶ್‌ನಿಂದ ಅರಿಮೆಯ ಬರಹಗಳನ್ನು ಕನ್ನಡಕ್ಕೆ ತರುವಾಗ, ಕನ್ನಡ ಪದಗಳ ಸೊಗಡನ್ನು ಕೆಡಿಸದಂತಹ ಇಂಗ್ಲಿಶ್ ಪದಗಳನ್ನು ಉಳಿಸಿಕೊಳ್ಳಬಹುದು, ಮತ್ತು ಅದನ್ನು ಕೆಡಿಸುವಂತಹ ಪದಗಳ ಬದಲು ಕನ್ನಡದವೇ ಆದ ಪದಗಳನ್ನು ಬಳಸಿ ಹೊಸ ಪದಗಳನ್ನು ಉಂಟುಮಾಡಿಕೊಳ್ಳಬಹುದು; ಇದೇ ಕನ್ನಡಕ್ಕೆ ಸರಿಯಾದ ದಾರಿ.

ಇಲ್ಲಿ ಇನ್ನೊಂದು ವಿಶಯವನ್ನೂ ಒತ್ತಿ ಹೇಳಬೇಕಾಗಿದೆ: ಇಂಗ್ಲಿಶ್‌ನಿಂದ ಅರಿಮೆಯ ಬರಹಗಳನ್ನು ಕನ್ನಡಕ್ಕೆ ತರುವಾಗ, ಎರಡು ಮುಕ್ಯ ಗುರಿಗಳಿಗಾಗಿ ನಾವು ಅವುಗಳಲ್ಲಿರುವ ಇಂಗ್ಲಿಶ್ ಪದಗಳಿಗೆ ಬದಲಾಗಿ ಕನ್ನಡದವೇ ಆದ ಪದಗಳನ್ನು ಬಳಸಲು ಹೋಗುತ್ತೇವೆ: ಹಾಗೆ ಮಾಡುವ ಮೂಲಕ ಬರಹ ಏನನ್ನು ತಿಳಿಸುತ್ತದೆ ಎಂಬುದು ಕನ್ನಡಿಗರಿಗೆ ಸುಲಬವಾಗಿ ತಿಳಿಯುವಂತಾಗಬೇಕು ಎಂಬುದೊಂದು, ಮತ್ತು ಕನ್ನಡದ ಸೊಗಡು ಕೆಡದಂತೆ ಉಳಿಯಬೇಕು ಎಂಬುದಿನ್ನೊಂದು.

ಇತ್ತೀಚೆಗೆ ಕಂಪ್ಯೂಟರ್‌ಗಳಿಗೆ ಸಂಬಂದಿಸಿದ ಕೆಲವು ಕಯ್ಪಿಡಿಗಳಲ್ಲಿ ಹೆಚ್ಚಿನ ಇಂಗ್ಲಿಶ್ ಪದಗಳನ್ನೂ ಹಾಗೆಯೇ ಉಳಿಸಿರುವುದನ್ನು ಕಾಣಬಹುದು. ಇಂಗ್ಲಿಶ್ ಪದಗಳ ಹುರುಳು ಗೊತ್ತಿರುವವರು ಮಾತ್ರ ಅವನ್ನು ಓದಿ ತಿಳಿದುಕೊಳ್ಳಬಲ್ಲರು, ಮತ್ತು ಅವುಗಳಲ್ಲಿ ಕನ್ನಡದ ಸೊಗಡು ಪೂರ‍್ತಿ ಕೆಟ್ಟುಹೋಗಿರುತ್ತದೆ; ಎಂದರೆ, ಮೇಲಿನ ಎರಡು ಗುರಿಗಳನ್ನೂ ಅವು ತಲಪುವುದೇ ಇಲ್ಲ.

ಇಂತಹ ಕಯ್ಪಿಡಿಗಳಲ್ಲಿ ಬರುವ ಇಂಗ್ಲಿಶ್ ಪದಗಳಿಗೆ ಬದಲಾಗಿ ಸಂಸ್ಕ್ರುತ ಪದಗಳನ್ನು ಬಳಸಿದರೂ ಪರಿಣಾಮ ಒಂದೇ: ಅವನ್ನು ಓದಿ ತಿಳಿಯಲು ಇಂಗ್ಲಿಶ್ ಪದಗಳ ಬದಲು ಸಂಸ್ಕ್ರುತ ಪದಗಳ ಹುರುಳು ಗೊತ್ತಿರಬೇಕು, ಮತ್ತು ಅವು ಕನ್ನಡದ ಸೊಗಡನ್ನು ಕೆಡಿಸದಿರುವುದಿಲ್ಲ. ಎಂದರೆ, ಇಂತಹ ಬರಹಗಳೂ ಮೇಲಿನ ಎರಡು ಗುರಿಗಳನ್ನು ತಲಪುವುದೇ ಇಲ್ಲ.

ಹಲವು ಹೆಚ್ಚಿನ ಸಂಸ್ಕ್ರುತ ಪದಗಳ ಹುರುಳುಗಳನ್ನು ಕಲಿಯುವುದಕ್ಕಿಂತಲೂ ಮೂಲ ಬರಹದಲ್ಲಿದ್ದ ಇಂಗ್ಲಿಶ್ ಪದಗಳ ಹುರುಳುಗಳನ್ನು ಕಲಿಯುವುದೇ ಕನ್ನಡಿಗರ ಮಟ್ಟಿಗೆ ಒಳ್ಳೆಯದಲ್ಲವೇ? ಯಾಕೆಂದರೆ, ಮುಂದೆ ಹೆಚ್ಚಿನ ತಿಳಿವನ್ನು ಪಡೆಯಬೇಕೆಂದಿರುವವರಿಗೆ ಇಂಗ್ಲಿಶ್ ಪದಗಳ ತಿಳಿವು ನೆರವಾಗಬಲ್ಲುದು; ಆದರೆ, ಸಂಸ್ಕ್ರುತ ಪದಗಳ ತಿಳಿವು ಯಾವ ನೆರವನ್ನೂ ನೀಡಲಾರವು.

ಅರಿಮೆಯ ಬರಹಗಳಿಂದ ತಿಳಿವನ್ನು ಪಡೆಯುವುದು ಮಾತ್ರವಲ್ಲದೆ, ಅದನ್ನು ಒರೆಗೆ ಹಚ್ಚುವ ಮತ್ತು ಅವುಗಳಲ್ಲಿಲ್ಲದ ಹೊಸ ತಿಳಿವನ್ನು ಕಂಡುಹಿಡಿಯುವ ಕೆಲಸವನ್ನೂ ನಾವಿಂದು ನಡೆಸಬೇಕಾಗಿದೆ. ಹೆಚ್ಚು ಹೆಚ್ಚು ಸಂಸ್ಕ್ರುತ ಇಲ್ಲವೇ ಇಂಗ್ಲಿಶ್ ಪದಗಳನ್ನು ಬಳಸಿರುವ ಬರಹಗಳನ್ನು ಕಶ್ಟಪಟ್ಟು ಅರಿಯುವುದರಲ್ಲಿಯೇ ನಮ್ಮ ಸಮಯವೆಲ್ಲ ಕಳೆದುಹೋಗುತ್ತದೆ. ಅವನ್ನು ಒರೆಗೆ ಹಚ್ಚುವ ಮತ್ತು ಹೊಸ ತಿಳಿವನ್ನು ಕಂಡುಹಿಡಿಯುವ ಕೆಲಸದಲ್ಲೂ ನಮ್ಮ ಕಲಿವಿಗರು ತೊಡಗಬೇಕಿದ್ದಲ್ಲಿ, ಅರಿಮೆಯ ಪದಗಳಲ್ಲಿ ಹೆಚ್ಚಿನವೂ ಕನ್ನಡದವೇ ಆಗಿರಬೇಕು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 2: ಮನೆಯ ಹೊರಗಡೆ ಅಡಿಗೆಮನೆ ಪಾಕಶಾಲೆಯಾಗಬೇಕೇ?

ದಿನಾಂಕ: 2014-04-14
ಮೂಲ URL: https://dnshankarabhat.net/%e0%b2%ae%e0%b2%a8%e0%b3%86%e0%b2%af-%e0%b2%b9%e0%b3%8a%e0%b2%b0%e0%b2%97%e0%b2%a1%e0%b3%86-%e0%b2%85%e0%b2%a1%e0%b2%bf%e0%b2%97%e0%b3%86%e0%b2%ae%e0%b2%a8%e0%b3%86-%e0%b2%aa%e0%b2%be%e0%b2%95/

ನುಡಿಯರಿಮೆಯ ಇಣುಕುನೋಟ – 2

ಕನ್ನಡಿಗರ ಪದಬಳಕೆಯ ವಿಶಯದಲ್ಲಿ ಒಂದು ಸೋಜಿಗದ ಸಂಗತಿಯಿದೆ. ಅದೇನೆಂದು ತಿಳಿಯಲು ಕೆಲವು ಎತ್ತುಗೆಗಳನ್ನು ತೆಗೆದುಕೊಳ್ಳೋಣ:

ಮನೆಯಲ್ಲಿ ಅಡಿಗೆಮನೆ, ಊಟದಕೋಣೆ ಎನ್ನುವ ನಾವು ಸಮ್ಮೇಳನಗಳಂತಹ ಸಂದರ‍್ಬಗಳಲ್ಲಿ ಅವುಗಳ ಬದಲಾಗಿ ಪಾಕಶಾಲೆ, ಬೋಜನಶಾಲೆ ಎನ್ನುತ್ತೇವೆ. ಬಟ್ಟೆಯಂಗಡಿಗೆ ಹೋಗುತ್ತೇನೆ ಎನ್ನುತ್ತೇವೆ; ಆದರೆ, ಅಂತಹ ಅಂಗಡಿಗಳಿಗೆ ಹೆಸರು ಕೊಡಬೇಕಾದಾಗ, ವಸ್ತ್ರಾಲಯ ಇಲ್ಲವೇ ವಸ್ತ್ರಬಂಡಾರ ಎಂಬ ಹೆಸರುಗಳಶ್ಟೇ ಹೊಳೆಯುತ್ತವೆ. ತಿಂಡಿಗಳನ್ನು ಮಾರುವ ಅಂಗಡಿ ತಿಂಡಿಮನೆಯಾಗಿಬಿಟ್ಟರೆ ಅದೇನೋ ಮುಜುಗರ, ಉಪಹಾರಗ್ರುಹವೇ ಆಗಬೇಕು.

ನಾಯಿಯ ಕುರಿತು ಬರೆದ ಬರಹದಲ್ಲಿ ಉದ್ದಕ್ಕೂ ನಾಯಿ ಎಂಬ ಪದವೇ ಬಳಕೆಯಾಗಿದೆಯಾದರೂ, ತಲೆಬರಹದಲ್ಲಿ ಮಾತ್ರ ಶ್ವಾನವಿದ್ದರಶ್ಟೇ ನೆಮ್ಮದಿ. ಮದುವೆಯ ಕರೆಯೋಲೆ ಕಳುಹಿಸುವ ಬದಲು ವಿವಾಹ ಆಮಂತ್ರಣ ಕಳಿಸಿದರೆ ಮಾತ್ರ ಮದುವೆಗೆ ಬರುತ್ತಾರೇನೋ ಎಂಬ ಅನಿಸಿಕೆ ನಮ್ಮಲ್ಲಿ ಹಲವರಲ್ಲಿದ್ದಂತಿದೆ.

ಹಾಗೆಯೇ, ಪುಸ್ತಕಗಳಿಗೆ ಹೆಸರು ಕೊಡುವಲ್ಲೂ ಬಳಕೆಯಲ್ಲಿರುವ ಪದಗಳಿಗಿಂತ ಬಳಕೆಯಲ್ಲಿಲ್ಲದ ಮತ್ತು ಹೆಚ್ಚು ಮಂದಿಗೆ ತಿಳಿಯದ ಪದಗಳೇ ಚಂದವೆಂದು ಹಲವು ಬರಹಗಾರರಿಗೆ ಅನಿಸುತ್ತದೆ. ಮನೆಗಳಿಗೆ, ಅಂಗಡಿಗಳಿಗೆ, ಕೂಟಗಳಿಗೆ, ಇಲ್ಲವೇ ಹಲವು ಬಗೆಯ ಹಮ್ಮುಗೆಗಳಿಗೆ ಹೆಸರು ಕೊಡಬೇಕಾಗಿರುವಲ್ಲೂ ನಮ್ಮ ಒಡಲಿನಿಂದ ನೇರವಾಗಿ ಬರುವ ಪದಗಳು ತಕ್ಕವೆಂದು ತೋರುವುದೇ ಇಲ್ಲ; ದೂರದರ‍್ಶನ, ದಿನಪತ್ರಿಕೆ, ಉಚ್ಚಶಿಕ್ಶಣ, ನಿರುದ್ಯೋಗ ಸಮಸ್ಯೆ, ಜನಗಣನೆ, ಲೋಕಾಯುಕ್ತ, ಪಟ್ಯಪುಸ್ತಕ ಮೊದಲಾದ ಹಲವು ಬಗೆಯ ಪದಗಳನ್ನು ಉಂಟುಮಾಡುವಲ್ಲಿ ಕೂಡ ಇದೇ ಸೋಜಿಗವನ್ನು ಕಾಣಬಹುದು.

ಇಂತಹ ಹಲವಾರು ‘ಮೇಲ್ಮಟ್ಟದ’ ಸನ್ನಿವೇಶಗಳಲ್ಲಿ ನಮ್ಮ ನಾಲಿಗೆಗಳಿಗೆ ತಂತಾನೇ ಬರುವ ಪದಗಳು – ಎಂದರೆ ಕನ್ನಡದವೇ ಆದ ಪದಗಳು – ಬಳಕೆಗೆ ತಕ್ಕವಲ್ಲ, ಮೇಲೆ ಕಾಣಿಸಿದಂತೆ ಸಂಸ್ಕ್ರುತದಿಂದ ಎರವಲು ಪಡೆದ ಪದಗಳೇ ತಕ್ಕವು ಎಂಬ ಕೀಳರಿಮೆ ನಮ್ಮಲ್ಲಿ ಹೆಚ್ಚಿನವರಲ್ಲಿದೆ. ಇದೊಂದು ಸೋಜಿಗವಲ್ಲದೆ ಮತ್ತೇನು?

ಹಿಂದಿನ ಕಾಲದಲ್ಲಿ ಕನ್ನಡ ನುಡಿ ಸಂಸ್ಕ್ರುತದ ಕಳೆಗೆಟ್ಟ ರೂಪ ಎಂಬ ಅನಿಸಿಕೆ ಹಲವು ಕನ್ನಡ ಪಂಡಿತರಲ್ಲಿತ್ತು; ಕನ್ನಡ ಪದಗಳಿಗಿಂತ ಸಂಸ್ಕ್ರುತ ಪದಗಳು ಮೇಲ್ಮಟ್ಟದವು ಎಂಬುದಾಗಿ ಅವರು ತಿಳಿಯುತ್ತಿದ್ದುದಕ್ಕೆ ಈ ತಪ್ಪು ಅನಿಸಿಕೆ ಕಾರಣವಾಗಿತ್ತು; ಆದರೆ, ನಿಜಕ್ಕೂ ಕನ್ನಡ ಸಂಸ್ಕ್ರುತದ ಕಳೆಗೆಟ್ಟ ರೂಪ ಅಲ್ಲ, ಅದಕ್ಕಿಂತ ತೀರ ಬೇರಾಗಿರುವ ಒಂದು ಸ್ವತಂತ್ರವಾದ ನುಡಿ ಎಂಬುದನ್ನು ಇವತ್ತು ನಾವು ಕಂಡುಕೊಂಡಿದ್ದೇವೆ. ಹಾಗಾಗಿ, ಇವತ್ತಿಗೂ ಸಂಸ್ಕ್ರುತ ಪದಗಳು ಕನ್ನಡ ಪದಗಳಿಂದ ಮೇಲ್ಮಟ್ಟದವು ಎಂದು ಬಾವಿಸುವುದಕ್ಕೆ ಯಾವ ಆದಾರವೂ ಇಲ್ಲ.

ಈ ರೀತಿ ಹೊಸಪದಗಳನ್ನು ಉಂಟುಮಾಡಬೇಕಾಗಿರುವಲ್ಲಿ ಕನ್ನಡದವೇ ಆದ ಪದಗಳನ್ನು ಬಳಸದಿರುವುದಕ್ಕೆ ಅವುಗಳ ಕುರಿತಾಗಿ ಕೀಳರಿಮೆ ಇರುವುದು ಒಂದು ಕಾರಣವಾದರೆ, ತಮಗೆ ಬೇಕಾಗಿರುವ ಹೊಸ ಪದಗಳನ್ನು ಉಂಟುಮಾಡುವ ಅಳವು ಕನ್ನಡಕ್ಕಿಲ್ಲ ಎಂಬ ತಪ್ಪು ಕಲ್ಪನೆ ಇನ್ನೊಂದು ಕಾರಣ. ಸಂಸ್ಕ್ರುತದಲ್ಲಿರುವಶ್ಟು ಒಟ್ಟು(ಪ್ರತ್ಯಯ)ಗಳು ಮತ್ತು ಪದಗಳು ಕನ್ನಡದಲ್ಲಿಲ್ಲ; ಹಾಗಾಗಿ, ಹಲವು ಬಗೆಯ ಪದಗಳನ್ನು ಹೊಸದಾಗಿ ಉಂಟುಮಾಡುವಲ್ಲಿ ಸಂಸ್ಕ್ರುತದ ಮೊರೆಹೊಗದೆ ಬೇರೆ ದಾರಿಯೇ ಇಲ್ಲ ಎಂಬ ಅನಿಸಿಕೆ ಹಲವರಲ್ಲಿದೆ.

ಆದರೆ, ಇದು ತಪ್ಪು ಅನಿಸಿಕೆ. ಎಂತಹ ವಿಶಯವನ್ನು ಬೇಕಿದ್ದರೂ ತಿಳಿಸಲು ಬೇಕಾಗುವಂತಹ ಪದಗಳನ್ನು ಮತ್ತು ಸೊಲ್ಲುಗಳನ್ನು ಉಂಟುಮಾಡುವ ಅಳವು ಕನ್ನಡಕ್ಕಿದೆ. ಎಲ್ಲಾ ಸ್ವಾಬಾವಿಕವಾಗಿ ಬೆಳೆದುಬಂದ ನುಡಿಗಳಿಗೂ ಇಂತಹ ಅಳವು ಇರುತ್ತದೆ. ಕನ್ನಡದ ಈ ಅಳವು ಎಂತಹದು ಎಂಬುದನ್ನು ಸರಿಯಾಗಿ ತಿಳಿದುಕೊಂಡು, ಅದನ್ನು ಬಳಸಿ, ಕನ್ನಡಕ್ಕೆ ಬೇಕಾಗಿರುವ ಹೊಸ ಪದಗಳನ್ನು ಕನ್ನಡದಲ್ಲೇನೇ ಉಂಟುಮಾಡಲು ಬರುತ್ತದೆ. ಅಂತಹ ಹೊಸ ಪದಗಳಿರುವ ಬರವಣಿಗೆಯನ್ನು ಹೆಚ್ಚು ಹೆಚ್ಚು ಕನ್ನಡಿಗರು ಸುಲಬವಾಗಿ ಓದಿ ತಿಳಿದುಕೊಳ್ಳಬಲ್ಲರು, ಮತ್ತು ಬರವಣಿಗೆಯ ಮೂಲಕ ನಡೆಯುವ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲೂ ಬಲ್ಲರು. ಬರವಣಿಗೆಯ ಗುರಿಯೇ ಇದಲ್ಲವೆ?

ಎಲ್ಲಾ ನುಡಿಗಳಿಗೂ ಅವುಗಳದೇ ಆದ ಪದಗಳ ಸೊಗಡು ಎಂಬುದಿರುತ್ತದೆ; ಕನ್ನಡ ಪದಗಳ ಸೊಗಡು ಸಂಸ್ಕ್ರುತ ಪದಗಳ ಸೊಗಡಿಗಿಂತ ತೀರ ಬೇರಾಗಿದೆ. ಕನ್ನಡ ಬರಹದಲ್ಲಿ ಹೆಚ್ಚು ಹೆಚ್ಚು ಸಂಸ್ಕ್ರುತ ಪದಗಳನ್ನು ಬಳಸಿದಂತೆಲ್ಲ, ಅದರ ಪದಗಳ ಸೊಗಡು ಮರೆಯಾಗುತ್ತಾ ಹೋಗುತ್ತದೆ, ಮತ್ತು ಅದನ್ನು ಓದಿ ತಿಳಿಯುವ ಕೆಲಸ ಕನ್ನಡಿಗರಿಗೆ ಹೆಚ್ಚು ಹೆಚ್ಚು ತೊಡಕಿನದಾಗುತ್ತಾ ಹೋಗುತ್ತದೆ.

ಹಾಗಾಗಿ, ಕನ್ನಡ ಬರಹಗಳಲ್ಲಿ ಹೆಚ್ಚು ಹೆಚ್ಚು ಎರವಲು ಪದಗಳನ್ನು ಬಳಸಹೋಗದೆ, ಅದರ ಪದಗಳ ಸೊಗಡನ್ನು ಉಳಿಸಿಕೊಳ್ಳಬೇಕು ಎನ್ನುವುದು ಬರಿಯ ಅಬಿಮಾನದ ಪ್ರಶ್ನೆ ಮಾತ್ರ ಅಲ್ಲ; ಕನ್ನಡ ಬರಹ ಎಲ್ಲಾ ಕನ್ನಡಿಗರನ್ನೂ ತಲಪಬೇಕು ಮತ್ತು ಎಲ್ಲಾ ಕನ್ನಡಿಗರಿಂದಲೂ ಹೊರಬರಬೇಕೆಂಬ ಮುಕ್ಯವಾದ ಗುರಿಯನ್ನು ಮುಟ್ಟುವ ಪ್ರಶ್ನೆಯೂ ಹೌದು.

ಇತ್ತೀಚೆಗೆ ಕನ್ನಡದಲ್ಲಿ ಅರಿಮೆಯ (ಪಾರಿಬಾಶಿಕ) ಪದಗಳನ್ನು ಉಂಟುಮಾಡುವವರು ಈ ವಿಶಯವನ್ನು ಪೂರ‍್ತಿ ಮರೆತಿರುವಂತೆ ಕಾಣುತ್ತದೆ. ಕನ್ನಡದವೇ ಆದ ಪದಗಳು ಅವರ ಕಣ್ಣಿಗೆ ಕಾಣಿಸದೆ ಹೋಗುತ್ತಿವೆ. ಅವರು ಉಂಟುಮಾಡಿರುವ ಪದಕೋಶಗಳಲ್ಲಿ ನೂರಕ್ಕೆ ತೊಂಬತ್ತರಶ್ಟು ಸಂಸ್ಕ್ರುತದಿಂದ ಎರವಲು ಪಡೆದ, ಇಲ್ಲವೇ ಸಂಸ್ಕ್ರುತದಲ್ಲಿ ಹೊಸದಾಗಿ ಉಂಟುಮಾಡಿ ಕನ್ನಡಕ್ಕೆ ಎರವಲು ತಂದ ಪದಗಳೇ ಕಾಣಿಸಿಕೊಳ್ಳುತ್ತವೆ; ಇಂತಹ ಪದಕೋಶಗಳನ್ನು ಕನ್ನಡ ಪದಕೋಶಗಳೆಂದು ಕರೆಯುತ್ತಿರುವುದು ನಿಜಕ್ಕೂ ಅಚ್ಚರಿಯ ವಿಶಯವಾಗಿದೆ!

ಇಂಗ್ಲಿಶ್‌ನಲ್ಲಿರುವ ಹಲವು ಅರಿಮೆಯ ಪದಗಳು ಕನ್ನಡದ ಸೊಲ್ಲುಗಳಲ್ಲಿ ಸರಿಯಾಗಿ ಹೊಂದಿಕೊಳ್ಳುವುದಿಲ್ಲ, ಅವನ್ನು ಬಳಸಿದ ಸೊಲ್ಲುಗಳು ಸಿಕ್ಕಲು ಸಿಕ್ಕಲಾಗಿ ಕಾಣಿಸಿಕೊಳ್ಳುತ್ತವೆ, ಮತ್ತು ಅವನ್ನು ಓದಿ ತಿಳಿದುಕೊಳ್ಳುವ ಕೆಲಸ ಕನ್ನಡಿಗರಿಗೆ ತುಂಬಾ ತೊಡಕಿನದಾಗುತ್ತದೆ. ಹಾಗಾಗಿ, ನಾವು ಅವುಗಳ ಬದಲು ಬೇರೆ ಕನ್ನಡದವೇ ಆದ ಅರಿಮೆಯ ಪದಗಳನ್ನು ಉಂಟುಮಾಡಲು ಹೋಗುತ್ತೇವೆ.

ಆದರೆ, ಹಾಗೆ ಪದಗಳನ್ನು ಉಂಟುಮಾಡಬೇಕಿರುವಲ್ಲಿ ಕನ್ನಡದವೇ ಆದ ಪದಗಳನ್ನು ಬಳಸುವ ಬದಲು ಸಂಸ್ಕ್ರುತ ಪದಗಳನ್ನು ಬಳಸಿದೆವಾದರೆ, ನಮ್ಮವೇ ಆದ ಪದಗಳನ್ನು ಉಂಟುಮಾಡುವುದರ ಹಿಂದಿರುವ ಮುಕ್ಯವಾದ ಗುರಿಯನ್ನು ನಾವು ತಲಪುವುದೇ ಇಲ್ಲ. ಯಾಕೆಂದರೆ, ಇಂಗ್ಲಿಶ್ ಎರವಲುಗಳ ಹಾಗೆ ಹಲವು ಸಂಸ್ಕ್ರುತ ಎರವಲುಗಳೂ ಕನ್ನಡದ ಸೊಲ್ಲುಗಳಲ್ಲಿ ಸರಿಯಾಗಿ ಹೊಂದಿಕೊಳ್ಳುವುದಿಲ್ಲ, ಮತ್ತು ಅವನ್ನು ಬಳಸಿದ ಸೊಲ್ಲುಗಳು ಸಿಕ್ಕಲು ಸಿಕ್ಕಲಾಗಿಯೇ ಉಳಿಯುತ್ತವೆ. ಅವನ್ನು ಓದಿ, ಅವು ತಿಳಿಸುವ ವಿಶಯಗಳನ್ನು ತಿಳಿದುಕೊಳ್ಳುವ ಕೆಲಸವೂ ತುಂಬಾ ತೊಡಕಿನದಾಗಿಯೇ ಉಳಿಯುತ್ತದೆ.

ಸಂಸ್ಕ್ರುತ ಪದಗಳನ್ನು ಬಳಸಿ ಪಳಗಿರುವ ಕನ್ನಡ ಬರಹಗಾರರಿಗೆ ಮತ್ತು ಓದುಗರಿಗೆ ತುಂಬಾ ಸಂಸ್ಕ್ರುತ ಪದಗಳನ್ನು ಬಳಸಿರುವ ಬರಹಗಳೂ ಅಶ್ಟೊಂದು ತೊಡಕಿನವೆಂದು ಅನಿಸದಿರಬಹುದು. ಇದಕ್ಕೆ ಕಾರಣವೇನೆಂದರೆ, ಅವರು ಕನ್ನಡ ಪದಗಳ ಸೊಗಡನ್ನು ಮಾತ್ರವಲ್ಲದೆ ಸಂಸ್ಕ್ರುತ ಪದಗಳ ಸೊಗಡನ್ನೂ ತಮ್ಮದಾಗಿಸಿಕೊಂಡಿರುತ್ತಾರೆ.

ಆದರೆ, ಹೆಚ್ಚಿನ ಕನ್ನಡಿಗರಿಗೂ ಅಂತಹ ಬರಹಗಳು ತೊಡಕಿನವಾಗಿ ಕಾಣಿಸುತ್ತವೆ; ಅವರ ಆಡುನುಡಿಗಳಲ್ಲಿ ತುಂಬಾ ಕಡಿಮೆ ಸಂಸ್ಕ್ರುತ ಎರವಲುಗಳು ಬಳಕೆಯಾಗುತ್ತಿರುವುದು, ಮತ್ತು ಹಾಗೆ ಬಳಕೆಯಾಗುತ್ತಿರುವವೂ ಕನ್ನಡ ಪದಗಳ ಸೊಗಡಿಗೆ ಹೊಂದಿಕೆಯಾಗುವಂತೆ ಮಾರ‍್ಪಟ್ಟಿರುವುದು ಇದಕ್ಕೆ ಕಾರಣ.

ಹಾಗಾಗಿ, ಕನ್ನಡ ಬರಹಗಳು ಎಲ್ಲಾ ಕನ್ನಡಿಗರನ್ನೂ ತಲಪಬೇಕಿದ್ದಲ್ಲಿ, ಮತ್ತು ಎಲ್ಲಾ ಕನ್ನಡಿಗರಿಂದಲೂ ಹೊರಹೊಮ್ಮಬೇಕಿದ್ದಲ್ಲಿ, ಅವುಗಳಲ್ಲಿ ಬಳಕೆಯಾಗುವ ಎರವಲು ಪದಗಳನ್ನು, ಅವು ಸಂಸ್ಕ್ರುತದವಿರಲಿ ಇಲ್ಲವೇ ಇಂಗ್ಲಿಶಿನವಿರಲಿ, ಆದಶ್ಟು ಕಡಿಮೆ ಮಾಡಲು ಪ್ರಯತ್ನಿಸಬೇಕು, ಮತ್ತು ಬಳಸಲೇಬೇಕೆಂದಿರುವವು ಕನ್ನಡದ ಸೊಗಡನ್ನು ಕೆಡಿಸದಂತೆ ಅವುಗಳಲ್ಲಿ ಮಾರ‍್ಪಾಡುಗಳನ್ನು ಮಾಡಿಕೊಳ್ಳಬೇಕು.

ಎಲ್ಲಾ ಮಟ್ಟದ ಬಳಕೆಗಳಿಗೂ ಕನ್ನಡ ಪದಗಳು ತಕ್ಕುದಾದುವು ಎಂಬುದನ್ನು ಕನ್ನಡದ ಬರಹಗಾರರು ಮತ್ತು ಕನ್ನಡದಲ್ಲಿ ಹೊಸ ಪದಗಳನ್ನು ಉಂಟುಮಾಡುವವರು ಮನಗಾಣಬೇಕು, ಮತ್ತು ಮೇಲ್ಮಟ್ಟದ ಬಳಕೆಗಳಿಗೆ ಕನ್ನಡದವೇ ಆದ ಪದಗಳನ್ನು ಬಳಸುವುದು ಹೆಮ್ಮೆಯ ವಿಶಯವಶ್ಟೇ ಅಲ್ಲ, ಬರವಣಿಗೆಯ ಮುಕ್ಯ ಗುರಿಯನ್ನು ಮುಟ್ಟುವ ಬಗೆಯೂ ಹೌದೆಂಬ ಅನಿಸಿಕೆ ಅವರಲ್ಲಿ ಬೆಳೆದುಬರಬೇಕು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 3: ಪದಗಳನ್ನು ಓದುವ ಹಾಗೆಯೇ ಬರೆಯಬೇಕು

ದಿನಾಂಕ: 2014-04-14
ಮೂಲ URL: https://dnshankarabhat.net/%e0%b2%aa%e0%b2%a6%e0%b2%97%e0%b2%b3%e0%b2%a8%e0%b3%8d%e0%b2%a8%e0%b3%81-%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86/

ನುಡಿಯರಿಮೆಯ ಇಣುಕುನೋಟ – 3

ಕನ್ನಡದಲ್ಲಿ ಕನ್ನಡದವೇ ಆದ ಪದಗಳನ್ನು ಓದುವ ಹಾಗೆಯೇ ಬರೆಯುತ್ತೇವೆ; ಆದರೆ, ಸಂಸ್ಕ್ರುತದಿಂದ ಎರವಲು ಪಡೆದ ಪದಗಳನ್ನು ಮಾತ್ರ ಓದುವ ಹಾಗೆ ಬರೆಯದೆ, ಹೆಚ್ಚುಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯುತ್ತೇವೆ: ವಿಶೇಶ ಎಂಬುದಾಗಿ ಓದಿದರೂ ವಿಶೇಷ ಎಂಬುದಾಗಿ ಬರೆಯುತ್ತೇವೆ, ಮತ್ತು ಅದಿಕಾರಿ ಎಂಬುದಾಗಿ ಓದಿದರೂ ಅಧಿಕಾರಿ ಎಂಬುದಾಗಿ ಬರೆಯುತ್ತೇವೆ.

ಸಂಸ್ಕ್ರುತವನ್ನು ಹೊರತುಪಡಿಸಿ ಬೇರೆ ನುಡಿಗಳಿಂದ ಎರವಲು ಪಡೆದ ಪದಗಳನ್ನೆಲ್ಲ ಓದುವ ಹಾಗೆ ಬರೆಯುತ್ತೇವಲ್ಲದೆ, ಆ ನುಡಿಗಳಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ. ಇಂಗ್ಲಿಶ್‌ನ ವಯ್ಪರ್ ಮತ್ತು ವಯ್ರಸ್ ಪದಗಳ ಮೊದಲ ಬರೆಗೆಗಳು ಇಂಗ್ಲಿಶ್‌ನಲ್ಲಿ ಬೇರಾಗಿವೆ, ಆದರೆ ಕನ್ನಡದಲ್ಲಿ ವ ಎಂಬ ಒಂದೇ ಬರಿಗೆಯನ್ನು ಬಳಸಲಾಗುತ್ತದೆ. ಅವೆರಡನ್ನೂ ಒಂದೇ ರೀತಿ ಓದುತ್ತಿರುವುದೇ ಇದಕ್ಕೆ ಕಾರಣ.

ಒಂದು ಬರಹದಲ್ಲಿ ಪದಗಳನ್ನು ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಬರೆಯಬೇಕಾಗಿದೆಯಾದರೆ, ಅದು ಅಂತಹ ಬರಹವನ್ನು ಕಲಿಯುವವರಿಗೆ ಮತ್ತು ಬಳಸುವವರಿಗೆ ಹಲವು ಬಗೆಯ ತೊಡಕುಗಳನ್ನು ತಂದೊಡ್ಡುತ್ತದೆ; ಕನ್ನಡ ಬರಹದ ಈ ಸಂಪ್ರದಾಯ ಮುಕ್ಯವಾಗಿ ಕೆಳಗೆ ಕೊಟ್ಟಿರುವಂತಹ ತೊಡಕುಗಳನ್ನು ಕೊಡುತ್ತಿದೆ:

(೧) ಓದಲು ಮತ್ತು ಬರೆಯಲು ಕಲಿಯಹೊರಡುವ ಮಕ್ಕಳು ಅನವಶ್ಯಕವಾಗಿ ಹದಿನೇಳು ಹೆಚ್ಚಿನ ಬರಿಗೆ(ಅಕ್ಶರ)ಗಳನ್ನು ಕಲಿಯಬೇಕಾಗುತ್ತದೆ.

(೨) ಸರಿಯಾಗಿ ಮತ್ತು ಸಲೀಸಾಗಿ ಓದಲು ಕಲಿಯಬೇಕಿದ್ದಲ್ಲಿ, ಪದಗಳನ್ನು ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ (ಎತ್ತುಗೆಗೆ, ಮನೆ ಎಂಬುದನ್ನು ಮ್, ಅ, ನ್ ಮತ್ತು ಎ ಎಂಬ ಉಲಿಗಳ ಜೋಡಣೆಯಿಂದ ಉಂಟುಮಾಡಲಾಗಿದೆ) ಎಂಬುದನ್ನು ಗಮನಿಸಬೇಕು, ಮತ್ತು ಈ ಉಲಿಗಳನ್ನು ಸೂಚಿಸುವುದಕ್ಕಾಗಿ ಬರಹದಲ್ಲಿ ಬರಿಗೆಗಳನ್ನು ಬಳಸಲಾಗುತ್ತದೆ ಎಂಬುದನ್ನೂ ಗಮನಿಸಬೇಕು. ಇವೆರಡನ್ನು ಗಮನಿಸಿದವರು ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗಲೂ ಅವನ್ನು ಸುಲಬವಾಗಿ ಓದಬಲ್ಲವರಾಗುತ್ತಾರೆ.

ಪದಗಳನ್ನು ಓದುವ ಹಾಗೆಯೇ ಬರೆದಿದೆಯಾದರೆ ಮಾತ್ರ, ಈ ರೀತಿ ಓದುವಾಗ ಬಳಸುವ ಉಲಿಗೂ ಬರಹದಲ್ಲಿ ಕಾಣಿಸುವ ಬರಿಗೆಗಳಿಗೂ ನಡುವೆ ಸಂಬಂದವಿದೆ ಎಂಬುದು ಓದಲು ಕಲಿಯುವವರ ಗಮನಕ್ಕೆ ಸುಲಬವಾಗಿ ಬರುತ್ತದೆ.

ಓದುವ ಹಾಗೆ ಬರೆಯದೆ ಬೇರೆ ಬಗೆಯಲ್ಲಿ ಪದಗಳನ್ನು ಬರೆದಿದೆಯಾದರೆ, ಅವುಗಳಲ್ಲಿ ಬರುವ ಬರಿಗೆಗಳಿಗೂ ಉಲಿಗಳಿಗೂ ನಡುವೆ ಇಂತಹದೊಂದು ಸಂಬಂದವಿದೆಯೆಂಬುದು ಹೆಚ್ಚಿನವರ ಗಮನಕ್ಕೂ ಬರುವುದೇ ಇಲ್ಲ, ಮತ್ತು ಇದರಿಂದಾಗಿ ಎಶ್ಟು ಕಲಿತರೂ ಅವರಿಗೆ ಸಲೀಸಾಗಿ ಓದಲು ಬರುವುದೇ ಇಲ್ಲ. ಬರಹದಲ್ಲಿ ಹೊಸ ಹೊಸ ಪದಗಳು ಬಂದಾಗ ಅವನ್ನು ಹೇಗೆ ಓದಬೇಕೆಂಬುದು ಅವರಿಗೆ ಗೊತ್ತಾಗುವುದೂ ಇಲ್ಲ.

(೩) ಓದುವ ಹಾಗೆ ಬರೆಯುವ ಪದಗಳನ್ನು ಬರಹಗಳಲ್ಲಿ ಬಳಸುವುದು ಸುಲಬ; ಬೇರೆ ಬಗೆಯಲ್ಲಿ ಬರೆಯುವ ಒಂದೊಂದು ಪದವನ್ನೂ ಅದನ್ನು ಬರೆಯುವುದು ಹೇಗೆ ಎಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಮನೆ ಎಂಬ ಪದವನ್ನು ಓದುವ ಹಾಗೆಯೇ ಬರೆಯುವ ಕಾರಣ, ಅದನ್ನು ಹೇಗೆ ಬರೆಯುವುದೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗಿಲ್ಲ.

ಆದರೆ, ವಿಶೇಷ ಎಂಬ ಪದವನ್ನು ಬರೆಯುವಾಗ ಎರಡನೆಯ ಮುಚ್ಚುಲಿಯನ್ನು ಶ್ ಎಂಬುದಾಗಿ, ಮತ್ತು ಮೂರನೆಯ ಮುಚ್ಚುಲಿಯನ್ನು ಷ್ ಎಂಬುದಾಗಿ ಬರೆಯಬೇಕೆಂಬುದನ್ನು ನೆನಪಿನಲ್ಲಿರಿಸಿಕೊಳ್ಳಬೇಕಾಗುತ್ತದೆ; ಯಾಕೆಂದರೆ, ಅವೆರಡನ್ನೂ ಒಂದೇ ರೀತಿಯಲ್ಲಿ ಓದಲಾಗುತ್ತದೆ.ಇದನ್ನು ನೆನಪಿನಲ್ಲಿಟ್ಟುಕೊಳ್ಳಲಾರದವರು ಬರವಣಿಗೆಯಲ್ಲಿ ತಪ್ಪು ಮಾಡುತ್ತಾರೆ.

ಇವತ್ತು ದಿನಪತ್ರಿಕೆಗಳಲ್ಲಿ, ಕತೆ-ಕಾದಂಬರಿಗಳಲ್ಲಿ, ಮತ್ತು ಬೇರೆ ಬಗೆಯ ಬರಹಗಳಲ್ಲಿ ಅತಿ ಹೆಚ್ಚು ತಪ್ಪುಗಳು ಕಾಣಿಸುವುದು ಓದುವ ಹಾಗೆ ಬರೆಯದಿರುವ ಮಹಾಪ್ರಾಣಾಕ್ಶರ, ಷಕಾರ, ಋಕಾರ ಮೊದಲಾದ ಬರಿಗೆಗಳಿರುವ ಸಂಸ್ಕ್ರುತ ಪದಗಳ ಬಳಕೆಯಲ್ಲಿ ಎಂಬುದನ್ನು ಗಮನಿಸಬಹುದು.

(೪) ಸಾಮಾನ್ಯವಾಗಿ ಜನರು ಪದಕೋಶಗಳನ್ನು ನೋಡಲು ಹೋಗುವುದು ಹೊಸದಾಗಿ ಅವರ ಓದಿನಲ್ಲಿ ಕಾಣಿಸಿಕೊಳ್ಳುವ ಪದಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಾಗಿ; ಆದರೆ, ಓದುವ ಹಾಗೆ ಬರೆಯದಿರುವ ವಿಶೇಷ, ಅಧಿಕಾರಿ ಮೊದಲಾದ ಪದಗಳನ್ನು ಅವುಗಳ ಹುರುಳೇನೆಂಬುದನ್ನು ತಿಳಿಯುವುದಕ್ಕಿಂತಲೂ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯುವುದಕ್ಕಾಗಿ ಪದಕೋಶಗಳನ್ನು ನೋಡಬೇಕಾಗುತ್ತದೆ. ಓದುವ ಹಾಗೆಯೇ ಬರೆಯುವ ಯಾವ ಪದವನ್ನೂ ಈ ರೀತಿ ಅವನ್ನು ಬರೆಯುವುದು ಹೇಗೆ ಎಂಬುದನ್ನು ತಿಳಿಯಲು ಪದಕೋಶವನ್ನು ನೋಡಬೇಕಾಗುವುದಿಲ್ಲ.

(೫) ಕೆಳವರ‍್ಗದ ಮಕ್ಕಳಲ್ಲಿ ಇಂತಹ ಪದಗಳ ಕಲಿಕೆ ಕೀಳರಿಮೆಯನ್ನು ಉಂಟುಮಾಡುತ್ತದೆ; ಅವು ಕೊಡುವ ತೊಂದರೆಯಿಂದಾಗಿ ಕೆಲವರು ಬರಹದ ಕಲಿಕೆಯನ್ನು ನಡುವಿನಲ್ಲೇ ನಿಲ್ಲಿಸಿಬಿಡುತ್ತಾರೆ. ಓದಲು ಕಲಿತವರೂ ಅದನ್ನು ತುಂಬಾ ಅಪರೂಪವಾಗಿ ಮಾತ್ರ ಬಳಸುತ್ತಾರೆ. ಯಾಕೆಂದರೆ, ಅವರಿಗೆ ಸಲೀಸಾಗಿ ಓದುವುದು ಹೇಗೆ ಎಂಬುದು ತಿಳಿದಿರುವುದಿಲ್ಲ.

ಸಮಾಜಗಳಲ್ಲಿ ಹಲವಾರು ಬಗೆಯ ಸಂಪ್ರದಾಯಗಳು ಬೇರೆ ಬೇರೆ ಕಾರಣಗಳಿಗಾಗಿ ಬಳಕೆಗೆ ಬರುತ್ತವೆ, ಮತ್ತು ಅವುಗಳಿಂದ ಸಮಾಜಕ್ಕೆ ಪ್ರಯೋಜನಗಳೇನೂ ಇಲ್ಲದಿದ್ದರೂ, ಹೆಚ್ಚಿನ ತೊಂದರೆಯಿಲ್ಲವಾದಲ್ಲಿ ಅವು ಹಾಗೆಯೇ ವರ‍್ಶಗಟ್ಟಲೆ ಸಮಯ ಮುಂದುವರಿಯುತ್ತಿರುತ್ತವೆ.

ಸಂಸ್ಕ್ರುತದ ಎರವಲು ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬುದೂ ಇಂತಹದೇ ಒಂದು ಸಂಪ್ರದಾಯ. ಅದರಿಂದ ಕನ್ನಡ ಬರಹದ ಮಟ್ಟಿಗೆ ಯಾವ ಪ್ರಯೋಜನವೂ ಇಲ್ಲ. ಹಳೆಗನ್ನಡದ ಸಮಯದಲ್ಲಿ ಇಂತಹ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯಬಹುದಿತ್ತು, ಇಲ್ಲವೇ ಕನ್ನಡದ ಸೊಗಡನ್ನು ಕೆಡಿಸದಂತೆ ಅವನ್ನು ಮಾರ‍್ಪಡಿಸಿ ತದ್ಬವಗಳನ್ನಾಗಿ ಮಾಡಿಯೂ ಬಳಸಬಹುದಿತ್ತು. ಆಂಡಯ್ಯನ ಕಬ್ಬಿಗರ ಕಾವದಲ್ಲಿ ಅಂತಹ ತದ್ಬವ ಪದಗಳನ್ನು ಮಾತ್ರ ಬಳಸಲಾಗಿದೆ.

ಆದರೆ, ಇವತ್ತು ಹೊಸಗನ್ನಡದಲ್ಲಿ ಬರಹಗಾರರು ಈ ಆಯ್ಕೆಯನ್ನು ಕಳೆದುಕೊಂಡಿದ್ದಾರೆ. ಬಳಕೆಯಲ್ಲಿರುವ ಕೆಲವೇ ಕೆಲವು ತದ್ಬವ ಪದಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸಂಸ್ಕ್ರುತ ಪದಗಳನ್ನೂ ಇವತ್ತು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕಾಗಿದೆ. ಅವುಗಳಲ್ಲಿ ಯಾವುದೇ ಬಗೆಯ ಮಾರ‍್ಪಾಡನ್ನು ನಡೆಸಿದರೂ ಅದನ್ನು ತಪ್ಪೆಂದು ತಿಳಿಯಲಾಗುತ್ತದೆ.

ಮೊನ್ನೆ ಮೊನ್ನೆಯ ವರೆಗೂ ಈ ಸಂಪ್ರದಾಯ ಹೆಚ್ಚಿನ ತೊಂದರೆಯನ್ನೇನೂ ಕೊಡುತ್ತಿರಲಿಲ್ಲ. ಯಾಕೆಂದರೆ, ಸಮಾಜದಲ್ಲಿ ಮೇಲ್ವರ‍್ಗಕ್ಕೆ ಸೇರಿದ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಬಳಸಬೇಕಾಗಿತ್ತು, ಮತ್ತು ಅವರಲ್ಲಿ ಹೆಚ್ಚಿನವರೂ ಕನ್ನಡದೊಂದಿಗೆ ಸಂಸ್ಕ್ರುತವನ್ನೂ ಕಲಿಯುತ್ತಿದ್ದರು; ಹಾಗಾಗಿ, ಈ ಸಂಪ್ರದಾಯವನ್ನು ಮುಂದುವರಿಸಿಕೊಂಡುಹೋಗುವುದು ಅವರಿಗೆ ತೊಡಕಿನದಾಗಿರಲಿಲ್ಲ.

ಆದರೆ, ಇವತ್ತು ಎಲ್ಲಾ ವರ‍್ಗದ ಜನರು ಮತ್ತು ಎಲ್ಲರೂ ಬರಹವನ್ನು ಬಳಸಬೇಕಾಗಿದೆ. ಯಾಕೆಂದರೆ, ಇವತ್ತು ಸಮಾಜದಲ್ಲಿ ಬರಹಕ್ಕೆ ಅಂತಹದೊಂದು ಪ್ರಾಮುಕ್ಯತೆ ಬಂದಿದೆ. ಬರಹವನ್ನು ಬಳಸಲು ತಿಳಿಯದವರು ಮುಂದೆ ಬರಲು ಸಾದ್ಯವೇ ಇಲ್ಲ, ಮತ್ತು ಅಂತಹ ಹಲವು ಮಂದಿ ಜನರಿರುವ ಸಮಾಜ ಏಳಿಗೆಯಾಗಲೂ ಸಾದ್ಯವೇ ಇಲ್ಲ ಎಂಬ ಪರಿಸ್ತಿತಿ ಇವತ್ತಿನದಾಗಿದೆ.

ಈ ರೀತಿ ಕನ್ನಡ ಬರಹವನ್ನು ಬಳಸಲು ಕಲಿಯಲೇ ಬೇಕಾಗಿರುವ ಜನರಲ್ಲಿ ಹೆಚ್ಚಿನವರಿಗೂ ಸಂಸ್ಕ್ರುತದ ಅರಿವು ಬೇಕಾಗಿಲ್ಲ; ಅದಕ್ಕಿಂತಲೂ ಅವರಿಗೆ ಇಂಗ್ಲಿಶ್ ನುಡಿಯ ಅರಿವು ಹೆಚ್ಚಿನ ನೆರವು ನೀಡಬಲ್ಲುದು. ಹಾಗಾಗಿ, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕೆಂಬ ಮೇಲಿನ ಸಂಪ್ರದಾಯ ಒಂದು ಹೆಚ್ಚಿನ ತೊಡಕನ್ನು ಮಾತ್ರ ತಂದೊಡ್ಡುತ್ತದಲ್ಲದೆ, ಅದರಿಂದ ಅವರು ಪಡೆಯಬಹುದಾದ ಪ್ರಯೋಜನ ಯಾವುದೂ ಇಲ್ಲ.

ಈ ರೀತಿ ಕನ್ನಡದ ಮಟ್ಟಿಗೆ ಯಾವ ಪ್ರಯೋಜನವನ್ನೂ ನೀಡದ, ಹಲವು ಮಂದಿ ಕನ್ನಡಿಗರಿಗೆ ತೊಡಕನ್ನು ಮಾತ್ರವೇ ಕೊಡುವ, ಮತ್ತು ನಮ್ಮ ಸಮಾಜದ ಏಳಿಗೆಗೂ ತೊಡಕಾಗಿರುವ ಈ ಸಂಪ್ರದಾಯವನ್ನು ಬಿಟ್ಟುಕೊಡುವುದೇ ಜಾಣತನ. ಇದು ಒಂದೂವರೆ-ಎರಡು ಸಾವಿರ ವರ‍್ಶದ ಹಿಂದಿನ ಸಮಾಜಕ್ಕಾಗಿ ಮಾಡಿಕೊಂಡಿದ್ದ ಸಂಪ್ರದಾಯ. ಇಂದಿನ ಸಮಾಜ ಆಗಿನದಕ್ಕಿಂತ ತೀರ ಬೇರೆಯಾಗಿದೆ. ಹೀಗಿರುವಾಗಲೂ ಆ ಹಳೆಯ ಸಂಪ್ರದಾಯವನ್ನು ತೊರೆಯಲು ಹಿಂಜರಿಯುವುದೆಂದರೆ, ಅಪ್ಪ ನೆಟ್ಟ ಆಲದ ಮರವೆಂದು ನೇಣು ಹಾಕಿಕೊಳ್ಳುವ ಹಾಗೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 10: ಓದುವ ಹಾಗೆಯೇ ಬರೆಯುವುದು

ದಿನಾಂಕ: 2014-04-14
ಮೂಲ URL: http://dnshankarabhat.net/%e0%b2%93%e0%b2%a6%e0%b3%81%e0%b2%b5-%e0%b2%b9%e0%b2%be%e0%b2%97%e0%b3%86%e0%b2%af%e0%b3%87-%e0%b2%ac%e0%b2%b0%e0%b3%86%e0%b2%af%e0%b3%81%e0%b2%b5%e0%b3%81%e0%b2%a6%e0%b3%81/

ನುಡಿಯರಿಮೆಯ ಇಣುಕುನೋಟ – 10

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡ ಬರಹಗಳಲ್ಲಿ ಓದುವ ಹಾಗೆಯೇ ಬರೆಯಬೇಕು ಎಂದು ಹೇಳಿದರೆ, ಎಲ್ಲರೂ ಅವರವರು ಹೇಗೆ ಓದುತ್ತಾರೋ ಹಾಗೆ ಬರೆಯಬಹುದು, ಇಲ್ಲವೇ ಎಲ್ಲರೂ ತಮಗೆ ಕುಶಿಬಂದ ಹಾಗೆ ಬರೆಯಬಹುದು ಎಂದು ಹೇಳಿದ ಹಾಗಾಗುವುದಿಲ್ಲ; ಅಂತಹ ಪ್ರತಿಕ್ರಿಯೆ ಬಾರದಂತೆ ನಾನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೋ ಹಾಗೆ ಬರೆಯಬೇಕು ಎಂಬುದಾಗಿ ಬರೆದಿದ್ದೆ. ಈ ಪದಗಳನ್ನು ಇವತ್ತು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಿದ್ದಾರೆ ಎಂಬುದನ್ನು ತಿಳಿವಿಗರು ಕಂಡುಹಿಡಿಯಬೇಕು, ಮತ್ತು ಅದಕ್ಕೆ ಅನುಸಾರವಾಗಿ, ಅವನ್ನು ಹೇಗೆ ಬರೆಯಬೇಕು ಎಂಬುದನ್ನು ತೀರ‍್ಮಾನಿಸಬೇಕು.

ಬರಹದ ಮೂಲಕ ನಾವು ನಮ್ಮ ಅನಿಸಿಕೆಗಳನ್ನು ಇನ್ನೊಬ್ಬರಿಗೆ ತಿಳಿಸುತ್ತೇವೆ, ಮತ್ತು ಬರಹ ರೂಪದಲ್ಲಿರುವ ಇನ್ನೊಬ್ಬರ ಅನಿಸಿಕೆಗಳನ್ನು ಓದಿನ ಮೂಲಕ ತಿಳಿದುಕೊಳ್ಳುತ್ತೇವೆ. ಈ ಎರಡು ಕೆಲಸಗಳೂ ಸರಿಯಾಗಿ ನಡೆಯಬೇಕಿದ್ದಲ್ಲಿ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವ ಮತ್ತು ಓದುವ ಕೆಲಸಗಳನ್ನು ನಡೆಸಬೇಕಾಗುತ್ತದೆ. ಈ ಕೆಲಸಗಳನ್ನು ಇವತ್ತು ಶಾಲೆಗಳಲ್ಲಿ ಕಲಿಸಲಾಗುತ್ತದೆಯಾದ ಕಾರಣ, ಎಲ್ಲರೂ ಹೆಚ್ಚುಕಡಿಮೆ ಒಂದೇ ಬಗೆಯಲ್ಲಿ ಬರೆಯುವಂತೆ ಮತ್ತು ಓದುವಂತೆ ಮಾಡುವುದು ತೊಡಕಿನ ಕೆಲಸವೇನಲ್ಲ.

ಶಕಾರವನ್ನು ಹೆಚ್ಚಿನ ಕನ್ನಡಿಗರೂ ಶಕಾರವಾಗಿಯೇ ಓದುತ್ತಾರಲ್ಲದೆ ಸಕಾರವಾಗಿ ಬದಲಾಯಿಸಿ ಓದುವುದಿಲ್ಲ. ಆದರೆ, ಷಕಾರವನ್ನು ಹೆಚ್ಚಿನವರೂ ಶಕಾರವಾಗಿ ಬದಲಾಯಿಸಿ ಓದುತ್ತಾರೆ. ಹಾಗಾಗಿ, ಸಂಸ್ಕ್ರುತ ಎರವಲುಗಳಲ್ಲಿ ಬರುವ ಷಕಾರವನ್ನು ಶಕಾರವಾಗಿ ಬದಲಾಯಿಸಿ ಬರೆಯಬೇಕು, ಮತ್ತು ಶಕಾರವನ್ನು ಹಾಗೆಯೇ ಉಳಿಸಬೇಕು ಎಂಬ ತೀರ‍್ಮಾನಕ್ಕೆ ಬರಬೇಕಾಗುತ್ತದೆ.

ಇದೇ ರೀತಿಯಲ್ಲಿ, ಋಕಾರ, ಮಹಾಪ್ರಾಣ, ವಿಸರ‍್ಗ ಮೊದಲಾದ ಬೇರೆ ಕೆಲವು ಬರಿಗೆಗಳ ವಿಶಯದಲ್ಲೂ ಹೆಚ್ಚಿನ ಕನ್ನಡಿಗರ ಓದು ಹೇಗಿದೆಯೆಂಬುದನ್ನು ಕಂಡುಹಿಡಿದು, ಅದಕ್ಕನುಸಾರವಾಗಿ ಬರವಣಿಗೆಯನ್ನು ಬದಲಾಯಿಸಬೇಕು. ಹೀಗೆ ಮಾಡಿದಲ್ಲಿ, ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಸುಲಬವಾಗಬಲ್ಲುದು, ಮತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗುವಂತೆ ಮಾಡುವ ಕೆಲಸವೂ ಸುಲಬವಾಗಬಲ್ಲುದು.

ಹಳೆಗನ್ನಡದ ಱಕಾರ ಮತ್ತು ೞಕಾರಗಳನ್ನು ಹೆಚ್ಚಿನ ಕನ್ನಡಿಗರೂ ಹೇಗೆ ಓದುತ್ತಾರೆ ಎಂಬುದನ್ನು ಗಮನಿಸಿ, ಹೊಸಗನ್ನಡವನ್ನು ಬರಹದಲ್ಲಿ ಬಳಸಲು ತೊಡಗಿದ ಕಾಲದಲ್ಲಿ ಅವನ್ನು ರಕಾರ ಮತ್ತು ಳಕಾರಗಳಾಗಿ ಬದಲಾಯಿಸಿ ಬರೆಯಲು ತೊಡಗಲಾಯಿತು. ಈ ಮಾರ‍್ಪಾಡನ್ನು ಮಾಡಿರದಿದ್ದರೆ, ಇವತ್ತು ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸ ಇನ್ನಶ್ಟು ತೊಡಕಿನದಾಗುತ್ತಿತ್ತು. ಸಂಸ್ಕ್ರುತ ಎರವಲುಗಳಲ್ಲಿ ಬರುವ ಬರಿಗೆಗಳನ್ನು ಓದುವ ಹಾಗೆ ಬರೆಯುವಂತೆ ಮಾರ‍್ಪಡಿಸುವುದೂ ಇಂತಹದೇ ಒಂದು ಕೆಲಸ ಎಂಬುದನ್ನು ಇಲ್ಲಿ ಗಮನಿಸಬೇಕು.

ಇಶ್ಟರ ವರೆಗೆ ಈ ಪದಗಳನ್ನು ಸಂಸ್ಕ್ರುತದಲ್ಲಿದ್ದ ಹಾಗೆಯೇ ಬರೆಯುತ್ತಿದ್ದುದಕ್ಕೆ ಎರಡು ಮುಕ್ಯ ಕಾರಣಗಳಿದ್ದುವು: ಹಿಂದಿನ ಕಾಲದಲ್ಲಿ ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದವರೆಲ್ಲ ಅದನ್ನು ಸಂಸ್ಕ್ರುತದಲ್ಲಿ ಬರೆದಿರಿಸುತ್ತಿದ್ದರು; ಹಾಗಾಗಿ, ಯಾವುದೇ ಒಂದು ವಿಶಯದಲ್ಲಿ ಹೊಸ ತಿಳಿವನ್ನು ಪಡೆಯಬೇಕಿದ್ದರೂ ಸಂಸ್ಕ್ರುತದ ಮೊರೆಹೊಗಬೇಕಾಗಿತ್ತು.

ಇದರಿಂದಾಗಿ ಸಂಸ್ಕ್ರುತ ಬರಹಕ್ಕೆ ಒಂದು ಬಗೆಯ ಮೇಲ್ಮೆ ಬಂದಿತ್ತು; ಅದರ ಪದಗಳನ್ನು ಕನ್ನಡದಲ್ಲಿಯೂ ಸಂಸ್ಕ್ರುತದಲ್ಲಿರುವ ಹಾಗೆಯೇ ಉಳಿಸಿಕೊಳ್ಳುವುದರಿಂದ, ಮುಂದೆ ಸಂಸ್ಕ್ರುತ ಬರಹಗಳನ್ನು ಓದಲು ಕಲಿಯುವ ಕೆಲಸ ಕನ್ನಡಿಗರಿಗೆ ಸುಲಬವಾಗಬಹುದಾಗಿತ್ತು. ಕನ್ನಡ ಓದಿನ ಕಲಿಕೆ ಮುಂದೆ ನಡೆಸಲೇಬೇಕಾಗಿದ್ದ ಸಂಸ್ಕ್ರುತ ಓದಿಗೆ ಒಂದು ಮೆಟ್ಟಲಾಗಬಹುದಾಗಿತ್ತು. ಇದು ಒಂದು ಕಾರಣ.

ಆದರೆ, ಇವತ್ತು ಹೊಸ ಹೊಸ ತಿಳಿವುಗಳನ್ನು ಕಂಡುಹಿಡಿದಿರುವವರು ಯಾರೂ ಅದನ್ನು ಸಂಸ್ಕ್ರುತದಲ್ಲಿ ಬರೆಯಲು ಹೋಗುವುದಿಲ್ಲ; ಹಾಗಾಗಿ, ಹಿಂದಿನ ಕಾಲದಲ್ಲಿ ಅದಕ್ಕಿದ್ದ ಮೇಲ್ಮೆ ಇಂದು ಉಳಿದಿಲ್ಲ, ಮತ್ತು ಅದರ ಪದಗಳನ್ನು ಅದರ ಬರಹಗಳಲ್ಲಿರುವ ಹಾಗೆ ಬರೆಯಲು ಕಲಿಯುವ ಅವಶ್ಯಕತೆಯೂ ಇವತ್ತು ಕನ್ನಡಿಗರಿಗಿಲ್ಲ.

ಹಿಂದಿನ ಕಾಲದಲ್ಲಿ ಕನ್ನಡ ಬರಹವನ್ನು ಕಲಿಯುವ ಮತ್ತು ಬಳಸುವ ಕೆಲಸವನ್ನು ಮುಕ್ಯವಾಗಿ ಉತ್ತರದಿಂದ ವಲಸೆಬಂದ ಮೇಲ್ವರ‍್ಗದ ಜನರು ನಡೆಸುತ್ತಿದ್ದರು; ಆರ‍್ಯರಾಗಿದ್ದ ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಆದರ ಮತ್ತು ಪೂಜ್ಯಬಾವಗಳಿದ್ದುವು. ಹಾಗಾಗಿ, ಅದರ ಪದಗಳನ್ನು ಮಾರ‍್ಪಡಿಸದೆ ಉಳಿಸುವುದು ಅವರ ಮಟ್ಟಿಗೆ ಅವಶ್ಯವಾಗಿತ್ತು. ಇದು ಇನ್ನೊಂದು ಕಾರಣ.

ಆದರೆ, ಇವತ್ತು ಎಲ್ಲಾ ವರ‍್ಗಗಳಿಗೆ ಸೇರಿದ ಕನ್ನಡಿಗರೂ ಕನ್ನಡ ಬರಹವನ್ನು ಬಳಸಲು ಕಲಿಯಬೇಕಾಗಿದೆ. ಇವರಲ್ಲಿ ಹೆಚ್ಚಿನವರೂ ದ್ರಾವಿಡ ಮೂಲದವರಾಗಿದ್ದು, ಅವರ ಮಟ್ಟಿಗೆ ಸಂಸ್ಕ್ರುತ ಪದಗಳನ್ನು ಮಾರ‍್ಪಡಿಸದೆ ಉಳಿಸಿಕೊಳ್ಳುವುದು ಅಂತಹ ಒಂದು ಪೂಜ್ಯವಾದ ವಿಶಯವೇ ಅಲ್ಲ; ಅದರಿಂದ ಅವರಿಗೆ ಬೇರೆ ಪ್ರಯೋಜನಗಳೂ ದೊರಕುವುದಿಲ್ಲ. ಹಾಗಾಗಿ, ಸಂಸ್ಕ್ರುತ ಎರವಲುಗಳನ್ನು ಕನ್ನಡದ ಸೊಗಡನ್ನು ಕೆಡಿಸದಂತೆ ಮಾರ‍್ಪಡಿಸುವುದಕ್ಕೆ ಹೆಚ್ಚಿನ ಕನ್ನಡಿಗರಿಂದಲೂ ವಿರೋದ ಬರಲಾರದು.

ಬೇರೆ ನುಡಿಗಳಿಂದ ಎರವಲಾಗಿ ಪಡೆದ ಪದಗಳನ್ನು ಯಾವ ನುಡಿಯಲ್ಲೂ ಆ ನುಡಿಯಲ್ಲಿರುವ ಹಾಗೆ ಬರೆಯಲು ಹೋಗುವುದಿಲ್ಲ; ಇದಕ್ಕೆ ಕೆಲವೇ ಕೆಲವು ಹೊರಪಡಿಕೆಗಳು ಮಾತ್ರ ಇವೆ. ಎತ್ತುಗೆಗಾಗಿ, ಸಂಸ್ಕ್ರುತ ಇಲ್ಲವೇ ಪ್ರಾಕ್ರುತ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಬ್ರಾಹ್ಮೀ ಲಿಪಿಯನ್ನು ಕನ್ನಡದಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಸಂಸ್ಕ್ರುತದ ಎರವಲುಗಳನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಸಂಸ್ಕ್ರುತ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.

ಇದೇ ರೀತಿಯಲ್ಲಿ, ಅರೇಬಿಕ್ ಬರವಣಿಗೆಗಳಿಗೆ ಬಳಕೆಯಾಗುತ್ತಿದ್ದ ಲಿಪಿಯನ್ನು ಟರ‍್ಕಿಶ್‌ನಂತಹ ಕೆಲವು ನುಡಿಗಳಿಗೆ ಅಳವಡಿಸುವಾಗ, ಅರೇಬಿಕ್ ಎರವಲುಗಳನ್ನು ಬರೆಯಲು ಬೇಕಾಗುವ ಕೆಲವು ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಾಯಿತು, ಮತ್ತು ಈ ಕಾರಣಕ್ಕಾಗಿ, ಈ ನುಡಿಗಳ ಬರಹಗಳಲ್ಲಿ ಅರೇಬಿಕ್ ಎರವಲುಗಳನ್ನು ಆ ನುಡಿಯಲ್ಲಿರುವ ಹಾಗೆಯೇ ಬರೆಯುವ ಹೊಲಬು ಬಳಕೆಗೆ ಬಂತು.

ಆದರೆ, ಎಲ್ಲಾ ನುಡಿಗಳೂ ಈ ರೀತಿ ಬೇರೊಂದು ನುಡಿಯ ಲಿಪಿಯನ್ನು ತಮ್ಮ ನುಡಿಗೆ ಅಳವಡಿಸಿಕೊಳ್ಳುವಾಗ ಆ ನುಡಿಯ ಪದಗಳನ್ನು ಅದರಲ್ಲಿರುವಂತೆ ಬರೆಯಲು ಬೇಕಾಗುವ ಹೆಚ್ಚಿನ ಬರಿಗೆಗಳನ್ನು ಉಳಿಸಿಕೊಳ್ಳಲಿಲ್ಲ; ಎತ್ತುಗೆಗಾಗಿ, ನಾಗರಿ ಲಿಪಿಯನ್ನು ಪಂಜಾಬಿ ನುಡಿಗೆ ಅಳವಡಿಸುವಾಗ, ಷಕಾರ, ಋಕಾರ, ಹಲವು ಬಗೆಯ ಒತ್ತುಬರಿಗೆಗಳು ಮೊದಲಾದುವನ್ನು ಉಳಿಸಿಕೊಂಡಿಲ್ಲ; ಈ ಕಾರಣಕ್ಕಾಗಿ, ಸಂಸ್ಕ್ರುತ ಎರವಲು ಪದಗಳನ್ನು ಇವತ್ತು ಪಂಜಾಬಿ ಬರಹದಲ್ಲಿ ಓದುವ ಹಾಗೆ ಬರೆಯಲಾಗುತ್ತದೆಯಲ್ಲದೆ ಸಂಸ್ಕ್ರುತದಲ್ಲಿರುವ ಹಾಗೆ ಬರೆಯುವುದಿಲ್ಲ.

ಮಲಯಾಳ ಬರಹದಲ್ಲೂ ಮೊದಲಿಗೆ ಮಹಾಪ್ರಾಣಾಕ್ಶರಗಳು, ಗಜಡದಬ ಮೊದಲಾದ ಆ ನುಡಿಗೆ ಬೇಡದಿರುವ ಹಲವು ಬರಿಗೆಗಳು ಇರಲಿಲ್ಲ; ಸಂಸ್ಕ್ರುತ ಬರಹಗಳನ್ನು ಬರೆಯಲು, ಮತ್ತು ಕೆಲವೊಮ್ಮೆ ಸಂಸ್ಕ್ರುತ ಪದಗಳನ್ನು ಮಲಯಾಳ ಬರಹಗಳಲ್ಲಿ ಬರೆಯಲು ಆ ಸಮಯದಲ್ಲಿ ಗ್ರಂತಲಿಪಿಯೆಂಬ ಬೇರೆಯೇ ಒಂದು ಲಿಪಿಯನ್ನು ಬಳಸಲಾಗುತ್ತಿತ್ತು.

ಆದರೆ, ಹದಿನೇಳನೇ ಶತಮಾನಕ್ಕಾಗುವಾಗ, ಮಲಯಾಳ ಸಾಹಿತ್ಯದಲ್ಲಿ ಬ್ರಾಹ್ಮಣರ ಪ್ರಾಬಲ್ಯ ಹೆಚ್ಚಾಯಿತು; ಇವರಿಗೆ ಸಂಸ್ಕ್ರುತದ ಮೇಲೆ ಹೆಚ್ಚಿನ ಒಲವಿದ್ದುದರಿಂದ, ಮತ್ತು ಇವರ ಬರಹಗಳಲ್ಲಿ ತುಂಬಾ ಸಂಸ್ಕ್ರುತ ಪದಗಳು ಬಳಕೆಯಾಗುತ್ತಿದ್ದುದರಿಂದ, ಇವರು ತಮ್ಮ ಮಲಯಾಳ ಬರಹಗಳಲ್ಲೂ ಗ್ರಂತ ಲಿಪಿಯನ್ನೇ ಬಳಸಲು ತೊಡಗಿದರು. ಇದರಿಂದಾಗಿ, ಇವತ್ತಿನ ಮಲಯಾಳ ಬರಹ ಕನ್ನಡ ಬರಹದ ಹಾಗೆಯೇ ಅನವಶ್ಯಕವಾಗಿ ತೊಡಕಿನದಾಗಿದೆ.

ಎಲ್ಲಾ ಜನರೂ ಬರಹಬಲ್ಲವರಾಗಬೇಕಿರುವ ಇವತ್ತಿನ ದಿನಗಳಲ್ಲಿ ಈ ರೀತಿ ಒಂದು ನುಡಿಯ ಬರವಣಿಗೆಗೆ ಅವಶ್ಯವಿಲ್ಲದ ಬರಿಗೆಗಳನ್ನು ಎರವಲು ಪದಗಳ ಬರವಣಿಗೆಗಾಗಿ ಉಳಿಸಿಕೊಳ್ಳುವುದು ಜಾಣತನವಲ್ಲ; ಇದನ್ನು ಮನಗಂಡ ತಿಳಿವಿಗರು ಟರ‍್ಕಿ, ಇಂಡೊನೇಶಿಯಾ, ಮಲಯೇಶಿಯಾ ಮೊದಲಾದ ನಾಡುಗಳಲ್ಲಿ ಅರೇಬಿಕ್ ಮೂಲದ ಲಿಪಿಯನ್ನೇ ಬಿಟ್ಟುಕೊಟ್ಟು ರೋಮನ್ ಮೂಲದ ಲಿಪಿಯನ್ನು ತಮ್ಮ ಬರಹಕ್ಕೆ ಅಳವಡಿಸಿಕೊಂಡಿದ್ದಾರೆ.

ಕೊರಿಯಾದಂತಹ ಬೇರೆ ಕೆಲವು ನಾಡುಗಳಲ್ಲಿ ಎರವಲು ಪದಗಳನ್ನು ಓದುವ ಹಾಗೆಯೇ ಬರೆಯಲು ತೊಡಗುವ ಮೂಲಕ ಈ ತೊಡಕನ್ನು ನಿವಾರಿಸಿಕೊಳ್ಳಲಾಗಿದೆ. ಕನ್ನಡದಲ್ಲಿಯೂ ಇಂತಹದೇ ಮಾರ‍್ಪಾಡನ್ನು ನಾವು ಇವತ್ತು ನಡೆಸಬೇಕಾಗಿದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 14: ಬರಹಕ್ಕೆ ಮೇಲ್ಮೆ ಬಂದುದು ಹೇಗೆ?

ದಿನಾಂಕ: 2014-04-14
ಮೂಲ URL: https://dnshankarabhat.net/%e0%b2%ac%e0%b2%b0%e0%b2%b9%e0%b2%95%e0%b3%8d%e0%b2%95%e0%b3%86-%e0%b2%ae%e0%b3%87%e0%b2%b2%e0%b3%8d%e0%b2%ae%e0%b3%86-%e0%b2%ac%e0%b2%82%e0%b2%a6%e0%b3%81%e0%b2%a6%e0%b3%81-%e0%b2%b9%e0%b3%87/

ನುಡಿಯರಿಮೆಯ ಇಣುಕುನೋಟ – 14

ಮೊನ್ನೆ ಮೊನ್ನೆಯ ವರೆಗೂ ಸಮಾಜದಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಬರಹವನ್ನು ಕಲಿತರೆ ಸಾಕಿತ್ತು; ಉಳಿದವರೆಲ್ಲ ಅದರಿಂದ ದೂರವೇ ಉಳಿಯಬಹುದಿತ್ತು, ಮತ್ತು ಹೀಗೆ ಬರಹದಿಂದ ದೂರ ಉಳಿದುದರಿಂದಾಗಿ ಅವರಿಗೆ ಜೀವನದಲ್ಲಿ ಯಾವ ತೊಂದರೆಯೂ ಉಂಟಾಗುತ್ತಿರಲಿಲ್ಲ.

ಆದರೆ, ಇವತ್ತು ಎಲ್ಲಾ ಜನರೂ ಬರಹವನ್ನು ಕಲಿಯಬೇಕಾಗಿದೆ, ಮತ್ತು ಕಲಿತು ಬಳಸುತ್ತಿರಬೇಕಾಗಿದೆ. ಯಾಕೆಂದರೆ, ಹಾಗೆ ಮಾಡದವರಲ್ಲಿ ಹೆಚ್ಚಿನವರೂ ಇವತ್ತು ತಮ್ಮ ಜೀವನದಲ್ಲಿ ಸೋತುಹೋಗುತ್ತಿದ್ದಾರೆ. ಒಂದು ಸಮಾಜದ ಏಳಿಗೆಯಾಗಬೇಕಿದ್ದರೂ ಅದಕ್ಕೆ ಸೇರಿದ ಜನರೆಲ್ಲ ಬರಹವನ್ನು ಕಲಿಯುವುದು ಮತ್ತು ಬಳಸುವುದು ಇವತ್ತಿನ ಮಟ್ಟಿಗೆ ಅತ್ಯವಶ್ಯವಾಗಿದೆ.

ಇದುವರೆಗೂ ಇಲ್ಲದಿದ್ದ ಈ ಮೇಲ್ಮೆ ಬರಹಕ್ಕೆ ಬಂದುದು ಹೇಗೆ? ಮಿಲಿಯಗಟ್ಟಲೆ ವರ‍್ಶಗಳಿಂದಲೂ ಜನರ ನಡುವಿನ ಸಂಪರ‍್ಕಕ್ಕೆ ಕೊಂಡಿಯಾಗಿ, ಮತ್ತು ಮನಸ್ಸಿನಲ್ಲಿರುವ ಅನಿಸಿಕೆಗಳನ್ನು ಬೇರೆಯವರಿಗೆ ತಿಳಿಸಲು ಬೇಕಾಗುವ ಒಯ್ಯುಗೆಯಾಗಿ ಮಾತನ್ನೇ ಬಳಸಲಾಗುತ್ತಿತ್ತು. ಆದರೆ, ಸುಮಾರು ನಾಲ್ಕಯ್ದು ಸಾವಿರ ವರ‍್ಶಗಳಶ್ಟು ಹಿಂದೆ, ಮಾತನ್ನು ಬರಹಕ್ಕಿಳಿಸುವ ಬಗೆಯನ್ನು ಕಂಡುಹಿಡಿಯಲಾಯಿತು. ಮೊದಲಿಗೆ ಇದನ್ನು ನೆನಪಿಗೆ ನೆರವಾಗುವಂತಹ ಕೆಲಸಗಳಲ್ಲಿ ತೊಡಗಿಸಲಾಯಿತು; ಆದರೆ ಆಮೇಲೆ, ದೂರ ಇರುವವರನ್ನು ಸಂಪರ‍್ಕಿಸುವುದಕ್ಕಾಗಿಯೂ ಇದನ್ನು ಬಳಸಲು ತೊಡಗಲಾಯಿತು.

ಹೀಗಿದ್ದರೂ, ಬರಹವೆಂಬುದು ಮೊನ್ನೆ ಮೊನ್ನೆಯ ವರೆಗೂ ಕೆಲವೇ ಕೆಲವು ಜನರ ಸೊತ್ತಾಗಿ ಮಾತ್ರ ಉಳಿದಿತ್ತು, ಮತ್ತು ಕೆಲವೇ ಕೆಲವು ನುಡಿಗಳನ್ನು ಆಡುವವರಲ್ಲಿ ಮಾತ್ರ ಅದು ಬಳಕೆಯಲ್ಲಿತ್ತು. ಸುಮಾರು ಮುನ್ನೂರು-ನಾನ್ನೂರು ವರ‍್ಶಗಳಶ್ಟು ಹಿಂದೆ ಬರಹಗಳನ್ನು ಅಚ್ಚುಹಾಕುವ ಬಗೆಯನ್ನು ಕಂಡುಹಿಡಿದುದು ಈ ವಿಶಯದಲ್ಲಿ ಒಂದು ದೊಡ್ಡ ಕ್ರಾಂತಿಯನ್ನೇ ಉಂಟುಮಾಡಿತು; ಅದರಲ್ಲೂ ಬರಹದಲ್ಲಿ ಬರುವ ಒಂದೊಂದು ಬರಿಗೆಗೂ ಒಂದೊಂದು ಮೊಳೆಯನ್ನು ಬಳಸಿ ಅಚ್ಚುಹಾಕುವ ಬಗೆಯನ್ನು ಕಂಡುಹಿಡಿದುದು ಈ ಕ್ರಾಂತಿ ಇನ್ನಶ್ಟು ವೇಗವಾಗಿ ಹಲವಾರು ನುಡಿಗಳನ್ನು ಆವರಿಸುವ ಹಾಗೆ ಮಾಡಿತು.

ಈ ಕ್ರಾಂತಿ ನಡೆಯುವ ಮೊದಲು, ಬರಹಗಳನ್ನು ಕಯ್ಯಲ್ಲಿ ನಕಲುಮಾಡಬೇಕಾಗಿತ್ತು; ಇದು ತುಂಬಾ ತೊಡಕಿನ ಮತ್ತು ತುಂಬಾ ಸಮಯ ತಗಲುವ ಕೆಲಸವಾಗಿತ್ತು; ಕೆಲವು ಮಂದಿ ಮಾತ್ರ ಈ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದರು, ಮತ್ತು ಇದರಿಂದಾಗಿ, ಬರಹವನ್ನು ಬಳಸುವವರ ಎಣಿಕೆ ತುಂಬಾ ಕಡಿಮೆಯಾಗಿಯೇ ಉಳಿದಿತ್ತು.

ಆದರೆ, ಬರಹಗಳನ್ನು ಅಚ್ಚುಹಾಕಿಸಲು ತೊಡಗಿದುದರಿಂದಾಗಿ, ಮತ್ತು ಅದಕ್ಕಾಗಿ ತೊಗಲು, ತೊಗಟೆ ಮೊದಲಾದವುಗಳನ್ನು ಬಳಸುವ ಬದಲು ಕಾಗದವನ್ನು ಬಳಸಲು ತೊಡಗಿದುದರಿಂದಾಗಿ, ಅವನ್ನು ತುಂಬಾ ಕಡಿಮೆ ಬೆಲೆಗೆ ಉಂಟುಮಾಡಲು, ಮತ್ತು ತುಂಬಾ ಸುಲಬವಾಗಿ ಉಂಟುಮಾಡಲು ಸಾದ್ಯವಾಯಿತು. ಇದರಿಂದಾಗಿ, ಅವುಗಳ ಪ್ರತಿಗಳನ್ನು ಒಮ್ಮೆಗೇನೇ ಸಾವಿರಾರು ಜನರಿಗೆ ತಲುಪಿಸಲು ಸಾದ್ಯವಾಯಿತು. ಇದಲ್ಲದೆ, ಅವನ್ನು ಬಳಸುವ ಕೆಲಸವೂ ತುಂಬಾ ಸುಲಬವಾಯಿತು.

ಬರಹಗಳನ್ನು ಅಚ್ಚುಹಾಕಿಸಲು ತೊಡಗಿದುದರಿಂದಾಗಿ, ಬರಹಗಳಲ್ಲಿ ಬಳಕೆಯಾಗುವ ಬರಿಗೆ(ಅಕ್ಶರ)ಗಳು, ಪದಗಳು, ಸೊಲ್ಲುಗಳು ಮೊದಲಾದುವೆಲ್ಲ ಎಲ್ಲಾ ಕಡೆಗಳಲ್ಲೂ ಹೆಚ್ಚುಕಡಿಮೆ ಒಂದೇ ರೂಪದಲ್ಲಿ ಉಳಿಯುವಂತಾಯಿತು, ಮತ್ತು ಇದರಿಂದಾಗಿ, ನಾಡಿನ ಒಂದು ಮೂಲೆಯಲ್ಲಿ ಉಂಟುಮಾಡಿದ ಬರಹವನ್ನು ಎಲ್ಲಾ ಕಡೆಗಳಲ್ಲಿರುವ ಜನರೂ ಸುಲಬವಾಗಿ ಓದಿ ತಿಳಿದುಕೊಳ್ಳುವಂತೆ ಮಾಡಲು ಸಾದ್ಯವಾಯಿತು.

ಹಿಂದಿನ ಕಾಲದಲ್ಲಿ ಬರಹಗಳನ್ನು ಯಾರಾದರೂ ಒಬ್ಬರು ದೊಡ್ಡದಾಗಿ ಓದುತ್ತಿದ್ದರು, ಮತ್ತು ಉಳಿದವರು ಅವರ ಸುತ್ತಲೂ ಕುಳಿತು ಅದನ್ನು ಕೇಳುತ್ತಿದ್ದರು; ಎಲ್ಲರಿಗೂ ತಮ್ಮವೇ ಆದ ಬರಹಗಳ ಪ್ರತಿಗಳು ದೊರೆಯತೊಡಗಿದ ಮೇಲೆ, ಅವನ್ನು ಗಟ್ಟಿಯಾಗಿ ಓದುವ ಬದಲು ಮನಸ್ಸಿನಲ್ಲೇನೇ ಓದುವ ಬಗೆ ಬಳಕೆಗೆ ಬಂತು. ಇದಕ್ಕನುಗುಣವಾಗಿ, ಬರಹಗಳ ಬಗೆಗಳಲ್ಲೂ ಹಲವು ಮಾರ‍್ಪಾಡುಗಳು ನಡೆದುವು.

ದಿನಪತ್ರಿಕೆ, ವಾರಪತ್ರಿಕೆ ಮೊದಲಾದುವನ್ನು ಅಚ್ಚುಹಾಕಿಸಿ, ಅವು ಒಮ್ಮೆಗೇನೇ ಲಕ್ಶಾಂತರ ಜನರನ್ನು ತಲಪುವ ಹಾಗೆ ಮಾಡಲಾಯಿತು, ಮತ್ತು ಬರಹವನ್ನು ಕಲಿಯುವವರಿಗೆಲ್ಲ ಅವರದೇ ಆದ ಕಲಿಕೆಯ ಪುಸ್ತಕಗಳು ಸಿಗುವಂತೆ ಮಾಡಲಾಯಿತು. ಬರಹದ ಬಳಕೆಯಲ್ಲಿ ಮತ್ತು ಕಲಿಕೆಯಲ್ಲಿ ಇಂತಹ ಹಲವಾರು ಮಾರ‍್ಪಾಡುಗಳು ಅವನ್ನು ಕಾಗದದಲ್ಲಿ ಅಚ್ಚುಹಾಕಲು ತೊಡಗಿದ ಮೇಲೆ ನಡೆದುಹೋಗಿವೆ. ಹಲವಾರು ಒಳನುಡಿಗಳನ್ನಾಡುವ ಜನರ ನಡುವೆ ಒಂದೇ ಬಗೆಯ ಬರಹದ ನುಡಿ ಬಳಕೆಗೆ ಬಂದಿರುವುದಕ್ಕೂ ಈ ರೀತಿ ಬರಹಗಳನ್ನು ಅಚ್ಚುಹಾಕಲು ತೊಡಗಿದುದೇ ಕಾರಣವಾಗಿದೆ.

ಬರಹಕ್ಕೆ ಈ ರೀತಿ ಹೆಚ್ಚು ಹೆಚ್ಚು ಮೇಲ್ಮೆ ಸಿಗುತ್ತಿದ್ದಂತೆ, ಜನರ ನಡವಳಿಕೆಗಳಲ್ಲೂ ಹಲವು ಬಗೆಯ ಮಾರ‍್ಪಾಡುಗಳು ಉಂಟಾಗತೊಡಗಿದುವು: ಜನರು ತಿಳಿವನ್ನು ಕೂಡಿಡುವ ಬಗೆ ಬೇರಾಯಿತು; ಮೊದಲಿಗೆ ಎಲ್ಲವನ್ನೂ ನೆನಪಿನಲ್ಲಿಯೇ ಉಳಿಸಿಕೊಳ್ಳಬೇಕಾಗಿತ್ತು; ಆದರೆ ಬರಹ ಹೆಚ್ಚು ಹೆಚ್ಚು ಬಳಕೆಗೆ ಬಂದಂತೆ, ತಿಳಿವನ್ನು ಹಲವು ಬಗೆಯ ಬರಹಗಳಲ್ಲಿ ಮತ್ತು ಪುಸ್ತಕಗಳಲ್ಲಿ ಕೂಡಿಡಲಾಯಿತು.

ಗಾದೆಗಳು, ಹಾಡುಗಳು, ಸೂತ್ರಗಳು, ನೀತಿಕತೆಗಳು ಮೊದಲಾದುವೆಲ್ಲ ತಿಳಿವನ್ನು ನೆನಪಿನಲ್ಲಿ ಕೂಡಿಡಲು ಬೇಕಾಗುವಂತಹ ಬಗೆಗಳು; ಬರಹಗಳಲ್ಲಿ ಕೂಡಿಡುವುದಕ್ಕೆ ಇಂತಹ ನೆನಪಿಸಲು ನೆರವಾಗುವ ಬಗೆಗಳು ಬೇಕಾಗುವುದಿಲ್ಲ. ಇದಕ್ಕೆ ಬದಲು, ಪುಸ್ತಕಗಳಲ್ಲಿ ಕಾಣಿಸುವಂತಹ ತಲೆಬರಹಗಳು, ಪಸುಗೆಗಳು, ದಪ್ಪಬರಿಗೆ, ತೆಳುಬರಿಗೆ ಮೊದಲಾದ ಬರಿಗೆರೂಪಗಳು, ಪಟ್ಟಿಗಳು, ಸುಟ್ಟಗೆಗಳು ಮೊದಲಾದ ಓದುವಲ್ಲಿ ನೆರವಾಗುವ ಬೇರೆಯೇ ಹಲವು ಬಗೆಗಳನ್ನು ಬಳಕೆಗೆ ತರಬೇಕಾಯಿತು.

ತಿಳಿವನ್ನು ಕೂಡಿಡುವ ಬಗೆಯಲ್ಲಿ ಮಾರ‍್ಪಾಡಾದುದರಿಂದಾಗಿ, ತಿಳಿವಿಗೂ ವಯಸ್ಸಿಗೂ ನಡುವಿದ್ದ ಸಂಬಂದ ಇಲ್ಲವಾಯಿತು; ಯಾವ ವಿಶಯದಲ್ಲಿ ಬೇಕಿದ್ದರೂ ಪುಸ್ತಕಗಳನ್ನು ಓದುವ ಮೂಲಕ, ದೊಡ್ಡವರಿಗಿಂತ ಹೆಚ್ಚು ತಿಳಿವನ್ನು ಚಿಕ್ಕವರು ಪಡೆಯಬಲ್ಲವರಾದರು. ಇದಲ್ಲದೆ, ಎಶ್ಟು ತಿಳಿವನ್ನು ಮತ್ತು ಎಶ್ಟು ಬಗೆಯ ತಿಳಿವನ್ನು ಪುಸ್ತಕಗಳಲ್ಲಿ ಕೂಡಿಡಬಲ್ಲೆವು ಎಂಬುದಕ್ಕೆ ಒಂದು ಮಿತಿಯೇ ಇಲ್ಲದಿರುವ ಹಾಗಾಯಿತು. ಹೊಸ ಹೊಸ ತಿಳಿವುಗಳನ್ನು ಪಡೆಯುತ್ತಿರುವಾಗಲೂ ಹಳೆಯವನ್ನು ಕಳೆದುಕೊಳ್ಳದೆ ಉಳಿಸಿಕೊಳ್ಳಲು ಸಾದ್ಯವಾಯಿತು.

ತಿಳಿವನ್ನು ಬರಹರೂಪದಲ್ಲಿ ಉಳಿಸಿಕೊಳ್ಳಲು ತೊಡಗಿದುದರಿಂದಾಗಿ ಜನರು ಅದನ್ನೊಂದು ವಸ್ತುವಿನ ಹಾಗೆ ಕಾಣಲು ತೊಡಗಿದರು, ಮತ್ತು ಅದನ್ನು ಕಂಡುಹಿಡಿದವರು ಅದರ ಮೇಲೆ ತಮ್ಮ ಒಡೆತನವನ್ನು ಹೇರಲು ತೊಡಗಿದರು. ತಾವು ಕಂಡುಹಿಡಿದ ತಿಳಿವನ್ನು ಒಂದು ಪುಸ್ತಕದ ರೂಪದಲ್ಲಿ ಅಚ್ಚುಹಾಕಿಸಿ, ಅದನ್ನು ಸಾವಿರಾರು ಜನರಿಗೆ ತಲಪಿಸುವ ಮೂಲಕ, ಕೆಲವರು ಸಾಕಶ್ಟು ಹಣವನ್ನೂ ಕಲೆಹಾಕಿದರು.

ತಿಳಿವು ಎಂಬುದು ಬರಹವನ್ನು ಬಳಸಲು ತಿಳಿಯದವರಲ್ಲಿ ಅವರು ಮಾಡುವ ಕೆಲಸದ ಅಂಗವಾಗಿರುತ್ತದೆ; ಕೆಲಸ ಮಾಡಿದ ಅನುಬವವೇ ಅವರಲ್ಲಿ ತಿಳಿವಿನ ರೂಪದಲ್ಲಿರುತ್ತದೆ; ಅದನ್ನು ಅವರು ಆ ಕೆಲಸದಿಂದ ಬೇರ‍್ಪಡಿಸಿ ಪರಿಶೀಲಿಸಲಾರರು; ಅದರ ಕುರಿತಾಗಿ ಅವರು ಆಡಬಲ್ಲ ಮಾತುಗಳೂ ಅದನ್ನು ಬಳಸಿ ನಡೆಸಬಲ್ಲ ಕೆಲಸದೊಂದಿಗೆ ಹೆಣೆದುಕೊಂಡಿರುತ್ತವೆ.

ಇದಕ್ಕೆ ಬದಲು, ಕಾಗದದಲ್ಲಿ ಬರೆದ ಇಲ್ಲವೇ ಅಚ್ಚುಹಾಕಿದ ತಿಳಿವು ಅದನ್ನು ಬಳಸಿ ನಡೆಸುವ ಕೆಲಸಕ್ಕಿಂತ ಬೇರಾಗಿ ಉಳಿಯುತ್ತದೆ; ಅದನ್ನು ತಿರುತಿರುಗಿ ಓದಿ, ಆ ತಿಳಿವು ಸರಿಯೋ ತಪ್ಪೋ ಎಂದು ವಿಮರ‍್ಶಿಸಲು ಬರುತ್ತದೆ. ಹಾಗಾಗಿ, ಬರಹವನ್ನು ಬಳಸುವವರಿಗೂ ಅವನ್ನು ಬಳಸದವರಿಗೂ ನಡುವೆ ಅವರು ಆಲೋಚಿಸುವ ಬಗೆಯಲ್ಲೇ ಹಲವು ವ್ಯತ್ಯಾಸಗಳು ಕಾಣಿಸಿಕೊಳ್ಳುತ್ತವೆ.

ನಿಜಕ್ಕೂ ಬರಹ ಬಾರದವರು ಬರಹ ಬಲ್ಲವರಿಗಿಂತ ಜಾಣ್ಮೆಯಲ್ಲಾಗಲಿ, ಬುದ್ದಿವಂತಿಕೆಯಲ್ಲಾಗಲಿ ಕಡಿಮೆಯೇನಲ್ಲ; ಬರಹ ಬಲ್ಲವರಶ್ಟೇ ಜಾಣ್ಮೆಯಿಂದ ಮತ್ತು ಅವರಶ್ಟೇ ಚನ್ನಾಗಿ ಬರಹ ಬಾರದವರೂ ತಮ್ಮ ಜೀವನವನ್ನು ನಡೆಸಬಲ್ಲರು. ಆದರೆ, ಈ ಎರಡು ಬಗೆಯ ಜನರೂ ಒಂದೇ ನಾಡಿನಲ್ಲಿ ನೆಲೆಸಿದ್ದು, ಆ ನಾಡಿನ ಆಡಳಿತವನ್ನು ನಡೆಸುವ ಮತ್ತು ಅದರ ಕುರಿತಾಗಿ ತೀರ‍್ಮಾನಗಳನ್ನು ಕಯ್ಗೊಳ್ಳುವ ಮಂದಿಯೆಲ್ಲ ಬರಹಬಲ್ಲವರಾಗಿದ್ದಲ್ಲಿ, ಆ ನಾಡಿನಲ್ಲಿರುವ ಬರಹ ಬಾರದ ಜನರಲ್ಲಿ ಹೆಚ್ಚಿನವರೂ ತಮ್ಮ ಜೀವನದಲ್ಲಿ ಸೋತುಹೋಗುತ್ತಲೇ ಇರಬೇಕಾಗುತ್ತದೆ.

ಅದರಲ್ಲೂ ನಮ್ಮ ನಾಡಿನಲ್ಲಿರುವ ಹಾಗೆ ಆಡಳಿತವು ಮಂದಿಯಾಳ್ವಿಕೆಯದಾಗಿದ್ದಲ್ಲಿ, ಎಲ್ಲಾ ಮಂದಿಯೂ ಅದರಲ್ಲಿ ಸರಿಯಾಗಿ ತಮ್ಮ ಹೊಣೆಯನ್ನರಿತು ಪಾಲ್ಗೊಳ್ಳಬೇಕಾಗುತ್ತದೆ; ಹಾಗಾಗಿ, ಒಂದು ನಾಡಿನ ಮಂದಿಯಾಳ್ವಿಕೆ (ಪ್ರಜಾಪ್ರಬುತ್ವ) ಚನ್ನಾಗಿ ನಡೆಯಬೇಕಿದ್ದಲ್ಲಿ, ಎಲ್ಲರಿಗೂ ಬರಹದ ತಿಳಿವಿರುವುದು ಅತ್ಯವಶ್ಯ. ಇಲ್ಲವಾದರೆ, ಆ ನಾಡಿನಲ್ಲಿರುವ ಬರಹ ಬಾರದವರು ತಮ್ಮ ಏಳಿಗೆಗೆ ಮಾತ್ರವಲ್ಲದೆ ಇಡೀ ನಾಡಿನ ಏಳಿಗೆಗೂ ತೊಡಕಾಗುತ್ತಾರೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 18: ನುಡಿಗಳ ನಡುವಿನ ನಂಟಸ್ತಿಕೆ

ದಿನಾಂಕ: 2014-04-14
ಮೂಲ URL: https://dnshankarabhat.net/%e0%b2%a8%e0%b3%81%e0%b2%a1%e0%b2%bf%e0%b2%97%e0%b2%b3-%e0%b2%a8%e0%b2%a1%e0%b3%81%e0%b2%b5%e0%b2%bf%e0%b2%a8-%e0%b2%a8%e0%b2%82%e0%b2%9f%e0%b2%b8%e0%b3%8d%e0%b2%a4%e0%b2%bf%e0%b2%95%e0%b3%86/

ನುಡಿಯರಿಮೆಯ ಇಣುಕುನೋಟ – 18

ಜನರ ನಡುವೆ ಕಾಣಿಸುವ ಹಾಗೆ, ಅವರಾಡುವ ನುಡಿಗಳನಡುವೆಯೂ ‘ನಂಟಸ್ತಿಕೆ’ಯನ್ನು ಕಾಣಲು ಸಾದ್ಯವಿದೆ. ಕೆಲವು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆಯೆಂದು ಹೇಳಬಹುದು, ಮತ್ತು ಬೇರೆ ಕೆಲವು ನುಡಿಗಳ ನಡುವೆ ದೂರದ ನಂಟಸ್ತಿಕೆ ಮಾತ್ರ ಇದೆಯೆಂದು ಹೇಳಬಹುದು. ಆದರೆ, ಇನ್ನು ಕೆಲವು ನುಡಿಗಳ ನಡುವೆ ಯಾವ ರೀತಿಯ ನಂಟಸ್ತಿಕೆಯೂ ಇದೆಯೆಂದು ಹೇಳಲು ಬರುವುದಿಲ್ಲ. ಹಾಗೆ ಹೇಳಲು ಯಾವ ಆದಾರವೂ ದೊರಕದಿರುವುದೇ ಇದಕ್ಕೆ ಕಾರಣ.

ಎತ್ತುಗೆಗಾಗಿ, ಕನ್ನಡ ಮತ್ತು ತಮಿಳು ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆ; ಕನ್ನಡ ಮತ್ತು ತುಳು ನುಡಿಗಳ ನಡುವೆ ಇದಕ್ಕಿಂತ ಸ್ವಲ್ಪ ದೂರದ ನಂಟಸ್ತಿಕೆಯಿದೆ. ಇದೇ ರೀತಿಯಲ್ಲಿ, ಹಿಂದಿ ಮತ್ತು ಮರಾಟಿ ನುಡಿಗಳ ನಡುವೆ ಹತ್ತಿರದ ನಂಟಸ್ತಿಕೆಯಿದೆ; ಹಿಂದಿ ಮತ್ತು ಇಂಗ್ಲಿಶ್ ನುಡಿಗಳ ನಡುವೆ ದೂರದ ನಂಟಸ್ತಿಕೆಯಿದೆ. ಆದರೆ ಕನ್ನಡ ಮತ್ತು ಹಿಂದಿ ನುಡಿಗಳ ನಡುವೆ, ಇಲ್ಲವೇ ಕನ್ನಡ ಮತ್ತು ಇಂಗ್ಲಿಶ್ ನುಡಿಗಳ ನಡುವೆ, ಹತ್ತಿರದ್ದಾಗಲಿ ದೂರದ್ದಾಗಲಿ ಯಾವುದೇ ರೀತಿಯ ನಂಟಸ್ತಿಕೆಯೂ ಇದೆಯೆಂದು ಹೇಳುವುದಕ್ಕೆ ಯಾವ ಆದಾರವೂ ದೊರಕುವುದಿಲ್ಲ.

ನುಡಿಗಳ ನಡುವಿನ ನಂಟಸ್ತಿಕೆಯನ್ನು ಜನರ ನಡುವಿನ ನಂಟಸ್ತಿಕೆಯ ಹಾಗೆ ಅವುಗಳ ಹುಟ್ಟು ಮತ್ತು ಬೆಳವಣಿಗೆಗಳ ಆದಾರದ ಮೇಲೆ ಕಲ್ಪಿಸಿಕೊಳ್ಳಲಾಗಿದೆ. ಆದರೆ, ಜನರ ಹುಟ್ಟಿಗೂ ನುಡಿಗಳ ಹುಟ್ಟಿಗೂ ನಡುವೆ ಹಲವು ವ್ಯತ್ಯಾಸಗಳಿವೆ. ಎತ್ತುಗೆಗಾಗಿ, ಜನರಲ್ಲಿ ಹೆಣ್ಣು-ಗಂಡುಗಳ ಕೂಡಿಕೆಯಿಂದ ಮಗು ಹುಟ್ಟುತ್ತದೆ; ಆದರೆ ನುಡಿಗಳಲ್ಲಿ ಆ ರೀತಿ ಎರಡು ನುಡಿಗಳ ಕೂಡಿಕೆಯಿಂದ ಮೂರನೆಯ ನುಡಿ ಹುಟ್ಟಿಕೊಳ್ಳುವುದಿಲ್ಲ; ಒಂದು ನುಡಿಯಿದ್ದದ್ದು ಇನ್ನೊಂದು ನುಡಿಯಾಗಿ ಬದಲಾಗುತ್ತದೆ, ಇಲ್ಲವೇ ಎರಡು ನುಡಿಗಳಾಗಿ ಒಡೆದುಕೊಳ್ಳುತ್ತದೆ.

ಎತ್ತುಗೆಗಾಗಿ, ಸಂಸ್ಕ್ರುತ ನುಡಿ ಇವತ್ತಿನ ಮರಾಟಿ ನುಡಿಯಾಗಿ ಬದಲಾಗಿದೆಯೆಂದು ಹೇಳಬಹುದು; ಇಲ್ಲವೇ ಅದೇ ನುಡಿ ಮರಾಟಿ, ಕೊಂಕಣಿ, ಹಿಂದಿ, ಗುಜರಾತಿ, ಪಂಜಾಬಿ, ಬಂಗಾಲಿ ಮೊದಲಾದ ಇವತ್ತಿನ ಹಲವು ನುಡಿಗಳಾಗಿ ಒಡೆದುಕೊಂಡಿದೆಯೆಂದೂ ಹೇಳಬಹುದು. ಆದರೆ, ಇದೇ ರೀತಿಯಲ್ಲಿ ಸಂಸ್ಕ್ರುತ ನುಡಿ ಕನ್ನಡ ನುಡಿಯಾಗಿ ಬದಲಾಗಿದೆಯೆಂದು ಹೇಳಲು ಬರುವುದಿಲ್ಲ. ಯಾಕೆಂದರೆ, ಕನ್ನಡ ಮತ್ತು ಸಂಸ್ಕ್ರುತ ನುಡಿಗಳ ನಡುವೆ ಅವುಗಳ ಪದಗಳಲ್ಲಿ ಮತ್ತು ವ್ಯಾಕರಣ ನಿಯಮಗಳಲ್ಲಿ ಹಲವು ಬುಡಕಟ್ಟಿನ ವ್ಯತ್ಯಾಸಗಳಿವೆ. ಈ ಎಲ್ಲಾ ವ್ಯತ್ಯಾಸಗಳೂ ಹೇಗೆ ಉಂಟಾಗಿವೆ ಎಂಬುದನ್ನು ವಿವರಿಸಲು ಇದುವರೆಗೆ ಯಾರಿಗೂ ಸಾದ್ಯವಾಗಿಲ್ಲ.

ಇಂತಹ ವಿವರಿಸಲು ಸಾದ್ಯವಾಗದ ವ್ಯತ್ಯಾಸಗಳಿರುವ ಕಾರಣ, ಸಂಸ್ಕ್ರುತ ಮತ್ತು ಕನ್ನಡ ನುಡಿಗಳನ್ನು ಎರಡು ತೀರ ಬೇರಾಗಿರುವ ಮೂಲನುಡಿಗಳಿಂದ ಬೆಳೆದು ಬಂದಿರುವವುಗಳೆಂಬುದಾಗಿ ಪರಿಗಣಿಸಬೇಕಾಗಿದೆ. ಸಂಸ್ಕ್ರುತ ‘ಇಂಡೋ-ಆರ‍್ಯನ್’ ಎಂಬ ಹೆಸರಿನ ಮೂಲ ನುಡಿಯಿಂದ, ಮತ್ತು ಕನ್ನಡ ಅದಕ್ಕಿಂತ ತೀರ ಬೇರಾಗಿರುವ ‘ದ್ರಾವಿಡ’ ಎಂಬ ಹೆಸರಿನ ಮೂಲ ನುಡಿಯಿಂದ ಬೆಳೆದು ಬಂದಿದೆಯೆಂಬುದಾಗಿ ಇವತ್ತು ಕಲ್ಪಿಸಿಕೊಳ್ಳಬೇಕಾಗಿದೆ.

ನುಡಿಗಳನ್ನು ಈ ರೀತಿ ಬೇರೆ ಬೇರೆ ನುಡಿಕುಟುಂಬಗಳಲ್ಲಿ ಇರಿಸಿ ಹೇಳಲು ಮುಕ್ಯವಾಗಿ ಅವುಗಳ ಚರಿತ್ರೆ ಆದಾರವಾಗಿರುತ್ತದೆ. ಒಂದು ನುಡಿಯನ್ನಾಡುವ ಜನ ದೂರ ದೂರದಲ್ಲಿರುವ ಊರುಗಳಿಗೆ ಹೋಗಿ ನೆಲೆಸಿದಾಗ, ಅವರೊಳಗಿನ ಸಂಪರ‍್ಕ ಕಡಿಮೆಯಾಗುತ್ತಾ ಹೋಗುತ್ತದೆ, ಮತ್ತು ಇದರಿಂದಾಗಿ, ಅವರು ಬಳಸುವ ನುಡಿಯಲ್ಲಿ ಬದಲಾವಣೆಗಳು ಒಂದೇ ದಿಕ್ಕಿನಲ್ಲಿ ನಡೆಯದೆ ಬೇರೆ ಬೇರೆ ದಿಕ್ಕುಗಳಲ್ಲಿ ನಡೆಯತೊಡಗುತ್ತವೆ.

ಎತ್ತುಗೆಗಾಗಿ, ಕನ್ನಡ ನುಡಿಯನ್ನಾಡುವ ಜನ ಬಡಗು ಕರ‍್ನಾಟಕ, ತೆಂಕು ಕರ‍್ನಾಟಕ ಮತ್ತು ಕರಾವಳಿ ಎಂಬ ಮೂರು ಮುಕ್ಯ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರಾಡುವ ನುಡಿಯೂ ಬಡಗು, ತೆಂಕು ಮತ್ತು ಕರಾವಳಿ ಎಂಬ ಮೂರು ಮುಕ್ಯ ಒಳನುಡಿಗಳಾಗಿ ವ್ಯತ್ಯಾಸಗಳನ್ನು ತೋರಿಸುತ್ತದೆ. ಈ ಒಳನುಡಿಗಳ ನಡುವೆ ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳು ಕಾಣಿಸಿಕೊಳ್ಳುತ್ತವೆ ಎಂಬುದು ಈ ಪ್ರದೇಶಗಳಿಗೆ ಹೋಗಿ ನೆಲೆಸಿದ ಮೇಲೆ ಇವರ ನಡುವೆ ಎಂತಹ ಸಂಪರ‍್ಕ ಸಾದ್ಯವಿತ್ತು ಎಂಬುದರ ಮೇಲೆ ಅವಲಂಬಿಸಿದೆ.

ನುಡಿಗಳೆಲ್ಲ ಈ ರೀತಿ ಅವನ್ನಾಡುವ ಜನರ ನಡುವಿರುವ ಸಂಪರ‍್ಕ ಕಡಿಮೆಯಾದಾಗ ಬೇರೆ ಬೇರೆ ಒಳನುಡಿಗಳಾಗಿ ಒಡೆದುಕೊಳ್ಳುತ್ತವೆ, ಮತ್ತು ಆಮೇಲೆ ಅವೇ ಒಳನುಡಿಗಳು ಸ್ವತಂತ್ರ ನುಡಿಗಳಾಗಿ ಬೆಳೆಯುತ್ತವೆ ಎಂಬ ಈ ಅಬಿಪ್ರಾಯದ ಮೇಲೆ ನುಡಿಕುಟುಂಬಗಳ ಕಲ್ಪನೆಯನ್ನು ನಿಲ್ಲಿಸಲಾಗಿದೆ. ಹಿಂದೆ ಒಂದು ಕಾಲದಲ್ಲಿ ಕೆಲವೇ ಕೆಲವು ಮೂಲ ನುಡಿಗಳಿದ್ದಿರಬೇಕು, ಮತ್ತು ಈ ಮೂಲ ನುಡಿಗಳು ಮೇಲೆ ಸೂಚಿಸಿದ ಹಾಗೆ ಕವಲೊಡೆದು ಬೇರೆ ಬೇರೆ ನುಡಿಗಳಾದುದರಿಂದಾಗಿ, ಇವತ್ತು ಸಾವಿರಾರು ನುಡಿಗಳು ಬಳಕೆಯಲ್ಲಿ ಕಾಣಿಸಿಕೊಳ್ಳುತ್ತಿವೆ ಎಂಬುದೇ ಈ ಕಲ್ಪನೆ.

ಈ ಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ಇವತ್ತು ಬಳಕೆಯಲ್ಲಿರುವ ಸಾವಿರಾರು ನುಡಿಗಳನ್ನು ಬೇರೆ ಬೇರೆ ನುಡಿಕುಟುಂಬಗಳಾಗಿ ಹಂಚುವ ಪ್ರಯತ್ನ ನಡೆಯುತ್ತಿದೆ. ಎಂದರೆ, ಈ ಸಾವಿರಾರು ನುಡಿಗಳು ಹದಿನಯ್ದಿಪ್ಪತ್ತು ಮೂಲ ನುಡಿಗಳಿಂದ ಅವುಗಳಲ್ಲಿ ಬೇರೆ ಬೇರೆ ರೀತಿಯ ಬದಲಾವಣೆಗಳಾಗುವುದರ ಮೂಲಕ ಹೇಗೆ ಬೆಳೆದು ಬಂದಿರಬೇಕು ಎಂಬುದನ್ನು ತೋರಿಸಿ ಕೊಡುವ ಪ್ರಯತ್ನ ನಡೆಯುತ್ತಿದೆ.

ಇವತ್ತು ಬೇರೆ ಬೇರಾಗಿ ಕಾಣಿಸುವ ಎರಡು ನುಡಿಗಳು ಒಂದೇ ಮೂಲ ನುಡಿಯಿಂದ ಬೆಳೆದು ಬಂದವುಗಳೆಂದು ನಾವು ತೋರಿಸಿಕೊಡಬೇಕಿದ್ದಲ್ಲಿ, (ಎಂದರೆ ಅವು ಒಂದೇ ನುಡಿಕುಟುಂಬಕ್ಕೆ ಸೇರಿದವುಗಳೆಂದು ವಾದಿಸಬೇಕಿದ್ದಲ್ಲಿ) ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳೆಲ್ಲ ಮೂಲ ನುಡಿಯೊಂದರಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ತೋರಿಸಿಕೊಡಬೇಕು. ಎಂದರೆ, ಆ ಮೂಲ ನುಡಿಯನ್ನಾಡುವ ಜನರು ದೂರದ ಎರಡು ಪ್ರದೇಶಗಳಿಗೆ ಹೋಗಿ ನೆಲೆಸಿದ ಮೇಲೆ, ಅವರ ಮಾತಿನಲ್ಲಿ ಬದಲಾವಣೆಗಳು ಎರಡು ಬೇರೆ ಬೇರೆ ದಿಕ್ಕುಗಳಲ್ಲಿ ನಡೆದಿರಬೇಕು, ಮತ್ತು ಒಂದು ಪ್ರದೇಶದಲ್ಲಿ ನಡೆದ ಬದಲಾವಣೆಗಳು ಇನ್ನೊಂದು ಪ್ರದೇಶದಲ್ಲಿ ನಡೆಯದಿದ್ದುದೇ ಆ ಎರಡು ಪ್ರದೇಶಗಳ ಜನರ ಮಾತುಗಳ (ಎಂದರೆ ನುಡಿಗಳ) ನಡುವೆ ಇವತ್ತು ಕಾಣಿಸುವ ವ್ಯತ್ಯಾಸಗಳಿಗೆ ಮೂಲ ಕಾರಣ ಎಂಬುದನ್ನು ತೋರಿಸಿಕೊಡಬೇಕು.

ಹಾಗಾಗಿ, ನುಡಿಗಳನ್ನು ಬೇರೆ ಬೇರೆ ನುಡಿಕುಟುಂಬಗಳಾಗಿ ಹಂಚುವ ಕೆಲಸದಲ್ಲಿ ಅವುಗಳ ನಡುವೆ ಕಾಣಿಸುವ ಹೋಲಿಕೆಗಳಿಗಿಂತಲೂ ವ್ಯತ್ಯಾಸಗಳಿಗೇನೇ ಹೆಚ್ಚಿನ ಮಹತ್ವವಿದೆ. ಎರಡು ನುಡಿಗಳ ನಡುವೆ ಸ್ವಲ್ಪವೂ ಹೋಲಿಕೆ ಕಾಣಿಸದಿದ್ದರೂ, ಅವುಗಳ ನಡುವಿರುವ ವ್ಯತ್ಯಾಸಗಳೆಲ್ಲ ಆ ಎರಡು ನುಡಿಗಳ ಚರಿತ್ರೆಯಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ಮೇಲೆ ಸೂಚಿಸಿದ ಹಾಗೆ ತೋರಿಸಿಕೊಟ್ಟಲ್ಲಿ, ಅವನ್ನು ಒಂದೇ ನುಡಿಕುಟುಂಬಕ್ಕೆ ಸೇರಿದವುಗಳೆಂದು ಹೇಳಲು ಬರುತ್ತದೆ. ಇದಕ್ಕೆ ಬದಲು, ಎರಡು ನುಡಿಗಳ ನಡುವೆ ಎಶ್ಟೇ ಹೋಲಿಕೆಯಿರಲಿ, ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳನ್ನು ಒಂದು ಮೂಲ ನುಡಿಯಲ್ಲಿ ಬೇರೆ ಬೇರೆ ದಿಕ್ಕುಗಳಲ್ಲಿ ನಡೆದ ಬದಲಾವಣೆಗಳಿಂದಾಗಿ ಉಂಟಾದವುಗಳು ಎಂಬುದಾಗಿ ತೋರಿಸಿಕೊಡಲು ಬರುವುದಿಲ್ಲವಾದಲ್ಲಿ, ಅವು ಒಂದೇ ನುಡಿ ಕುಟುಂಬಕ್ಕೆ ಸೇರಿದವುಗಳೆಂದು ವಾದಿಸಲು ಬರುವುದಿಲ್ಲ.

ಎರಡು ನುಡಿಗಳ ನಡುವೆ ಹೋಲಿಕೆಗಳು ಕಾಣಿಸಿಕೊಳ್ಳಲು ಬೇರೆ ಕಾರಣಗಳೂ ಇರಬಲ್ಲುವು: ಎತ್ತುಗೆಗಾಗಿ, ಅವುಗಳಲ್ಲಿ ಒಂದು ಇನ್ನೊಂದರಿಂದ ಹಲವಾರು ಪದಗಳನ್ನು ಎರವಲಾಗಿ ಪಡೆದಿದೆಯಾದರೆ, ಅವೆರಡರ ನಡುವೆ ತುಂಬಾ ಹೋಲಿಕೆಯಿದೆಯೆಂದು ಅನಿಸಬಹುದು. ಇದಲ್ಲದೆ, ಆಕಸ್ಮಿಕವಾಗಿಯೂ ಎರಡು ನುಡಿಗಳಲ್ಲಿ ಬಳಕೆಯಾಗುವ ಪದಗಳ ನಡುವೆ ಹೋಲಿಕೆಗಳು ಕಾಣಿಸಬಹುದು. ನುಡಿಗಳನ್ನು ಬಳಸುವ, ಬೆಳೆಸುವ ಮತ್ತು ಬದಲಾಯಿಸುವವರೆಲ್ಲರೂ ಮನುಶ್ಯರೇ ಆಗಿರುವುದರಿಂದ, ಇಂತಹ ಆಕಸ್ಮಿಕ ಹೋಲಿಕೆಗಳು ಕಾಣಿಸಿಕೊಳ್ಳುವುದರಲ್ಲಿ ಅಚ್ಚರಿಯೇನಿಲ್ಲ.

ಹಾಗಾಗಿ, ಎರಡು ನುಡಿಗಳ ನಡುವೆ ಕಾಣಿಸುವ ಹೋಲಿಕೆಗಳ ಆದಾರದ ಮೇಲೆ ಅವು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ಹೇಳಲು ಬರುವುದಿಲ್ಲ. ಅವುಗಳ ನಡುವೆ ಕಾಣಿಸುವ ವ್ಯತ್ಯಾಸಗಳು ಯಾವ ರೀತಿಯಲ್ಲಿ ಮೂಡಿಬಂದಿವೆ ಎಂಬುದನ್ನು ಮೇಲೆ ಸೂಚಿಸಿದ ಹಾಗೆ ವಿವರಿಸಲು ಸಾದ್ಯವಾಗುವುದಿದ್ದಲ್ಲಿ ಮಾತ್ರ ಅವನ್ನು ಒಂದೇ ಕುಟುಂಬದ ನುಡಿಗಳೆಂದು, ಎಂದರೆ ಚಾರಿತ್ರಿಕವಾಗಿ ಅವು ಒಂದೇ ಮೂಲ ನುಡಿಯಿಂದ ಬೆಳೆದು ಬಂದವುಗಳೆಂದು ಪರಿಗಣಿಸಲು ಸಾದ್ಯವಾಗುತ್ತದೆ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 20: ಬರಹದಲ್ಲಿ ಯಾವುದು ಸರಿ, ಯಾವುದು ತಪ್ಪು?

ಮೂಲ URL: http://dnshankarabhat.net/%e0%b2%ac%e0%b2%b0%e0%b2%b9%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%af%e0%b2%be%e0%b2%b5%e0%b3%81%e0%b2%a6%e0%b3%81-%e0%b2%b8%e0%b2%b0%e0%b2%bf-%e0%b2%af%e0%b2%be%e0%b2%b5%e0%b3%81/

ನುಡಿಯರಿಮೆಯ ಇಣುಕುನೋಟ – 20

ಕನ್ನಡದಲ್ಲಿ ಬಳಕೆಯಾಗುವ ಪದಗಳು ಮತ್ತು ಪದರೂಪಗಳುಸರಿಯೋ ತಪ್ಪೋ ಎಂಬುದನ್ನು ತೀರ‍್ಮಾನಿಸುವಲ್ಲಿ ನಾವು ಯಾವ ಕಟ್ಟಲೆಗಳನ್ನು ಬಳಸಬೇಕು? ಕನ್ನಡದ ಕಟ್ಟಲೆಗಳನ್ನೇ ಬಳಸಬೇಕೆಂದು ಯಾರೂ ಹೇಳಬಹುದು. ಆದರೆ, ಇವತ್ತು ಹಲವು ಮಂದಿ ಕನ್ನಡದ ವಿದ್ವಾಂಸರಿಗೆ ಇದು ಒಪ್ಪಿಗೆಯಾಗುವುದಿಲ್ಲ. ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳನ್ನು ಕನ್ನಡದಲ್ಲಿ ಬಳಸುವಾಗ ಸಂಸ್ಕ್ರುತದ ಕಟ್ಟಲೆಗಳನ್ನೇ ತಪ್ಪದೆ ಬಳಸಬೇಕೆಂಬುದಾಗಿ ಅವರು ಹೇಳುತ್ತಾರೆ. ಕನ್ನಡದ ವಿದ್ವಾಂಸರಲ್ಲಿ ಹಿಂದಿನ ಕಾಲದಿಂದಲೂ ಬೆಳೆದುಬಂದಿರುವ ಕನ್ನಡದ ಕುರಿತಾಗಿರುವ ಕೀಳರಿಮೆ ಮತ್ತು ಸಂಸ್ಕ್ರುತದ ಕುರಿತಾಗಿರುವ ಅತಿಯಾದ ಆದರ ಮತ್ತು ಅಬಿಮಾನಗಳೇ ಇದಕ್ಕೆ ಕಾರಣ.

ಎತ್ತುಗೆಗಾಗಿ, ಸೊಲ್ಲರಿಗರನ್ನು ಸೂಚಿಸಲು ಸಂಸ್ಕ್ರುತದಲ್ಲಿ ಎರಡು ಪದಗಳಿವೆ. ಇವುಗಳಲ್ಲಿ ‘ವಯ್ಯಾಕರಣಃ’ ಎಂಬುದು ಗಂಡಸರನ್ನು ಸೂಚಿಸುತ್ತದೆ ಮತ್ತು ‘ವಯ್ಯಾಕರಣೀ’ ಎಂಬುದು ಹೆಂಗಸರನ್ನು ಸೂಚಿಸುತ್ತದೆ. ಆದರೆ, ಕನ್ನಡದಲ್ಲಿ ಗಂಡಸರನ್ನು ಸೂಚಿಸುವುದಕ್ಕಾಗಿಯೂ ‘ವಯ್ಯಾಕರಣಿ’ ಎಂಬ ಪದವೇ ಬಳಕೆಗೆ ಬಂದಿದೆ. ಇದನ್ನು ಕಿಟ್ಟೆಲ್ ಅವರ ಡಿಕ್ಶನರಿಯಲ್ಲಿ ನೋಡಬಹುದು. ಆದರೆ ಇದು ತಪ್ಪು, ಗಂಡಸರನ್ನು ಸೂಚಿಸಲು ‘ವಯ್ಯಾಕರಣ’ ಎಂಬುದನ್ನೇ ಬಳಸಬೇಕು ಎಂಬುದಾಗಿ ಕೆಲವರು ಕನ್ನಡದ ವಿದ್ವಾಂಸರು ವಾದಿಸುತ್ತಾರೆ.

ಇದಕ್ಕೆ ಅವರಿಗೆ ಸಂಸ್ಕ್ರುತ ವ್ಯಾಕರಣದ ಕಟ್ಟಲೆಯೇ ಆದಾರ. ಆದರೆ ನಿಜಕ್ಕೂ ಇದು ಸರಿಯಲ್ಲ. ಯಾಕೆಂದರೆ, ಯಾವ ನುಡಿಯಿಂದಲೇ ಆಗಲಿ ಒಂದು ಪದವನ್ನು ಎರವಲಾಗಿ ಪಡೆದ ಮೇಲೆ, ಅದನ್ನು ಯಾವ ರೀತಿಯಲ್ಲಿ ಮತ್ತು ಯಾವ ರೂಪದಲ್ಲಿ ಬಳಸಬೇಕು ಎಂಬುದಕ್ಕೆ ಎರವಲಾಗಿ ಪಡೆದ ನುಡಿಯಲ್ಲಿರುವ ಬಳಕೆಯ ಕಟ್ಟಲೆಗಳೇ ಆದಾರವಾಗಬೇಕಲ್ಲದೆ ಎರವಲು ಕೊಟ್ಟ ನುಡಿಯ ಕಟ್ಟಲೆಗಳಲ್ಲ.

ಎತ್ತುಗೆಗಾಗಿ, ಸಂಸ್ಕ್ರುತದಿಂದ ಹಲವು ನಾಮಪದಗಳನ್ನು ನಾವು ಕನ್ನಡಕ್ಕೆ ಎರವಲಾಗಿ ಪಡೆದು ಬಳಸುತ್ತೇವೆ. ಇವುಗಳಲ್ಲಿ ಕೆಲವಕ್ಕೆ ಇಸು ಒಟ್ಟನ್ನು ಸೇರಿಸಿ ಕ್ರಿಯಾಪದಗಳಾಗಿ ಮಾಡಿಯೂ ಬಳಸುತ್ತೇವೆ (ಜಪ-ಜಪಿಸು, ಕೋಪ-ಕೋಪಿಸು, ರುಚಿ-ರುಚಿಸು). ಆದರೆ, ಈ ಬಳಕೆಗೆ ಕನ್ನಡದ ಕಟ್ಟಲೆಗಳು ಆದಾರವಲ್ಲದೆ ಸಂಸ್ಕ್ರುತದ ಕಟ್ಟಲೆಗಳಲ್ಲ.

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳ ಲಿಂಗವನ್ನು ನಿರ‍್ದರಿಸುವಲ್ಲೂ ನಾವು ಕನ್ನಡದ ಕಟ್ಟಲೆಗಳನ್ನು ಬಳಸುತ್ತೇವಲ್ಲದೆ ಸಂಸ್ಕ್ರುತದ ಕಟ್ಟಲೆಗಳನ್ನಲ್ಲ. ಎತ್ತುಗೆಗಾಗಿ, ಸಂಸ್ಕ್ರುತದಲ್ಲಿ ಪುಲ್ಲಿಂಗದಲ್ಲಿರುವ ದೇಶ, ಮಾರ‍್ಗ, ದೀಪ ಮೊದಲಾದ ಪದಗಳನ್ನು, ಮತ್ತು ಸ್ತ್ರೀಲಿಂಗದಲ್ಲಿರುವ ನದಿ, ಲಿಪಿ, ಚರ‍್ಚೆ ಮೊದಲಾದ ಪದಗಳನ್ನು ನಾವು ನಪುಂಸಕ ಲಿಂಗದಲ್ಲಿ ಬಳಸುತ್ತೇವಲ್ಲದೆ ಪುಲ್ಲಿಂಗ ಇಲ್ಲವೇ ಸ್ತ್ರೀಲಿಂಗದಲ್ಲಲ್ಲ. ಸಂಸ್ಕ್ರುತದಲ್ಲಿ ನಾಮಪದಗಳಿಂದ ಬೇರಾದ ಗುಣಪದಗಳೆಂಬ ಪದಗಳಿಲ್ಲ.

ಹೀಗಿದ್ದರೂ, ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳಲ್ಲಿ ವ್ಯಾವಹಾರಿಕ, ಸಾಮಾಜಿಕ, ಯಾಂತ್ರಿಕ ಮೊದಲಾದ ಹಲವು ಪದಗಳನ್ನು ನಾವು ನಾಮಪದಗಳಿಂದ ಬೇರಾಗಿರುವ ಗುಣಪದಗಳಾಗಿ ಬಳಸುತ್ತೇವೆ. ಹಾಗಾಗಿ, ವಯ್ಯಾಕರಣಿಯಂತಹ ಪದಗಳ ಮಟ್ಟಿಗೂ ನಾವು ಇದೇ ಕ್ರಮವನ್ನು ಅನುಸರಿಸುವುದು ಸರಿಯಾದ ದಾರಿ. ಕನ್ನಡದಲ್ಲಿ ಅವು ಯಾವ ರೀತಿಯಲ್ಲಿ ಬಳಕೆಗೆ ಬಂದಿವೆ ಎಂಬುದು ನಮಗೆ ಮುಕ್ಯವಲ್ಲದೆ ಆ ಬಳಕೆ ಸಂಸ್ಕ್ರುತದ ನಿಯಮಗಳಿಗೆ ಅನುಸಾರವಾಗಿದೆಯೇ ಇಲ್ಲವೇ ಎಂಬುದು ಮುಕ್ಯವಲ್ಲ.

ಸಂಸ್ಕ್ರುತದಿಂದ ಎರವಲಾಗಿ ಪಡೆದ ಪದಗಳಲ್ಲಿ ಬರುವ ಮಹಾಪ್ರಾಣ, ಷಕಾರ, ಋಕಾರ ಮೊದಲಾದ ಕೆಲವು ಬರಿಗೆಗಳು ಹೆಚ್ಚಿನ ಕನ್ನಡಿಗರ ಓದಿನಲ್ಲಿ ಇಲ್ಲವೇ ಮಾತಿನಲ್ಲಿ ಕಾಣಿಸುವುದಿಲ್ಲ; ಹಾಗಿದ್ದರೂ ‘ಅವನ್ನು ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕು; ಇಲ್ಲವಾದರೆ ಅದು ತಪ್ಪಾಗುತ್ತದೆ’ ಎಂದು ಹೇಳುವುದೂ ಸಂಸ್ಕ್ರುತದ ಕಟ್ಟಲೆಗಳನ್ನು ಕನ್ನಡದ ಮೇಲೆ ಹೊರಿಸುವ ತಪ್ಪು ದಾರಿಯಾಗಿದೆ. ಹೆಚ್ಚಿನ ಕನ್ನಡಿಗರ ಓದಿನಲ್ಲಿ ಇಲ್ಲವೇ ಮಾತಿನಲ್ಲಿ ಈ ಎರವಲು ಪದಗಳು ಹೇಗೆ ಕಾಣಿಸುತ್ತವೆಯೋ ಹಾಗೆ ಬರೆಯುವುದೇ ಕನ್ನಡದ ಮಟ್ಟಿಗೆ ಸರಿಯಾದ ದಾರಿ.

ಇನ್ನೊಂದು ಬಗೆಯ ‘ತಪ್ಪು’ಗಳು ಆಡುನುಡಿಯಿಂದ ಪದಗಳನ್ನು ಇಲ್ಲವೇ ಪದರೂಪಗಳನ್ನು ಬರಹಕ್ಕೆ ತಂದು ಬಳಸುವಲ್ಲಿ ಕಾಣಿಸಿಕೊಳ್ಳುತ್ತವೆ. ಆಡುನುಡಿಯೆಂಬುದು ಊರಿನಿಂದ ಊರಿಗೆ ಮತ್ತು ಜಾತಿಯಿಂದ ಜಾತಿಗೆ ಬೇರೆ ಬೇರಾಗಿರುತ್ತದೆ. ಆದರೆ, ಬರಹದ ನುಡಿ ಎಲ್ಲಾ ಊರು ಮತ್ತು ಜಾತಿಗಳಿಗೂ ಸಮಾನವಾಗಿರಬೇಕೆಂದು ನಾವು ಬಯಸುತ್ತೇವೆ. ಯಾಕೆಂದರೆ, ಹಾಗಿಲ್ಲವಾದರೆ ಒಂದು ಊರಿನ ಮತ್ತು ಜಾತಿಯ ಬರಹಗಾರರು ಬರೆದುದನ್ನು ಇನ್ನೊಂದು ಊರಿನ ಮತ್ತು ಜಾತಿಯ ಜನರಿಗೆ ಓದಿ ಅರ‍್ತಮಾಡಿಕೊಳ್ಳಲು ಕಶ್ಟವಾಗುತ್ತದೆ.

ಈ ಸಮಾನತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಬರಹದ ನುಡಿಯಲ್ಲಿ ಎಂತಹ ಮಾರ‍್ಪಾಡನ್ನು ನಡೆಸುವುದಿದ್ದರೂ ಅದು ಎಲ್ಲಾ ಊರು ಮತ್ತು ಜಾತಿಗಳಿಗೆ ಸೇರಿದ ಜನರಿಗೂ ಒಪ್ಪಿಗೆಯಾಗುವಂತಹದಾಗಿರಬೇಕು. ಎಲ್ಲಾ ಬರಹಗಾರರೂ ತಮಗೆ ಅನಿಸಿದ ಹಾಗೆ ತಮ್ಮ ಬರಹದ ನುಡಿಯಲ್ಲಿ ಮಾರ‍್ಪಾಡುಗಳನ್ನು ಮಾಡಹೊರಟರೆ ಈ ಸಮಾನತೆ ಪೂರ‍್ತಿ ಅಳಿದು ಹೋದೀತು.

ಬರಹದಲ್ಲಿ ತಪ್ಪು-ಸರಿ ಎಂಬ ಪರಿಕಲ್ಪನೆಯನ್ನು ಈ ಅರ‍್ತದಲ್ಲಿ ಬಳಸಲು ಸಾದ್ಯವಿದೆ. ಕನ್ನಡದ ಕೆಲವು ಆಡುನುಡಿಗಳಲ್ಲಿ ಪದಗಳ ಮೊದಲಿನ ಹಕಾರ ಬಿದ್ದುಹೋಗಿದೆ; ಹಾಲು ಎಂಬುದು ಆಲು ಎಂದಾಗಿದೆ, ಹಣ್ಣು ಎಂಬುದು ಅಣ್ಣು ಎಂದಾಗಿದೆ, ಹುಳ ಎಂಬುದು ಉಳ ಎಂದಾಗಿದೆ. ಈ ರೀತಿ ಕೆಲವರು ಕನ್ನಡಿಗರು ತಮ್ಮ ಆಡುನುಡಿಯ ಪದಗಳಲ್ಲಿದ್ದ ಹಕಾರವನ್ನು ಕಳೆದುಕೊಂಡುದರಲ್ಲಿ ತಪ್ಪಾಗಿರುವಂತಹದು ಏನೂ ಇಲ್ಲ. ಅದು ಅವರ ಆಡುನುಡಿಯಲ್ಲಿ ಸ್ವಾಬಾವಿಕವಾಗಿ ನಡೆದಿರುವ ಒಂದು ಮಾರ‍್ಪಾಡು ಮಾತ್ರ. ಇದಲ್ಲದೆ, ಅದು ಅವರ ಆಡುನುಡಿಯನ್ನು ಕೆಡಿಸಿಲ್ಲ; ಅದರ ಜೀವಂತಿಕೆಯನ್ನು ಉಳಿಸಿದೆ.

ಆದರೆ, ಕನ್ನಡದ ಬೇರೆ ಹಲವು ಆಡುನುಡಿಗಳಲ್ಲಿ ಪದಗಳ ಮೊದಲಿನ ಹಕಾರ ಈ ರೀತಿ ಬಿದ್ದುಹೋಗಿಲ್ಲ; ಹಾಗಾಗಿ, ಇವತ್ತು ಎಲ್ಲಾ ಊರು ಮತ್ತು ಜಾತಿಗಳಿಗೂ ಸಮಾನವಾಗಿರಬೇಕಾದ ಬರಹದ ಕನ್ನಡದಲ್ಲಿ ಹಕಾರವನ್ನು ಉಳಿಸಿಕೊಳ್ಳಬೇಕೇ ಇಲ್ಲವೇ ಬಿದ್ದುಹೋಗಲು ಬಿಡಬೇಕೇ ಎಂಬುದನ್ನು ನಿರ‍್ದರಿಸಬೇಕಾಗುತ್ತದೆ. ಉಳಿಸಬೇಕೆಂದು ಹೆಚ್ಚಿನ ಕನ್ನಡಿಗರೂ ಬಯಸುವುದಾದರೆ, ಬರಹದಲ್ಲಿ ಹಕಾರವನ್ನು ಬಳಸದಿರುವುದು (ಇಲ್ಲವೇ ಬೇಡದಲ್ಲಿ ಬಳಸುವುದು) ‘ತಪ್ಪಾ’ಗುತ್ತದೆ.

ಇದೇ ರೀತಿಯಲ್ಲಿ, ಇವತ್ತು ಬಡಗ ಕರ‍್ನಾಟಕದ ಕೆಲವು ಆಡುನುಡಿಗಳಲ್ಲಿ ನಾಮಪದಗಳ ಕೊನೆಯಲ್ಲಿದ್ದ ಎಕಾರ ಇಕಾರವಾಗಿದೆ. ಮನೆ ಎಂಬುದು ಮನಿ ಎಂದಾಗಿದೆ, ಕಾಗೆ ಎಂಬುದು ಕಾಗಿ ಎಂದಾಗಿದೆ, ಕುದುರೆ ಎಂಬುದು ಕುದ್ರಿ ಎಂದಾಗಿದೆ. ಆದರೆ ಕನ್ನಡದ ಬೇರೆ ಆಡುನುಡಿಗಳಲ್ಲಿ ಈ ಮಾರ‍್ಪಾಡು ನಡೆದಿಲ್ಲ. ಇಲ್ಲೂ ಕೂಡ, ಎಲ್ಲರಿಗೂ ಸಮಾನವಾಗಿರಬೇಕಾದ ಬರಹದ ಕನ್ನಡಕ್ಕೆ ಈ ಮಾರ‍್ಪಾಡನ್ನು ತರಬೇಕೇ ಬೇಡವೇ ಎಂಬುದನ್ನು ತೀರ‍್ಮಾನಿಸಬೇಕಾಗುತ್ತದೆ, ಮತ್ತು ಬೇಡವೆಂದು ತೀರ‍್ಮಾನಿಸಿದಲ್ಲಿ ಹಾಗೆ ತರುವುದು ಬರಹದ ಮಟ್ಟಿಗೆ ‘ತಪ್ಪು’ ಎಂಬುದಾಗಿ ಶಾಲೆಗಳಲ್ಲಿ ಮಕ್ಕಳಿಗೆ ಕಲಿಸಬೇಕಾಗುತ್ತದೆ.

ಆದರೆ, ಇಂತಹ ಯಾವ ಮಾರ‍್ಪಾಡೂ ಬರಹದ ಕನ್ನಡವನ್ನು ಕೆಡಿಸುವುದಿಲ್ಲ ಎಂಬುದನ್ನು ಇಲ್ಲಿ ಗಮನಿಸುವುದು ಅವಶ್ಯ. ಆಲು ಇಲ್ಲವೇ ಮನಿ ಎಂಬ ಪದರೂಪದಲ್ಲಿಲ್ಲದಂತಹ ನುಡಿಯ ಬಳಕೆಗೆ ಅವಶ್ಯವಾಗಿರುವ ಯಾವ ಅಂಶವೂ ಹಾಲು ಇಲ್ಲವೇ ಮನೆ ಎಂಬ ಪದರೂಪದಲ್ಲಿಲ್ಲ. ಇಲ್ಲಿ ತಪ್ಪು ಮತ್ತು ಸರಿ ಎಂಬವುಗಳು ಎಂತಹ ಬರಹ ನಮ್ಮೊಳಗೆ ಸಮಾನವಾಗಿ ಉಳಿಯಬೇಕು ಎಂಬ ತೀರ‍್ಮಾನವನ್ನಶ್ಟೇ ಅವಲಂಬಿಸಿದೆ. ಇವತ್ತು ಬಳಕೆಯಲ್ಲಿರುವ ತೀರ‍್ಮಾನವನ್ನು ನಾವು ಅವಶ್ಯವೆಂದೆನಿಸಿದಲ್ಲಿ ಮಾರ‍್ಪಡಿಸಬಲ್ಲೆವು, ಮತ್ತು ಹಾಗೆ ಮಾರ‍್ಪಡಿಸಿದಾಗ ಇವತ್ತು ತಪ್ಪು ಎಂದು ತಿಳಿದಿರುವ ಪದರೂಪಗಳು ಸರಿಯೆಂದೆನಿಸಬಲ್ಲುವು.

ಸಂಸ್ಕ್ರುತ ಎರವಲುಗಳನ್ನು ಹೆಚ್ಚು ಕಡಿಮೆ ಸಂಸ್ಕ್ರುತದಲ್ಲಿರುವ ಹಾಗೆಯೇ ಬರೆಯಬೇಕು ಎಂಬ ಕಟ್ಟಲೆ ಕನ್ನಡದ ಮಟ್ಟಿಗೆ ತೀರ ಅನವಶ್ಯಕವಾದುದು ಮಾತ್ರವಲ್ಲ, ಕನ್ನಡ ಬರಹವನ್ನು ಎಲ್ಲಾ ಕನ್ನಡಿಗರೂ ಸುಲಬವಾಗಿ ಕಲಿತು ತಮ್ಮದಾಗಿಸಿಕೊಳ್ಳುವಲ್ಲಿ ಒಂದು ದೊಡ್ಡ ತೊಡಕಾಗಿದೆ; ಕೆಲವೇ ಕೆಲವು ಜನರಶ್ಟೇ ಬರಹವನ್ನು ಬಳಸುತ್ತಿದ್ದ ಹಿಂದಿನ ಕಾಲದಲ್ಲಿ ಈ ಕಟ್ಟಲೆ ಹೆಚ್ಚು ತೊಡಕಿನದೆಂದು ಅನಿಸುತ್ತಿರಲಿಲ್ಲ. ಆದರೆ, ಇವತ್ತು ಎಲ್ಲಾ ಕನ್ನಡಿಗರೂ ಬರಹಬಲ್ಲವರಾಗಬೇಕಾಗಿದೆ; ಹಾಗಾಗಿ, ಕನ್ನಡಕ್ಕೆ ಬೇಡದ ಈ ಸಂಸ್ಕ್ರುತದ ಹೊರೆಯನ್ನು ತೆಗೆದುಹಾಕುವುದೇ ಒಳ್ಳೆಯದು.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 23: ಕನ್ನಡ ನುಡಿ ಎಶ್ಟು ಹಳೆಯದು?

ಮೂಲ URL: http://dnshankarabhat.net/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%a8%e0%b3%81%e0%b2%a1%e0%b2%bf-%e0%b2%8e%e0%b2%b6%e0%b3%8d%e0%b2%9f%e0%b3%81-%e0%b2%b9%e0%b2%b3%e0%b3%86%e0%b2%af%e0%b2%a6%e0%b3%81/

ನುಡಿಯರಿಮೆಯ ಇಣುಕುನೋಟ – 23

ಕನ್ನಡ ನುಡಿ ಎಶ್ಟು ಹಳೆಯದು ಎಂಬುದನ್ನು ತಿಳಿಯಲು ಹೆಚ್ಚಿನ ಅರಿವಿಗರೂ ಕನ್ನಡದ ಶಾಸನಗಳು ಇಲ್ಲವೇ ಕನ್ನಡ ಪದಗಳನ್ನು ಬಳಸಿರುವ ಪಳೆಯುಳಿಕೆಗಳು ಎಶ್ಟು ಹಳೆಯವು ಎಂಬುದನ್ನು ತಿಳಿಯಲು ಹೊರಡುತ್ತಾರೆ. ಆದರೆ, ಇಂತಹ ಪುರಾವೆಗಳು ಕನ್ನಡ ಬರಹ ಎಶ್ಟು ಹಳೆಯದು ಎಂಬುದನ್ನು ತಿಳಿಸಬಲ್ಲುವಲ್ಲದೆ ಕನ್ನಡ ನುಡಿ ಎಶ್ಟು ಹಳೆಯದು ಎಂಬುದನ್ನು ತಿಳಿಸಲಾರವು. ಯಾಕೆಂದರೆ, ಕನ್ನಡ ನುಡಿ ಎಂಬುದು ಮುಕ್ಯವಾಗಿ ಕನ್ನಡಿಗರ ಮಾತಲ್ಲದೆ ಬರಹವಲ್ಲ. ಎಲ್ಲಾ ನುಡಿಗಳಲ್ಲೂ ಮಾತು ಬರಹದಿಂದ ತುಂಬಾ ಹಿಂದೆಯೇ ಬಳಕೆಗೆ ಬಂದಿರುತ್ತದೆ. ಹಾಗಾಗಿ, ನಾವಿಲ್ಲಿ ಬರಹಕ್ಕಿಂತ ಬೇರಾಗಿರುವ ಪುರಾವೆಗಳನ್ನು ಹುಡುಕಿಹಿಡಿಯಬೇಕಾಗುತ್ತದೆ.

ನುಡಿಗಳ ಹುಟ್ಟು ಮನುಶ್ಯರ ಇಲ್ಲವೇ ಬೇರೆ ಉಸಿರಿಗಳ ಹುಟ್ಟಿಗಿಂತ ತೀರ ಬೇರಾದುದು: ಒಂದು ನುಡಿಯನ್ನಾಡುವ ಮಂದಿ ದೂರದ ಎರಡು ಊರುಗಳಲ್ಲಿ ನೆಲೆಸಿದಾಗ, ಅವರ ನಡುವೆ ಮೊದಲಿಗಿದ್ದ ಸಂಪರ‍್ಕ ಇಲ್ಲವಾಗುತ್ತದೆ, ಮತ್ತು ಇದರಿಂದಾಗಿ ಅವರಾಡುವ ನುಡಿಯಲ್ಲಿ ನಡೆಯುವ ಮಾರ‍್ಪಾಡುಗಳು ಒಂದೇ ಬಗೆಯವಾಗಿರುವುದಿಲ್ಲ. ಹಾಗಾಗಿ, ಸಮಯ ಕಳೆದಂತೆ ಅವರಾಡುವ ನುಡಿಗಳು ಬೇರಾಗುತ್ತಾ ಹೋಗುತ್ತವೆ, ಮತ್ತು ಕೊನೆಗೆ ಅವು ಎರಡು ಬೇರೆಯೇ ನುಡಿಗಳೆಂಬ ಅನಿಸಿಕೆಯನ್ನು ಕೊಡಲು ತೊಡಗುತ್ತವೆ.

ಒಂದು ನುಡಿ ಈ ರೀತಿ ಎರಡು ನುಡಿಗಳಾಗಿ ಕವಲೊಡೆದಾಗ, ಅವುಗಳಲ್ಲಿ ಯಾವುದು ಮೂಲ ನುಡಿ ಮತ್ತು ಯಾವುದು ಹೊಸದಾಗಿ ಹುಟ್ಟಿಕೊಂಡಿರುವ ನುಡಿ ಎಂದು ಬೇರ‍್ಪಡಿಸಿ ಹೇಳಲು ಬರುವುದಿಲ್ಲ. ಯಾಕೆಂದರೆ, ಮಾರ‍್ಪಾಡುಗಳು ಅವೆರಡರಲ್ಲೂ ನಡೆದಿರುತ್ತವೆ; ಒಂದರಲ್ಲಿ ನಡೆದ ಮಾರ‍್ಪಾಡುಗಳು ಇನ್ನೊಂದರಲ್ಲಿ ನಡೆದಿಲ್ಲವೆಂಬುದೇ ಅವೆರಡು ಬೇರೆ ಬೇರಾಗಿ ಕಾಣಿಸಿಕೊಳ್ಳಲು ಕಾರಣ. ಆದರೆ, ಇಂತಹ ಕಡೆಗಳಲ್ಲಿ ಒಂದು ಮೂಲ ನುಡಿ ಎರಡು ಹೊಸ ನುಡಿಗಳಾಗಿ ಕವಲೊಡೆದಿದೆಯೆಂದು ಹೇಳಲು ಬರುತ್ತದೆ, ಮತ್ತು ಎಶ್ಟು ಸಮಯಕ್ಕೆ ಹಿಂದೆ ಅವು ಆ ರೀತಿ ಕವಲೊಡೆದುವೋ ಅಶ್ಟು ಹಳೆಯವು ಆ ನುಡಿಗಳು ಎಂದು ತಿಳಿಯಲು ಬರುತ್ತದೆ.

ಕನ್ನಡ, ತಮಿಳು, ತೆಲುಗು, ಮಲಯಾಳ ಮೊದಲಾದ ಒಟ್ಟು ಸುಮಾರು ಇಪ್ಪತ್ತಯ್ದು ನುಡಿಗಳು ಮೂಲದ್ರಾವಿಡವೆಂಬ ಒಂದು ನುಡಿಯಿಂದ ಯಾವ ರೀತಿಯಲ್ಲಿ ಕವಲೊಡೆದು ಬೇರೆ ಬೇರೆ ನುಡಿಗಳಾಗಿ ಮಾರ‍್ಪಟ್ಟಿರಬೇಕು ಎಂಬುದನ್ನು ತಿಳಿದುಕೊಂಡಲ್ಲಿ, ಅವುಗಳಲ್ಲಿ ಕನ್ನಡ ಎಶ್ಟು ಹಿಂದೆ ಕವಲೊಡೆದಿದೆ ಎಂಬುದನ್ನು ತಿಳಿಯಲು ಬರುತ್ತದೆ.

ಮೂಲದ್ರಾವಿಡ ನುಡಿ ಮೊದಲಿಗೆ ತೆಂಕುದ್ರಾವಿಡ, ಬಡಗುದ್ರಾವಿಡ, ಮತ್ತು ನಡುದ್ರಾವಿಡ ಎಂಬ ಮೂರು ನುಡಿಗಳಾಗಿ ಕವಲೊಡೆದಿರಬೇಕು, ಮತ್ತು ಈ ಮೂರು ನುಡಿಗಳು ಆಮೇಲೆ ಬೇರೆ ಹಲವು ನುಡಿಗಳಾಗಿ ಕವಲೊಡೆಯುತ್ತಾ ಹೋಗಿ ಇವತ್ತಿನ ಇಪ್ಪತ್ತಯ್ದು ನುಡಿಗಳು ಬಳಕೆಗೆ ಬಂದಿರಬೇಕು ಎಂಬುದಾಗಿ ಕಲ್ಪಿಸಲಾಗಿದೆ. ಈ ಕಲ್ಪನೆಗೆ ಇವತ್ತಿನ ದ್ರಾವಿಡ ನುಡಿಗಳ ನಡುವೆ ಎಂತಹ ವ್ಯತ್ಯಾಸಗಳಿವೆ ಮತ್ತು ಎಶ್ಟು ವ್ಯತ್ಯಾಸಗಳಿವೆ ಎಂಬುದೇ ಆದಾರವಾಗಿರುತ್ತದೆ. ಎರಡು ನುಡಿಗಳ ನಡುವೆ ವ್ಯತ್ಯಾಸಗಳು ಹೆಚ್ಚಿದ್ದಶ್ಟೂ ಅವು ಕವಲೊಡೆದಿರುವ ಸಮಯ ಹೆಚ್ಚು ಹಿಂದಕ್ಕೆ ಹೋಗುತ್ತದೆ.

ದ್ರಾವಿಡ ನುಡಿಯ ಮೂರು ಕವಲುಗಳಲ್ಲಿ ಒಂದಾದ ತೆಂಕುದ್ರಾವಿಡ ನುಡಿ ಇವತ್ತು ಕನ್ನಡ, ತಮಿಳು, ಮಲಯಾಳ, ತುಳು, ಕೊಡಗು, ತೊದ, ಕೋತ ಮತ್ತು ಕೊರಗ ಎಂಬ ಒಟ್ಟು ಎಂಟು ಸ್ವತಂತ್ರ ನುಡಿಗಳಾಗಿ ಕವಲೊಡೆದಿದೆಯೆಂದು ಹೇಳಲಾಗುತ್ತದೆ; ಈ ಎಂಟು ನುಡಿಗಳಲ್ಲಿ, ಕೊರಗ ನುಡಿಯನ್ನು ಸದ್ಯಕ್ಕೆ ತೆಂಕುದ್ರಾವಿಡದಲ್ಲಿ ಗುಂಪಿಸಲಾಗಿದೆಯಾದರೂ, ನಿಜಕ್ಕೂ ಅದು ಯಾವ ರೀತಿಯಲ್ಲಿ ಉಳಿದ ನುಡಿಗಳೊಂದಿಗೆ ಸಂಬಂದಿಸಿದೆ ಎಂಬುದನ್ನು ಹೇಳಲು ಇನ್ನೂ ಸಾದ್ಯವಾಗಿಲ್ಲ. ಕೆಲವು ವಿಶಯಗಳಲ್ಲಿ ಅದು ಬಡಗುದ್ರಾವಿಡ ನುಡಿಗಳನ್ನು ಹೋಲುತ್ತಿರುವುದೇ ಇದಕ್ಕೆ ಕಾರಣ.

ಉಳಿದ ಏಳು ತೆಂಕುದ್ರಾವಿಡ ನುಡಿಗಳಲ್ಲಿ, ತುಳು ನುಡಿ ಮೊದಲಿಗೆ ಬೇರ‍್ಪಟ್ಟಿರಬೇಕು; ಯಾಕೆಂದರೆ, ಉಳಿದ ಎಲ್ಲಾ ತೆಂಕುದ್ರಾವಿಡ ನುಡಿಗಳಲ್ಲೂ ನಡೆದಿರುವ ಹಲವು ಮಾರ‍್ಪಾಡುಗಳು ತುಳುವಿನಲ್ಲಿ ನಡೆದಿಲ್ಲ. ಉಳಿದ ಆರು ತೆಂಕುದ್ರಾವಿಡ ನುಡಿಗಳಲ್ಲಿ ಮೊದಲಿಗೆ ಕವಲೊಡೆದು ಸ್ವತಂತ್ರ ನುಡಿಯೆನಿಸಿದುದು ಕನ್ನಡ ನುಡಿ. ಇದನ್ನೂ ಉಳಿದ ತೆಂಕುದ್ರಾವಿಡ ನುಡಿಗಳಲ್ಲಿ ನಡೆದಿರುವ, ಮತ್ತು ಕನ್ನಡದಲ್ಲಿ ನಡೆಯದಿರುವ (ಇಲ್ಲವೇ ಬೇರೆ ಬಗೆಯಲ್ಲಿ ನಡೆದಿರುವ) ಹಲವು ಮಾರ‍್ಪಾಡುಗಳ ಆದಾರದ ಮೇಲೆ ಹೇಳಲು ಬರುತ್ತದೆ.

ಇಂತಹ ಮಾರ‍್ಪಾಡುಗಳಲ್ಲಿ ಒಂದನ್ನು ಹಳೆಗನ್ನಡದ ಬೇಂಟೆ, ತೋಂಟ, ಎಂಟು, ತೆಂಕು ಮೊದಲಾದ ಪದಗಳನ್ನು ತಮಿಳಿನ ವೇಟ್ಟಯ್, ತೋಟ್ಟಮ್, ಎಟ್ಟು, ತೆಕ್ಕು ಮೊದಲಾದ ಪದಗಳೊಂದಿಗೆ ಹೋಲಿಸುವ ಮೂಲಕ ತಿಳಿಯಬಹುದು; ಇವುಗಳಲ್ಲಿ ಮೊದಲಿಗಿದ್ದ ಮೂಗುಲಿ(ಅನುನಾಸಿಕ)ಯನ್ನು ಕನ್ನಡ ಉಳಿಸಿಕೊಂಡಿದೆ; ಆದರೆ, ತಮಿಳು, ಕೊಡಗು (ಎಟ್ಟ್, ತೆಕ್ಕ್), ತೊದ ಮೊದಲಾದ ಉಳಿದ ನುಡಿಗಳು ಕಳೆದುಕೊಂಡಿವೆ. ಇನ್ನೊಂದು ವ್ಯತ್ಯಾಸವನ್ನು ಕನ್ನಡದ ಆಡಿದೆ, ನಂಬಿದೆ, ಕಟ್ಟಿದೆ, ಅಮುಕಿದೆ ಎಂಬ ಎಸಕ(ಕ್ರಿಯಾ)ರೂಪಗಳನ್ನು ತಮಿಳಿನ ಆಟಿನೇನ್, ನಂಪಿನೇನ್, ಕಟ್ಟಿನೇನ್, ಅಮುಕ್ಕಿನೇನ್ ಎಂಬವುಗಳೊಂದಿಗೆ ಹೋಲಿಸುವ ಮೂಲಕ ತಿಳಿಯಬಹುದು.

ಈ ರೂಪಗಳಲ್ಲಿ ಬಂದಿರುವ ಹಿಂಬೊತ್ತಿನ ಒಟ್ಟು (ಪ್ರತ್ಯಯ) ಕನ್ನಡದಲ್ಲಿ ನಕಾರವನ್ನು ಕಳೆದುಕೊಂಡಿದೆ; ಆದರೆ, ತಮಿಳು, ಕೊಡಗು, ತೊದ ಮೊದಲಾದ ಉಳಿದ ನುಡಿಗಳಲ್ಲಿ ಅದನ್ನು ಉಳಿಸಿಕೊಂಡಿದೆ. ಮತ್ತೊಂದು ವ್ಯತ್ಯಾಸವೆಂದರೆ, ತೆಂಕುದ್ರಾವಿಡದಲ್ಲಿದ್ದ ಅ ಮತ್ತು ಅಯ್‌ಗಳಲ್ಲಿ ಕೊನೆಗೊಳ್ಳುವ ಎರಡು ಬಗೆಯ ಎಸಕಪದಗಳು ಕನ್ನಡದಲ್ಲಿ ಒಂದೇ ಬಗೆಯವಾಗಿವೆ; ಕನ್ನಡದ ನಡೆದೆ ಮತ್ತು ತಡೆದೆ ಎಂಬ ರೂಪಗಳನ್ನು ತಮಿಳಿನ ನಟನ್ತೇನ್ ಮತ್ತು ತಟಯ್‌ನ್ತೇನ್ ಎಂಬ ರೂಪಗಳೊಂದಿಗೆ ಹೋಲಿಸಿನೋಡಿದಾಗ ಈ ವ್ಯತ್ಯಾಸ ಕಾಣಿಸುತ್ತದೆ. ಕೊಡಗು, ತೊದ ಮೊದಲಾದ ಉಳಿದ ನುಡಿಗಳೂ ಈ ವ್ಯತ್ಯಾಸವನ್ನು ತಮಿಳಿನ ಹಾಗೆ ಉಳಿಸಿಕೊಂಡಿವೆ.

ಉಳಿದ ಅಯ್ದು ತೆಂಕುದ್ರಾವಿಡ ನುಡಿಗಳಲ್ಲಿ ಮೊದಲಿಗೆ ಕೊಡಗು ನುಡಿ ಬೇರಾಗಿರಬೇಕು, ಮತ್ತು ಆಮೇಲೆ ತೊದ ಮತ್ತು ಕೋತ ನುಡಿಗಳು ಬೇರಾಗಿರಬೇಕು. ತಮಿಳು ಮತ್ತು ಮಲಯಾಳ ನುಡಿಗಳು ಮೂಲನುಡಿಯಿಂದ ಬೇರ‍್ಪಟ್ಟು ಸ್ವತಂತ್ರ ನುಡಿಗಳಾಗುವ ಮೊದಲೇ ಈ ಮೂರು ನುಡಿಗಳೂ ಬೇರ‍್ಪಟ್ಟಿರಬೇಕೆಂದು ಹೇಳುವುದಕ್ಕೆ ತಮಿಳು ಮತ್ತು ಮಲಯಾಳಗಳಲ್ಲಿ ನಡೆದ, ಮತ್ತು ಈ ಮೂರು ನುಡಿಗಳಲ್ಲಿ ನಡೆಯದಿದ್ದ (ಇಲ್ಲವೇ ಬೇರೆ ಬಗೆಯಲ್ಲಿ ನಡೆದ) ಹಲವು ಮಾರ‍್ಪಾಡುಗಳನ್ನು ಎತ್ತುಗೆಯಾಗಿ ಕೊಡಬಹುದು.

ಮೇಲೆ ಕೊಟ್ಟಿರುವ ವಿಶಯಗಳ ಮೇಲೆ, ತಮಿಳು ಬರಹ ಕನ್ನಡ ಬರಹದಿಂದ ಹಳೆಯದಾಗಿದೆಯಾದರೂ ತಮಿಳು ನುಡಿ ಕನ್ನಡ ನುಡಿಗಿಂತ ಹಳೆಯದಲ್ಲ; ಅದು ಸ್ವತಂತ್ರ ನುಡಿಯಾಗುವುದಕ್ಕಿಂತ (ಎಂದರೆ ಅದು ತನ್ನದೇ ಆದ ಪರಿಚೆಗಳನ್ನು ಪಡೆದುಕೊಳ್ಳುವುದಕ್ಕಿಂತ) ಎಶ್ಟೋ ಮೊದಲೇ ಕನ್ನಡ ನುಡಿ ಒಂದು ಸ್ವತಂತ್ರ ನುಡಿಯಾಗಿ ಬೇರ‍್ಪಟ್ಟಿತ್ತೆಂದು ಹೇಳಲು ಬರುತ್ತದೆ. ಆದರೆ, ಇದರಿಂದಾಗಿ ಕನ್ನಡಕ್ಕೊಂದು ‘ಮೇಲ್ತನ’ ದೊರೆತಿದೆಯೆಂದೇನೂ ನನಗೆ ಅನಿಸುವುದಿಲ್ಲ.

(ಈ ಬರಹ ವಿಜಯ ಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 27: ಪದ ಮತ್ತು ಅದರ ಹುರುಳು

ಮೂಲ URL: https://dnshankarabhat.net/%e0%b2%aa%e0%b2%a6-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%85%e0%b2%a6%e0%b2%b0-%e0%b2%b9%e0%b3%81%e0%b2%b0%e0%b3%81%e0%b2%b3%e0%b3%81/

ನುಡಿಯರಿಮೆಯ ಇಣುಕುನೋಟ – 27

ನುಡಿಗಳಲ್ಲಿ ಬಳಕೆಯಾಗುವ ಪದಗಳನ್ನು ಉಲಿಗಳ ಸೇರಿಕೆಯಿಂದ ಉಂಟುಮಾಡಲಾಗುತ್ತದೆ; ಮ್, ಅ, ನ್ ಮತ್ತು ಎ ಎಂಬ ನಾಲ್ಕು ಉಲಿಗಳ ಸೇರಿಕೆಯಿಂದ ‘ಮನೆ’ ಎಂಬ ಪದವನ್ನು ಉಂಟುಮಾಡಲಾಗಿದೆ; ಆದರೆ, ಈ ಉಲಿಗಳಲ್ಲಿ ಯಾವುದಕ್ಕೂ ಅದರದೇ ಆದ ಹುರುಳಿಲ್ಲ; ಅವುಗಳ ಸೇರಿಕೆಯಿಂದ ಉಂಟಾದ ‘ಮನೆ’ ಎಂಬ ಪದಕ್ಕೆ ಮಾತ್ರ ಹುರುಳಿದೆ. ಯಾಕೆಂದರೆ, ‘ಮ್’ ಎಂಬುದು ಮನೆ ಎಂಬ ಪದದಲ್ಲಿ ಮಾತ್ರವಲ್ಲದೆ, ಮಂಗ, ಮಜ್ಜಿಗೆ, ಕಡಿಮೆ, ಮಿಂಚು, ಕಮಟು, ಅಮ್ಮ ಮೊದಲಾದ ಬೇರೆಯೂ ಹಲವು ಪದಗಳಲ್ಲಿ ಬರುತ್ತದೆ, ಮತ್ತು ಈ ಎಲ್ಲಾ ಪದಗಳಿಗೂ ಸಮಾನವಾಗಿರುವ ಹುರುಳೊಂದನ್ನು ಕಂಡುಹಿಡಿದು, ಅದು ‘ಮ್’ ಎಂಬ ಉಲಿಯ ಹುರುಳು ಎಂಬುದಾಗಿ ತೋರಿಸಿಕೊಡಲು ಸಾದ್ಯವೇ ಇಲ್ಲ.

ಇದಲ್ಲದೆ, ಪದಗಳ ಅಂಗಗಳಾಗಿರುವ ಉಲಿಗಳು ಮಾರ‍್ಪಟ್ಟಾಗಲೂ ಅವುಗಳ ಹುರುಳು ಮಾರ‍್ಪಡದೆ ಉಳಿಯುತ್ತದೆ; ಈ ವಿಶಯವೂ ಹುರುಳೆಂಬುದು ಪದಗಳಿಗಿದೆಯಲ್ಲದೆ ಉಲಿಗಳಿಗಿಲ್ಲ ಎಂಬುದನ್ನು ಬೆಂಬಲಿಸುತ್ತದೆ. ಹಳೆಗನ್ನಡದ ಪಾಲ್ ಎಂಬುದು ಹಾಲು ಎಂಬುದಾಗಿ, ಬೞ್ದುಂಕು ಎಂಬುದು ಬದುಕು ಎಂಬುದಾಗಿ, ಬೆರಲ್ ಎಂಬುದು ಬೆರಳ್ ಎಂಬುದಾಗಿ ಹೊಸಗನ್ನಡದಲ್ಲಿ ಮಾರ‍್ಪಟ್ಟಾಗ, ಅದರಿಂದಾಗಿ ಆ ಪದಗಳಿಗೆ ಮೊದಲಿಗಿದ್ದ ಹುರುಳುಗಳಲ್ಲಿ ಮಾರ‍್ಪಾಡುಗಳೇನೂ ಆಗಿರಲಿಲ್ಲ.

ಉಲಿಗಳಿಗೆ ಅವುಗಳದೇ ಆದ ಹುರುಳಿಲ್ಲದಿದ್ದರೂ ಪದಗಳಿಗೆ ಅವುಗಳದೇ ಆದ ಹುರುಳಿದೆಯೆಂದು ಸಾಮಾನ್ಯವಾಗಿ ಹೇಳಲಾಗುತ್ತದೆ; ಅದರೆ, ಇಲ್ಲೂ ಕೆಲವು ಸಮಸ್ಯೆಗಳಿವೆ; ಪದನೆರಕೆ(ಡಿಕ್ಶನರಿ)ಗಳಲ್ಲಿ ಹೆಚ್ಚಿನ ಪದಗಳಿಗೂ ಎರಡು ಇಲ್ಲವೇ ಹೆಚ್ಚು ಹುರುಳುಗಳನ್ನು ಕೊಡಲಾಗುತ್ತದೆಯೆಂಬುದನ್ನು ಗಮನಿಸಬಹುದು; ಆದರೆ, ಈ ಪದಗಳನ್ನು ಸೊಲ್ಲುಗಳಲ್ಲಿ ಬಳಸಿದಾಗ, ಅವುಗಳ ಈ ಹಲವು ಹುರುಳುಗಳಲ್ಲಿ ಒಂದು ಮಾತ್ರ ನಮ್ಮ ಗಮನಕ್ಕೆ ಬರುತ್ತದೆ. ಎತ್ತುಗೆಗಾಗಿ, ಕಾಯು ಎಂಬ ಪದಕ್ಕೆ ಕಾಪಾಡು ಎಂಬ ಹುರುಳೂ ಇದೆ, ಬಿಸಿಮಾಡು ಎಂಬ ಹುರುಳೂ ಇದೆ; ಆದರೆ, ‘ನಾಯಿ ಮನೆಯನ್ನು ಕಾಯುತ್ತಿದೆ’ ಎಂಬ ಸೊಲ್ಲನ್ನು ಬಳಸಿದಾಗ ಕಾಯು ಪದದ ಮೊದಲನೆಯ ಹುರುಳು ಮಾತ್ರ ನಮ್ಮ ಗಮನಕ್ಕೆ ಬರುತ್ತದಲ್ಲದೆ, ಎರಡನೆಯ ಹುರುಳು ಗಮನಕ್ಕೆ ಬರುವುದಿಲ್ಲ.

ಇದೇ ರೀತಿಯಲ್ಲಿ ‘ಹಂಡೆಯಲ್ಲಿ ನೀರು ಕಾಯುತ್ತಿದೆ’ ಎಂಬ ಬೇರೊಂದು ಸೊಲ್ಲನ್ನು ಬಳಸಿದಾಗ ಅದರ ಎರಡನೆಯ ಹುರುಳು ಮಾತ್ರ ನಮ್ಮ ಗಮನಕ್ಕೆ ಬರುತ್ತದೆ. ಎಂದರೆ, ಒಂದು ಪದ ನಮಗೆ ಎಂತಹ ಹುರುಳನ್ನು ಕೊಡುತ್ತದೆ ಎಂಬುದು ಅದನ್ನು ಎಂತಹ ಸೊಲ್ಲಿನಲ್ಲಿ ಬಳಸಲಾಗಿದೆ ಎಂಬುದರ ಮೇಲೂ ಅವಲಂಬಿಸಿರುತ್ತದೆ. ಕೆಲವೊಮ್ಮೆ ಈ ರೀತಿ ಒಂದು ಪದಕ್ಕೆ ಒಂದಕ್ಕಿಂತ ಹೆಚ್ಚು ಹುರುಳುಗಳಿರುವುದು ತೊಂದರೆಯನ್ನೂ ಕೊಡಬಲ್ಲುದು. ಎತ್ತುಗೆಗಾಗಿ, ‘ಅವನು ಕರೆಯಲು ಬಂದಿದ್ದಾನೆ’ ಎಂದಿಶ್ಟೇ ಹೇಳಿದಲ್ಲಿ ಅವನು ಎಲ್ಲಿಗಾದರೂ ಬರಬೇಕೆಂದು ಹೇಳಲು ಬಂದಿದ್ದಾನೋ ಇಲ್ಲವೇ ದನವನ್ನು ಕರೆಯಲು ಬಂದಿದ್ದಾನೋ ಎಂಬ ವಿಶಯದಲ್ಲಿ ಗೊಂದಲವುಂಟಾಗಬಲ್ಲುದು. ಆದರೆ, ಸಾಮಾನ್ಯವಾಗಿ ನಾವು ಮಾತನ್ನು ಬಳಸುವಾಗ ಆ ರೀತಿ ಗೊಂದಲವುಂಟಾಗದಂತೆ ನೋಡಿಕೊಳ್ಳುತ್ತೇವೆ.

ಮಾತಿನಲ್ಲಿ ಬಳಕೆಯಾಗುವ ಪದಗಳಲ್ಲಿ ಹಲವಕ್ಕೆ (ಹೆಸರುಪದಗಳಿಗೆ) ವ್ಯಕ್ತಿ, ವಸ್ತು ಇಲ್ಲವೇ ಸಂಗತಿಯನ್ನು ಗುರುತಿಸುವ ಕಸುವಿರುತ್ತದೆ. ‘ಸುರೇಶ ಒಂದು ಹಣ್ಣು ತಿಂದ’ ಎಂಬ ಸೊಲ್ಲಿನಲ್ಲಿ ಎರಡು ಹೆಸರುಪದಗಳು ಬಂದಿದ್ದು, ಅವುಗಳಲ್ಲಿ ‘ಹಣ್ಣು’ ಎಂಬ ಪದ ಒಂದು ವಸ್ತುವನ್ನು ಗುರುತಿಸುತ್ತದೆ ಮತ್ತು ‘ಸುರೇಶ’ ಎಂಬ ಪದ ಒಬ್ಬ ವ್ಯಕ್ತಿಯನ್ನು ಗುರುತಿಸುತ್ತದೆ. ಪದಗಳ ಮೂಲಕ ಮಾತ್ರವಲ್ಲದೆ ಪದಕಂತೆಗಳ ಮೂಲಕವೂ ವ್ಯಕ್ತಿ, ವಸ್ತು ಮೊದಲಾದುವನ್ನು ಗುರುತಿಸಲು ಬರುತ್ತದೆ. ‘ಕುರ‍್ಚಿಯಲ್ಲಿ ಕುಳಿತಿರುವ ಮುದುಕ’ ಎಂಬ ಪದಕಂತೆ ಒಬ್ಬ ವ್ಯಕ್ತಿಯನ್ನು ಗುರುತಿಸುತ್ತದೆ, ಮತ್ತು ‘ರಾಜು ಕೊಟ್ಟ ಪುಸ್ತಕ’ ಎಂಬ ಇನ್ನೊಂದು ಪದಕಂತೆ ಒಂದು ವಸ್ತುವನ್ನು ಗುರುತಿಸುತ್ತದೆ.

ಈ ರೀತಿ ವ್ಯಕ್ತಿ, ವಸ್ತು ಮೊದಲಾದುವನ್ನು ಪದಗಳ ಮೂಲಕ ಗುರುತಿಸುವುದಕ್ಕೂ ಪದಕಂತೆಗಳ ಮೂಲಕ ಗುರುತಿಸುವುದಕ್ಕೂ ನಡುವೆ ಒಂದು ಮುಕ್ಯವಾದ ವ್ಯತ್ಯಾಸವಿದೆ. ಪದಕಂತೆಗಳ ಮೂಲಕ ಗುರುತಿಸುವಾಗ ಅವುಗಳ ಹುರುಳು ಬಳಕೆಯಾಗುತ್ತದೆ, ಆದರೆ ಪದಗಳ ಮೂಲಕ ಗುರುತಿಸುವಾಗ ಆ ರೀತಿ ಅವುಗಳ ಹುರುಳು ಬಳಕೆಯಾಗುವುದಿಲ್ಲ. ಅದಕ್ಕೆ ಬದಲು, ಪದಗಳಿಗೂ ಅವು ತಿಳಿಸಬಲ್ಲ ವ್ಯಕ್ತಿ, ವಸ್ತು ಮೊದಲಾದವುಗಳಿಗೂ ನಡುವಿರುವ ಸಂಬಂದ ಬಳಕೆಯಾಗುತ್ತದೆ.

ನಿಜಕ್ಕೂ ಒಂದು ಹೆಸರುಪದದ ಹುರುಳೇನು ಎಂಬುದನ್ನು ತಿಳಿಯಬೇಕಿದ್ದಲ್ಲಿ ಮೊದಲಿಗೆ ಅದು ಎಂತಹ ವ್ಯಕ್ತಿ, ವಸ್ತು ಇಲ್ಲವೇ ಸಂಗತಿಯನ್ನು ಗುರುತಿಸುತ್ತದೆ ಎಂಬುದನ್ನು ತಿಳಿಯಬೇಕಾಗುತ್ತದೆ. ಎತ್ತುಗೆಗಾಗಿ, ‘ನಾಯಿ’ ಎಂಬ ಪದ ಎಂತಹ ಪ್ರಾಣಿಯನ್ನು ಗುರುತಿಸಲು ಬಳಕೆಯಾಗುತ್ತದೆ, ಮತ್ತು ಆ ಪ್ರಾಣಿಯ ಪರಿಚೆ(ಗುಣ)ಗಳು ಎಂತಹವು ಎಂಬುದನ್ನು ತಿಳಿದಾಗ ಮಾತ್ರ ನಮಗೆ ಆ ಪದದ ಹುರುಳೇನು ಎಂಬುದು ಗೊತ್ತಾಗುತ್ತದೆ; ಹಾಗಾಗಿ, ಆ ಪ್ರಾಣಿಯ ಪರಿಚೆಗಳನ್ನೇ ಒಟ್ಟಾಗಿ ‘ನಾಯಿ’ ಎಂಬ ಪದದ ಹುರುಳು ಎಂದು ಹೇಳಬೇಕಾಗುತ್ತದೆ.

ಒಳರಚನೆಯಿರುವ ಪದಗಳ ಹುರುಳನ್ನೂ ಇದೇ ರೀತಿಯಲ್ಲಿ ಅವು ತಿಳಿಸುವ ವಸ್ತು, ವ್ಯಕ್ತಿ ಮೊದಲಾದವುಗಳ ಪರಿಚೆಗಳು ಎಂತಹವು ಎಂಬುದರಿಂದ ತಿಳಿಯಬೇಕಾಗುತ್ತದಲ್ಲದೆ ಅವುಗಳ ಒಳರಚನೆ ಎಂತಹದು ಎಂಬುದರಿಂದ ತಿಳಿಯಲು ಬರುವುದಿಲ್ಲ. ‘ಹೊಸಮನೆ’ ಎಂಬ ಪದದಲ್ಲಿ ‘ಹೊಸ’ ಮತ್ತು ‘ಮನೆ’ ಎಂಬ ಎರಡು ಪದಗಳು ಸೇರಿಕೊಂಡಿವೆ; ಆದರೆ, ಅದು ಗುರುತಿಸುವ ಮನೆ ಹೊಸದಾಗಿರಬಲ್ಲುದು, ಇಲ್ಲವೇ ತುಂಬಾ ಹಳೆಯದಾಗಿರಬಲ್ಲುದು; ಯಾಕೆಂದರೆ, ಒಮ್ಮೆ ಒಂದು ಮನೆಯನ್ನು ಆ ಹೆಸರಿನಿಂದ ಕರೆಯತೊಡಗಿದ ಮೇಲೆ, ಅದು ತುಂಬಾ ಹಳೆಯದಾದಾಗಲೂ ಆ ಹೆಸರನ್ನು ನಾವು ಬದಲಾಯಿಸಹೋಗುವುದಿಲ್ಲ; ಎಂದರೆ, ‘ಹೊಸಮನೆ’ ಎಂಬ ಪದದ ಹುರುಳು ಅದು ಗುರುತಿಸುವ ಮನೆಯ ಪರಿಚೆಗಳು ಬದಲಾದ ಹಾಗೆಲ್ಲ ಬದಲಾಗುತ್ತಾ ಹೋಗುತ್ತದೆ. ‘ಹಳೆಮನೆ’ ಎಂಬ ಹೆಸರಿರುವ ಇನ್ನೊಂದು ಮನೆಯನ್ನು ಕೆಡವಿ ಅಲ್ಲೊಂದು ಹೊಸಮನೆಯನ್ನು ಕಟ್ಟಿದಾಗಲೂ ಅದಕ್ಕೆ ಮೊದಲು ಬಳಕೆಯಲ್ಲಿದ್ದ ‘ಹಳೆಮನೆ’ ಎಂಬ ಹೆಸರು ಹಾಗೆಯೇ ಉಳಿದಿರುತ್ತದೆ; ಆ ಪದದ ಹುರುಳು ಮಾತ್ರ ಮಾರ‍್ಪಟ್ಟಿರುತ್ತದೆ.

ಹೆಸರುಪದಗಳಿಗೆ ಅವುಗಳ ಹುರುಳಿನೊಂದಿಗಿರುವ ಸಂಬಂದಕ್ಕಿಂತಲೂ ಅವು ಸೂಚಿಸುವ ವ್ಯಕ್ತಿ, ವಸ್ತು, ಸಂಗತಿ ಮೊದಲಾದವುಗಳೊಂದಿಗಿರುವ ಸಂಬಂದವೇ ಹೆಚ್ಚು ಮುಕ್ಯವಾದುದು ಎಂಬ ವಿಶಯ ಇದರಿಂದ ಸ್ಪಶ್ಟವಾಗುತ್ತದೆ. ಕೆಲವೆಡೆಗಳಲ್ಲಿ ಪದಗಳ ಒಳರಚನೆಯನ್ನು ಬಳಸಿ ಅವುಗಳ ಹುರುಳನ್ನು ಊಹಿಸಿಕೊಳ್ಳಬಲ್ಲೆವಾದರೂ ಈ ವಿಶಯದಲ್ಲಿ ಕೊನೆಯ ತೀರ‍್ಮಾನಕ್ಕೆ ಬರಲು ಇಂತಹ ಸಂಬಂದದ ನೆರವು ಬೇಕೇ ಬೇಕು.

ಸೊಲ್ಲುಗಳಲ್ಲಿ ಬರುವ ಎಸಕ(ಕ್ರಿಯಾ)ಪದ, ಪರಿಚೆ(ಗುಣ)ಪದ ಮೊದಲಾದವುಗಳ ಹುರುಳೇನೆಂಬುದನ್ನು ತೀರ‍್ಮಾನಿಸುವುದು ಇದಕ್ಕಿಂತಲೂ ಹೆಚ್ಚು ತೊಡಕಿನ ಕೆಲಸ. ಯಾಕೆಂದರೆ, ಅದಕ್ಕಾಗಿ ಅವು ಬರುವ ಪದಕಂತೆಗಳ ಇಲ್ಲವೇ ಸೊಲ್ಲುಗಳ ಹುರುಳೇನೆಂಬುದನ್ನು ಮೊದಲು ತಿಳಿದುಕೊಳ್ಳಬೇಕಾಗುತ್ತದೆ, ಮತ್ತು ಆ ಹುರುಳಿನಲ್ಲಿ ಯಾವುದೇ ಒಂದು ಎಸಕಪದದ ಇಲ್ಲವೇ ಪರಿಚೆಪದದ ಕೊಡುಗೆ ಎಂತಹದು ಎಂಬುದನ್ನು ಕಂಡುಹಿಡಿಯಬೇಕಾಗುತ್ತದೆ. ಪದಗಳೊಂದಿಗೆ ಬರುವ ಒಟ್ಟು(ಪ್ರತ್ಯಯ)ಗಳ ಹುರುಳನ್ನೂ ಇದೇ ರೀತಿಯಲ್ಲಿ ಆ ಪದಗಳ ಬಳಕೆಯಲ್ಲಿ ಅವುಗಳ ಕೊಡುಗೆ ಎಂತಹದು ಎಂಬುದನ್ನು ಪರಿಶೀಲಿಸುವ ಮೂಲಕ ತಿಳಿಯಬೇಕಾಗುತ್ತದೆ.

(ಈ ಬರಹ ವಿಜಯಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 28: ಎಣಿಕೆಯಲ್ಲೂ ಹಲವು ಬಗೆಗಳಿವೆ

ಮೂಲ URL: https://dnshankarabhat.net/%e0%b2%8e%e0%b2%a3%e0%b2%bf%e0%b2%95%e0%b3%86%e0%b2%af%e0%b2%b2%e0%b3%8d%e0%b2%b2%e0%b3%82-%e0%b2%b9%e0%b2%b2%e0%b2%b5%e0%b3%81-%e0%b2%ac%e0%b2%97%e0%b3%86%e0%b2%97%e0%b2%b3%e0%b2%bf%e0%b2%b5%e0%b3%86/

ನುಡಿಯರಿಮೆಯ ಇಣುಕುನೋಟ – 28

ಕನ್ನಡದಲ್ಲಿ ಎಣಿಸುವುದಕ್ಕೂ ಬೇರೆ ನುಡಿಗಳಲ್ಲಿ ಎಣಿಸುವುದಕ್ಕೂ ನಡುವೆ ಹಲವು ಬಗೆಯ ವ್ಯತ್ಯಾಸಗಳಿವೆ; ಕನ್ನಡದಲ್ಲಿ ಎಣಿಕೆಪದಗಳನ್ನು ಉಂಟುಮಾಡಲು ಮುಕ್ಯವಾಗಿ ಎರಡು ಬಗೆಯ ಹೊಲಬುಗಳನ್ನು ಬಳಸಲಾಗುತ್ತದೆ: ಒಂದು ಎಣಿಕೆಪದವನ್ನು ನೇರವಾಗಿ ಇನ್ನೊಂದು ಎಣಿಕೆಪದದೊಂದಿಗೆ ಸೇರಿಸಿ ಹೇಳುವುದು ಒಂದು ಹೊಲಬು; ಇದನ್ನು ಇಪ್ಪತ್ತು (ಎರಡು+ಹತ್ತು), ಇನ್ನೂರು (ಎರಡು+ನೂರು) ಎಂಬಂತಹ ಎಣಿಕೆಪದಗಳಲ್ಲಿ ಕಾಣಬಹುದು. ಒಂದು ಎಣಿಕೆಪದದ ಪತ್ತುಗೆ(ಸಂಬಂದ)ರೂಪವನ್ನು ಇನ್ನೊಂದು ಎಣಿಕೆಪದಕ್ಕೆ ಸೇರಿಸಿ ಹೇಳುವುದು ಇನ್ನೊಂದು ಹೊಲಬು; ಇದನ್ನು ಇಪ್ಪತ್ತಾರು (ಇಪ್ಪತ್ತರ+ಆರು), ನೂರ ಹತ್ತು (ನೂರರ+ಹತ್ತು) ಎಂಬಂತಹ ಎಣಿಕೆಪದಗಳಲ್ಲಿ ಕಾಣಬಹುದು.

ಇವುಗಳಲ್ಲಿ ಮೊದಲನೆಯದನ್ನು ಪೆಚ್ಚಿಸುವ (ಗುಣಿಸುವ) ಹುರುಳಿನಲ್ಲೂ, ಎರಡನೆಯದನ್ನು ಕೂಡಿಸುವ ಹುರುಳಿನಲ್ಲೂ ಬಳಸಲಾಗುತ್ತದೆ. ಆದರೆ, ಈ ಕಟ್ಟಲೆಗೆ ಒಂದು ಹೊರಪಡಿಕೆಯೂ ಇದೆ: ಒಂಬತ್ತು (ಒಂದು+ಹತ್ತು) ಎಂಬುದರಲ್ಲಿ ಮೊದಲನೆಯ ಹೊಲಬು ಬಳಕೆಯಾಗಿದೆಯಾದರೂ ಅದಕ್ಕೆ ‘ಹತ್ತರಿಂದ ಒಂದು ಕಡಿಮೆ’ ಎಂಬ ಕಳೆತದ ಹುರುಳಿದೆ.

ಒಂದರಿಂದ ಎಂಟರ ವರೆಗಿನ ಎಣಿಕೆಪದಗಳು, ಮತ್ತು ಹತ್ತು, ನೂರು ಎಂಬ ಪದಗಳು ಒತ್ತೆ ಪದಗಳು; ಹನ್ನೊಂದರಿಂದ ಹತ್ತೊಂಬತ್ತರ ವರೆಗಿನ ಪದಗಳಲ್ಲಿ ಹತ್ತು ಪದದ ಪತ್ತುಗೆರೂಪಕ್ಕೆ ಒಂದರಿಂದ ಒಂಬತ್ತರವರೆಗಿನ ಪದಗಳನ್ನು ಸೇರಿಸಲಾಗಿದೆ. ಅದಕ್ಕೆ ಮೇಲೆ, ಇಪ್ಪತ್ತು ಎಂಬುದರಲ್ಲಿ ಎರಡು (ಇಪ್) ಪದಕ್ಕೆ ಹತ್ತು (ಪತ್ತು) ಪದವನ್ನು ನೇರವಾಗಿ ಸೇರಿಸಲಾಗಿದೆ. ಇದೇ ರೀತಿಯಲ್ಲಿ, ಮುಂದೆಯೂ ಇಪ್ಪತ್ತರಿಂದ ಇಪ್ಪತ್ತೊಂಬತ್ತರ ವರೆಗಿನ ಪದಗಳಲ್ಲಿ ಇಪ್ಪತ್ತು ಪದದ ಪತ್ತುಗೆರೂಪಕ್ಕೆ ಒಂದರಿಂದ ಒಂಬತ್ತರ ವರೆಗಿನ ಪದಗಳನ್ನು ಸೇರಿಸಲಾಗಿದೆ (ಇಪ್ಪತ್ತೊಂದು, ಇಪ್ಪತ್ತೆರಡು), ಮತ್ತು ಮೂವತ್ತು ಪದದಲ್ಲಿ ಮೂರು ಪದಕ್ಕೆ ಹತ್ತು (ವತ್ತು) ಪದವನ್ನು ನೇರವಾಗಿ ಸೇರಿಸಲಾಗಿದೆ.

ಮುಂದೆ ತೊಂಬತ್ತೊಂಬತ್ತರ ವರೆಗೂ ಇದೇ ರೀತಿಯಲ್ಲಿ ಈ ಎರಡು ಹೊಲಬುಗಳ ಬಳಕೆಯಾಗಿದೆ: ಮೊದಲ ಒಂಬತ್ತು ಎಣಿಕೆಪದಗಳನ್ನು ಪತ್ತುಗೆರೂಪದ ಮೂಲಕ ಉಂಟುಮಾಡಲಾಗಿದೆ, ಮತ್ತು ಹತ್ತನೆಯ ಪದವನ್ನು ನಾಲ್ಕು, ಅಯ್ದು, ಆರು ಮೊದಲಾದ ಪದಗಳಿಗೆ ನೇರವಾಗಿ ಹತ್ತು ಪದವನ್ನು ಸೇರಿಸಿ ಉಂಟುಮಾಡಲಾಗಿದೆ. ನೂರು ಎಂಬುದನ್ನು ತಿಳಿಸಲು ಮಾತ್ರ ಒತ್ತೆ ಪದದ ಬಳಕೆಯಾಗಿದೆ.

ನೂರರ ಬಳಿಕವೂ ಇವೇ ಎರಡು ಹೊಲಬುಗಳನ್ನು ಬಳಸಲಾಗಿದೆ: ನೂರ ಒಂದು, ನೂರ ಎರಡು, … ನೂರ ಹತ್ತು, … ನೂರ ಮೂವತ್ತೆಂಟು … ಎಂಬುದಾಗಿ ಒಟ್ಟು ನೂರು ಎಣಿಕೆಗಳನ್ನು ನೂರು ಎಂಬ ಪದದ ಪತ್ತುಗೆ ರೂಪಕ್ಕೆ ಒಂದರಿಂದ ತೊಂಬತ್ತೊಂಬತ್ತರ ವರೆಗಿನ ಪದಗಳನ್ನು ಸೇರಿಸಿ ಹೇಳಲಾಗಿದೆ, ಮತ್ತು ಮುಂದಿನ ಎಣಿಕೆಪದಗಳನ್ನು ಎರಡು, ಮೂರು ಮೊದಲಾದ ಒಂಬತ್ತು ಪದಗಳಿಗೆ ನೇರವಾಗಿ ನೂರು ಪದವನ್ನು ಸೇರಿಸಿ ಇನ್ನೂರು, ಮುನ್ನೂರು ಮೊದಲಾದ ಪದಗಳನ್ನು ಉಂಟುಮಾಡಲಾಗಿದೆ. ಇದು ಕನ್ನಡತಮಿಳುತೆಲುಗು ಮೊದಲಾದ ದ್ರಾವಿಡ ನುಡಿಗಳಲ್ಲಿ ಬಳಕೆಯಾಗುವ ಎಣಿಕೆಯ ಹೊಲಬಾಗಿದೆ.

ಈ ಎಣಿಕೆಪದಗಳಲ್ಲಿ ಬರುವ ಪದಗಳ ಓರಣ ಅಂಕೆಗಳಲ್ಲಿ ಕಾಣಿಸುವ ಓರಣವನ್ನೇ ಹೋಲುತ್ತದೆ; ಎತ್ತುಗೆಗಾಗಿ, ‘ಮೂವತ್ತೆಂಟು’ ಎಂಬುದರಲ್ಲಿ ‘3(ಹತ್ತು)8’ ಎಂಬ ಓರಣವಿದೆ, ಮತ್ತು ಅದನ್ನು 38 ಎಂಬುದಾಗಿ ಅಂಕೆಯಲ್ಲಿ ಬರೆಯುವಾಗಲೂ 3 ಮೊದಲು ಬರುತ್ತದೆ, ಮತ್ತು 8 ಬಳಿಕ ಬರುತ್ತದೆ. ಇದೇ ರೀತಿಯಲ್ಲಿ, ‘ಎರಡು ಸಾವಿರದ ಮುನ್ನೂರ ನಲುವತ್ತಾರು’ ಎಂಬುದರಲ್ಲಿ ಕಾಣಿಸುವ ‘2(ಸಾವಿರ)3(ನೂರು)4(ಹತ್ತು)6’ ಎಂಬ ಓರಣವೇ 2346 ಎಂಬ ಅಂಕೆಯಲ್ಲೂ ಕಾಣಿಸುತ್ತದೆ.

ಆದರೆ, ಸಂಸ್ಕ್ರುತದಲ್ಲಿ ಮತ್ತು ಅದರಿಂದ ಬೆಳೆದು ಬಂದಿರುವಹಿಂದಿಮರಾಟಿ ಮೊದಲಾದ ಇಂಡೋ-ಆರ‍್ಯನ್ ನುಡಿಗಳಲ್ಲಿ ಎಣಿಕೆಯ ಪದಗಳನ್ನು ಬೇರೆಯೇ ಬಗೆಯಲ್ಲಿ ಕಟ್ಟಲಾಗಿದ್ದು, ಅವಕ್ಕೂ ಅಂಕೆಗಳಿಗೂ ನಡುವೆ ಇಂತಹ ಹೊಂದಾಣಿಕೆ ಕಾಣಿಸುವುದಿಲ್ಲ. ಎತ್ತುಗೆಗಾಗಿ, ಹಿಂದಿಯಲ್ಲಿ ‘ಅಡ್ತೀಸ್’ ಎಂಬ ಎಣಿಕೆಪದದಲ್ಲಿ ‘8-3(ಹತ್ತು)’ ಎಂಬ ಓರಣವಿದೆ; ಈ ಓರಣ 38 ಎಂಬ ಅಂಕೆಯಲ್ಲಿರುವ ಓರಣಕ್ಕಿಂತ ಬೇರಾಗಿದೆ; ಸಂಸ್ಕ್ರುತದಲ್ಲೂ ಎಪ್ಪತ್ತಯ್ದು ಎಂಬ ಹುರುಳನ್ನು ಕೊಡುವ ‘ಪಂಚಸಪ್ತತಿ’ ಎಂಬ ಎಣಿಕೆಪದದಲ್ಲಿ 5-7(ಹತ್ತು) ಎಂಬ ಓರಣವಿದ್ದು, ಅದು 75 ಎಂಬ ಅಂಕೆಯಲ್ಲಿರುವ ಓರಣಕ್ಕಿಂತ ಬೇರಾಗಿದೆ.

ಕನ್ನಡ ಮತ್ತು ಸಂಸ್ಕ್ರುತಗಳೆರಡರಲ್ಲೂ ಹತ್ತರ ಹೊಲಬು ಬಳಕೆಯಲ್ಲಿದೆ. ಆದರೆ, ಬೇರೆ ಕೆಲವು ನುಡಿಗಳಲ್ಲಿ ಬೇರೆಯೇ ಬಗೆಯ ಹೊಲಬುಗಳು ಬಳಕೆಯಾಗುತ್ತವೆ. ಅಸ್ಸಾಮಿನಲ್ಲಿ ವಾಸಿಸುವ ಕಸಾರಿ ಜನಾಂಗದವರ ಬೋಡೊ (ಇಲ್ಲವೇ ಬೋರೊ) ಎಂಬ ನುಡಿಯಲ್ಲಿ ಎಣಿಕೆಯನ್ನು ನಾಲ್ಕರ ಗುಂಪುಗಳಲ್ಲಿ ಮಾಡಲಾಗುತ್ತದೆ. ಈ ನುಡಿಯಲ್ಲಿ ಒಂದರಿಂದ ನಾಲ್ಕರ ವರೆಗೆ ಎಣಿಸಿ, ಮುಂದಕ್ಕೆ ಒಂದ್ನಾಲ್ಕು ಒಂದು (ಎಂದರೆ ಐದು), ಒಂದ್ನಾಲ್ಕು ಎರಡು (ಎಂದರೆ ಆರು), ಒಂದ್ನಾಲ್ಕು ಮೂರು (ಎಂದರೆ ಏಳು), ಎರಡ್ನಾಲ್ಕು (ಎಂದರೆ ಎಂಟು) ಎಂಬುದಾಗಿ ಎಣಿಕೆ ಸಾಗುತ್ತದೆ. ಹನ್ನೊಂದು ಎನ್ನಲು ಈ ನುಡಿಯಲ್ಲಿ ಎರಡ್ನಾಲ್ಕು ಮೂರು ಎನ್ನಬೇಕು, ಮತ್ತು ಹದಿನಾಲ್ಕು ಎನ್ನಲು ಮೂರ್ನಾಲ್ಕು ಎರಡು ಎನ್ನಬೇಕು.

ಬೋಡೊ ನುಡಿಯಲ್ಲಿ ಐದಕ್ಕೂ ಒಂದು ಪದ ಇದೆಯಾದ ಕಾರಣ, ಈ ನಾಲ್ಕರ ಹೊಲಬಿನಲ್ಲಿ ಇಪ್ಪತ್ತರವರೆಗೆ ಲೆಕ್ಕ ಹಾಕಲು ಬರುತ್ತದೆ; ಅದಕ್ಕಿಂತ ಹೆಚ್ಚಿನ ಎಣಿಕೆಯನ್ನು ನಡೆಸಲು, ಅದಕ್ಕೆ ಹೊಸದೊಂದು ಹೊಲಬು ಬೇಕಾಗುತ್ತದೆ. ಇದಕ್ಕಾಗಿ ನಮ್ಮಲ್ಲಿ ನೂರರ ಹೊಲಬಿರುವಂತೆ, ಬೋಡೊ ನುಡಿಯಲ್ಲಿ ಇಪ್ಪತ್ತರ ಹೊಲಬಿದೆ. ಈ ಹೊಲಬಿನಂತೆ, ಇಪ್ಪತ್ತಾರು ಎನ್ನಲು ‘ಒಂದಿಪ್ಪತ್ತು ಒಂದ್ನಾಲ್ಕು ಎರಡು’ ಎನ್ನಬೇಕು, ಮತ್ತು ಎಪ್ಪತ್ತಮೂರು ಎನ್ನಲು ‘ಮೂರಿಪ್ಪತ್ತು ಮೂರ್ನಾಲ್ಕು ಒಂದು’ (3 x 20) + (3 x 4) + 1 ಎನ್ನಬೇಕು. ಇಂತಹ ಎಣಿಕೆ ನಮ್ಮದರಿಂದ ತೊಡಕಾದುದೆಂದು ನಮಗೆ ತೋರಬಹುದು, ಆದರೆ ಬೋಡೊ ನುಡಿಯಲ್ಲಿ ಮಾತನಾಡುವವರಿಗೆ ನಮ್ಮಲ್ಲಿರುವ ಹತ್ತರ ಹೊಲಬಿಗಿಂತ ಅವರ ನಾಲ್ಕರ ಹೊಲಬೇ ಒಳ್ಳೆಯದೆಂದು ಅನಿಸದಿರದು.

ನಮ್ಮಲ್ಲಿ ಎಣಿಕೆಯ ಪದಗಳನ್ನು ಉಂಟುಮಾಡುವಲ್ಲಿ ಹತ್ತರ ಹೊಲಬು ಬಳಕೆಯಲ್ಲಿದೆಯಾದ ಕಾರಣ, ಅದೇ ಹತ್ತರ ಹೊಲಬಿನಲ್ಲಿ ಉಂಟುಮಾಡಿರುವ ಲೀಟರ್, ರುಪಾಯಿ, ಗ್ರಾಮ್ ಮೊದಲಾದ ಅಳತೆಪದಗಳ ಬಳಕೆ ಮೊದಲಿಗಿದ್ದ ರಾತಲು, ಸೇರು, ಅಡಿ ಮೊದಲಾದವುಗಳಿಗಿಂತ ಒಳ್ಳೆಯವೆಂದು ಅನಿಸುತ್ತದೆ; ಆದರೆ, ನಾಲ್ಕರ ಹೊಲಬನ್ನು ಬಳಸುವವರಿಗೆ ಅವು ಹಿಂದಿನವಕ್ಕಿಂತ ಒಳ್ಳೆಯವೆಂದೇನೂ ಅನಿಸಬೇಕಾಗಿಲ್ಲ.

ಎಣಿಕೆಪದಗಳ ಬಳಕೆಯಲ್ಲೂ ನುಡಿಗಳ ನಡುವೆ ಹಲವು ಬಗೆಯ ವ್ಯತ್ಯಾಸಗಳನ್ನು ಕಾಣಬಹುದು: ಕನ್ನಡದಲ್ಲಿ ಎಣಿಕೆಪದಗಳನ್ನು ಮರ, ಮನೆ, ಹುಡುಗ, ಚೆಂಡು ಮೊದಲಾದ ಪದಗಳಿಗೆ ನೇರವಾಗಿ ಸೇರಿಸಲು ಬರುತ್ತದೆ (ಮೂರು ಮನೆಗಳು, ಇಪ್ಪತ್ತೊಂದು ಚೆಂಡುಗಳು); ಆದರೆ, ನೀರು, ಅಕ್ಕಿ, ಎಣ್ಣೆ, ಹಾಲು ಮೊದಲಾದ ಪದಗಳಿಗೆ ಎಣಿಕೆಪದಗಳನ್ನು ಸೇರಿಸಬೇಕಿದ್ದಲ್ಲಿ, ಮೊದಲಿಗೆ ಅವಕ್ಕೆ ಅಳತೆಯನ್ನು ತಿಳಿಸುವ ಪದಗಳನ್ನು ಸೇರಿಸಬೇಕಾಗುತ್ತದೆ (ಮೂರು ಕಿಲೋ ಅಕ್ಕಿ, ಎರಡು ಲೀಟರ್ ಹಾಲು). ಇದಕ್ಕೆ ಬದಲು, ಬೋಡೊ ನುಡಿಯಲ್ಲಿ ಯಾವ ಪದಕ್ಕೂ ಎಣಿಕೆಪದಗಳನ್ನು ನೇರವಾಗಿ ಸೇರಿಸಲು ಬರುವುದಿಲ್ಲ; ಒಂದು ಪದ ತಿಳಿಸುವ ವ್ಯಕ್ತಿ ಇಲ್ಲವೇ ವಸ್ತು ಎಂತಹದು ಎಂಬುದನ್ನು ಅಡಕವಾಗಿ ತಿಳಿಸುವ ಪದವನ್ನು ಅದಕ್ಕೆ ಮೊದಲು ಸೇರಿಸಿ, ಆಮೇಲೆ ಎಣಿಕೆ ಪದಗಳನ್ನು ಸೇರಿಸಬೇಕಾಗುತ್ತದೆ.

ಇಂತಹ ಬೇರೆಯೂ ಹಲವು ವ್ಯತ್ಯಾಸಗಳು ನುಡಿಗಳಲ್ಲಿ ಬಳಕೆಯಾಗುವ ಎಣಿಕೆಯ ಹೊಲಬುಗಳ ನಡುವೆ ಕಾಣಿಸಿಕೊಳ್ಳುತ್ತವೆ. ಇವೆಲ್ಲವೂ ಎಣಿಕೆಯನ್ನು ಬಳಸುವಲ್ಲಿ ಮಾನವನು ಕಂಡುಕೊಂಡಿರುವ ಜಾಣ್ಮೆಯ ಹೊಲಬುಗಳೆಂದು ಹೇಳಬಹುದು.

(ಈ ಬರಹ ವಿಜಯಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 29: ಪದಗಳ ಹಿನ್ನಡವಳಿಯನ್ನು ಅರಿಯುವ ಬಗೆ

ಮೂಲ URL: https://dnshankarabhat.net/%e0%b2%aa%e0%b2%a6%e0%b2%97%e0%b2%b3-%e0%b2%b9%e0%b2%bf%e0%b2%a8%e0%b3%8d%e0%b2%a8%e0%b2%a1%e0%b2%b5%e0%b2%b3%e0%b2%bf%e0%b2%af%e0%b2%a8%e0%b3%8d%e0%b2%a8%e0%b3%81-%e0%b2%85%e0%b2%b0%e0%b2%bf%e0%b2%af/

ನುಡಿಯರಿಮೆಯ ಇಣುಕುನೋಟ – 29

ಕನ್ನಡದ ಯಾವ ಪದವನ್ನು ಬೇಕಿದ್ದರೂ ಸಂಸ್ಕ್ರುತದ ಪದಗಳಿಂದ ಬಂದುವೆಂಬುದಾಗಿ ತೋರಿಸಿಕೊಡಬಲ್ಲೆವು ಎಂಬ ನಂಬಿಕೆ ಕೆಲವರಲ್ಲಿದೆ; ಹೀಗೆ ತೋರಿಸಿಕೊಡುವುದಕ್ಕಾಗಿ ಅವರು ಪದಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ ಕಾಣಿಸುವ ಹೋಲಿಕೆಗಳನ್ನು ಮಾತ್ರವಲ್ಲದೆ ಹಲವಾರು ಬಗೆಯ ಕಯ್ಚಳಕಗಳನ್ನೂ ಬಳಸುತ್ತಾರೆ.

ಈ ಕಯ್ಚಳಕಗಳ ಮೂಲಕ ಅವರು ಉಲಿ ಇಲ್ಲವೇ ಹುರುಳುಗಳಲ್ಲಿ ಹೋಲಿಕೆಗಳು ಕಾಣಿಸದಿದ್ದರೂ ಸಂಬಂದವನ್ನು ಕಾಣಬಲ್ಲರು; ಎತ್ತುಗೆಗಾಗಿ, ಕನ್ನಡದ ‘ನೆತ್ತರು’ ಪದವನ್ನು ಸಂಸ್ಕ್ರುತದ ‘ರುಧಿರ’ ಪದದಿಂದ ಪಡೆಯಬಲ್ಲರು; ಇಲ್ಲಿ ಹುರುಳಿನ ಹೋಲಿಕೆಯಿದ್ದರೂ ಉಲಿಯ ಹೋಲಿಕೆ ತುಂಬಾ ಕಡಿಮೆ; ಕನ್ನಡದ ‘ಕಟ್ಟೆ’ ಪದವನ್ನು ಸಂಸ್ಕ್ರುತದ ‘ಕಕ್ಷಾ’ (ಕಂಕುಳು) ಪದದಿಂದ ಪಡೆಯಬಲ್ಲರು; ಇಲ್ಲಿ ಹುರುಳಿನ ಹೋಲಿಕೆಯೂ ತುಂಬಾ ಕಡಿಮೆ. ಹೀಗಿದ್ದರೂ, ಕಯ್ಚಳಕಗಳ ಮೂಲಕ ಅವರು ಇವನ್ನು ಒಂದಕ್ಕೊಂದು ಜೋಡಿಸಿ ಬಿಡುತ್ತಾರೆ. ಇಂತಹ ಕಯ್ಚಳಕಗಳು ಅವರಿಗೆ ತಮ್ಮ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ನೆರವಾಗುತ್ತವೆಯಾದರೂ, ನಿಜಕ್ಕೂ ಆ ಪದಗಳ ಹಿನ್ನಡವಳಿ (ಚರಿತ್ರೆ) ಎಂತಹದು ಎಂಬುದನ್ನು ತಿಳಿದುಕೊಳ್ಳುವಲ್ಲಿ ಅವು ಯಾವ ನೆರವನ್ನೂ ನೀಡುವುದಿಲ್ಲ.

ಕನ್ನಡದ ಪದಗಳು ಎರಡು ಬಗೆಗಳಲ್ಲಿ ಸಂಸ್ಕ್ರುತ ಪದಗಳೊಂದಿಗೆ ಸಂಬಂದಿಸಿರಬಲ್ಲುವು: ಅವೆರಡೂ ಒಂದೇ ನುಡಿಕುಟುಂಬದ ನುಡಿಗಳೆಂಬುದೊಂದು ಬಗೆ, ಮತ್ತು ಅವುಗಳಲ್ಲಿ ಒಂದು ಇನ್ನೊಂದರಿಂದ ಪದಗಳನ್ನು ಎರವಲು ಪಡೆದಿದೆಯೆಂಬುದಿನ್ನೊಂದು ಬಗೆ. ಹಾಗಾಗಿ, ಯಾವ ಬಗೆಯ ಸಂಬಂದವನ್ನು ಅವುಗಳ ಪದಗಳ ನಡುವೆ ಕಾಣಲಾಗುತ್ತದೆ ಎಂಬುದನ್ನು ಮೊದಲು ತಿಳಿಸಬೇಕಾಗುತ್ತದೆ.

ನುಡಿಗಳಲ್ಲಿ ಕಾಲದಿಂದ ಕಾಲಕ್ಕೆ ಹಲವು ಬಗೆಯ ಮಾರ್‍ಪಾಡುಗಳು ನಡೆಯುತ್ತಲೇ ಇರುತ್ತವೆ; ಇವು ಉಲಿಗಳನ್ನು ಮಾರ್‍ಪಡಿಸಬಹುದು, ಪದಗಳನ್ನು ಇಲ್ಲವೇ ಅವುಗಳ ಹುರುಳುಗಳನ್ನು ಮಾರ್‍ಪಡಿಸಬಹುದು, ಮತ್ತು ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳನ್ನು ಮಾರ್‍ಪಡಿಸಬಹುದು. ಇಂತಹ ಹಲವು ಬಗೆಯ ಮಾರ್‍ಪಾಡುಗಳು ನಡೆದುದರಿಂದಾಗಿ ಹಳೆಗನ್ನಡವಿದ್ದುದು ನಡುಗನ್ನಡವಾಗಿ ಇವತ್ತು ಹೊಸಗನ್ನಡವಾಗಿದೆ, ಮತ್ತು ಹೊಸಗನ್ನಡವೂ ಹಲವು ಬಗೆಯ ಆಡುನುಡಿಗಳಾಗಿ ಒಡೆದುಕೊಂಡಿದೆ.

ಕಾಲದಿಂದ ಕಾಲಕ್ಕೆ ನಡೆಯುವ ಇಂತಹ ಮಾರ್‍ಪಾಡುಗಳಲ್ಲಿ ನುಡಿಯ ಉಲಿಗಳಲ್ಲಿ ನಡೆಯುವ ಮಾರ್‍ಪಾಡುಗಳೇ ತುಂಬಾ ಮುಕ್ಯವಾದವುಗಳು; ಯಾಕೆಂದರೆ, ಅವುಗಳಿಂದಾಗಿ ಪದಗಳ ಮತ್ತು ಒಟ್ಟು(ಪ್ರತ್ಯಯ)ಗಳ ರೂಪದಲ್ಲಿ ಮಾತ್ರವಲ್ಲದೆ, ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳಲ್ಲೂ ಮಾರ್‍ಪಾಡುಗಳು ನಡೆಯುತ್ತವೆ. ಕನ್ನಡದ ಹಿನ್ನಡವಳಿಯಲ್ಲಿ ಇಂತಹ ಹಲವು ಬಗೆಯ ಉಲಿಗಳ ಮಾರ್‍ಪಾಡುಗಳು ನಡೆದಿವೆ.

ಹಳೆಗನ್ನಡದ ಪಕಾರ ಹಕಾರವಾಗಿರುವುದು (ಪಾಲು>ಹಾಲು, ಪಳೆ>ಹಳೆ, ಪೋಗು>ಹೋಗು); ರ-ಱ, ಳ-ೞಗಳ ನಡುವಿನ ವ್ಯತ್ಯಾಸ ಇಲ್ಲವಾಗಿರುವುದು, ಉದ್ದ ತೆರೆಯುಲಿ (ಸ್ವರ) ಮತ್ತು ತಡೆಯುಲಿ(ಸ್ಪರ‍್ಶ)ಗಳ ನಡುವಿನ ಮೂಗುಲಿ (ಅನುನಾಸಿಕ) ಬಿದ್ದುಹೋಗಿರುವುದು (ನೂಂಕು>ನೂಕು, ದಾಂಟು>ದಾಟು) ಮೊದಲಾದುವು ಇಂತಹ ಉಲಿಗಳ ಮಾರ್‍ಪಾಡುಗಳು.

ಇವು ಉಲಿಗಳ ಮಾರ್‍ಪಾಡುಗಳಲ್ಲದೆ ಪದಗಳ ಮಾರ್‍ಪಾಡುಗಳಲ್ಲ ಎಂಬುದನ್ನು ಗಮನಿಸುವುದು ಅವಶ್ಯ; ಪಕಾರ ಹಕಾರವಾಗುವಂತಹ ಒಂದು ಮಾರ್‍ಪಾಡು ನಡೆದಾಗ, ಪಕಾರವಿದ್ದ ಎಲ್ಲಾ (ಸಾವಿರಕ್ಕಿಂತಲೂ ಹೆಚ್ಚು) ಪದಗಳೂ ಅದಕ್ಕೆ ಒಳಗಾಗಿರುತ್ತವೆ. ಇಂತಹ ಮಾರ್‍ಪಾಡುಗಳು ಒಂದು ಉಲಿಯನ್ನು ಎಲ್ಲೆಡೆಗಳಲ್ಲೂ ತಾಗಬಹುದು, ಇಲ್ಲವೇ ಕೆಲವೆಡೆಗಳಲ್ಲಿ ಮಾತ್ರ ತಾಗಬಹುದು; ಪಕಾರ ಹಕಾರವಾಗುವ ಮಾರ್‍ಪಾಡು ಪಕಾರವನ್ನು ಎಲ್ಲೆಡೆಗಳಲ್ಲೂ ತಾಗಿದೆ; ಆದರೆ, ಎಕಾರ ಇಕಾರವಾಗುವ ಇನ್ನೊಂದು ಮಾರ್‍ಪಾಡು ಎಕಾರದ ಬಳಿಕ ಒತ್ತೆ ಮುಚ್ಚುಲಿ (ವ್ಯಂಜನ) ಮತ್ತು ಇಕಾರ ಇಲ್ಲವೇ ಉಕಾರ ಬಂದಿರುವಲ್ಲಿ ಮಾತ್ರ ನಡೆದಿದೆ, ಬೇರೆಡೆಗಳಲ್ಲಿ ಎಕಾರ ಮಾರ್‍ಪಡದೆ ಉಳಿದಿದೆ (ಬಿಳಿ, ಬಿಸಿ, ನಿಡು ಎಂಬಂತಹ ಪದಗಳಲ್ಲಿ ಈ ಮಾರ್‍ಪಾಡು ನಡೆದಿದೆ. ಆದರೆ ಬೆಳ್ಳಗೆ, ಬೆಚ್ಚಗೆ, ನೆಟ್ಟಗೆ ಎಂಬಂತಹ ಪದಗಳಲ್ಲಿ ನಡೆದಿಲ್ಲ). ಇದಲ್ಲದೆ, ಇಂತಹ ಮಾರ್‍ಪಾಡುಗಳಿಗೆಲ್ಲ ಒಂದು ಗಡುವಿರುತ್ತದೆ; ಈ ಗಡುವು ಮುಗಿದ ಮೇಲೆ ಹಿಂದಿನ ಬರಹಗಳಿಂದ (ಪಾಲು, ಪುಟ್ಟ, ಪೆಟ್ಟು) ಇಲ್ಲವೇ ಬೇರೆ ನುಡಿಗಳಿಂದ (ಪಾಪ, ಪುಣ್ಯ, ಪೂಜೆ) ಪದಗಳು ಎರವಲಾಗಿ ಬಂದು ಈ ಮಾರ್‍ಪಾಡಿಗೆ ಹೊರಪಡಿಕೆಗಳಾಗಿ ಕಾಣಿಸಬಲ್ಲುವು.

ಎರಡು ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ತೀರ‍್ಮಾನಿಸುವಲ್ಲೆಲ್ಲ ಇಂತಹ ಉಲಿಗಳ ಮಾರ್‍ಪಾಡುಗಳನ್ನೇ ಮುಕ್ಯವಾದ ನೆಲೆಯಾಗಿ ಬಳಸಿಕೊಳ್ಳಲಾಗುತ್ತದೆ. ಯಾಕೆಂದರೆ, ನುಡಿಗಳಲ್ಲಿ ನಡೆಯುವ ಹಲವು ಬಗೆಯ ಮಾರ್‍ಪಾಡುಗಳಲ್ಲಿ ಉಲಿಗಳ ಮಾರ್‍ಪಾಡುಗಳ ಮೇಲೆ ಮಾತ್ರ ಪದಗಳ ಹುರುಳುಗಳು ಯಾವ ಪ್ರಬಾವವನ್ನೂ ಬೀರುವುದಿಲ್ಲ; ನೇರವಾಗಿ ಪದಗಳಲ್ಲಿ ಇಲ್ಲವೇ ಅವುಗಳ ಬಳಕೆಯ ಹಿಂದಿರುವ ಕಟ್ಟಲೆಗಳಲ್ಲಿ ನಡೆಯುವ ಮಾರ್‍ಪಾಡುಗಳ ಮೇಲೆ ಅವು ಹಲವು ಬಗೆಗಳಲ್ಲಿ ಪ್ರಬಾವವನ್ನು ಬೀರುತ್ತವೆ, ಮತ್ತು ಈ ರೀತಿ ಹುರುಳುಗಳಿಂದ ಪ್ರಬಾವಿತವಾಗಿರುವ ಮಾರ್‍ಪಾಡುಗಳನ್ನು ಕಚಿತವಾದ ಕಟ್ಟಲೆಗಳಲ್ಲಿ ಸೆರೆಹಿಡಿಯಲು ಬರುವುದಿಲ್ಲ; ಯಾಕೆಂದರೆ, ಹುರುಳುಗಳಿಂದ ಪ್ರಬಾವಿತವಾದ ಮಾರ್‍ಪಾಡುಗಳಿಗೆ ಹಲವಾರು ಬಗೆಯ ಹೊರಪಡಿಕೆಗಳಿರುತ್ತವೆ.

ಹಾಗಾಗಿ, ಕನ್ನಡ ಮತ್ತು ಸಂಸ್ಕ್ರುತ ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂಬ ತೀರ್‍ಮಾನಕ್ಕೆ ಬರಬೇಕಿದ್ದಲ್ಲಿ ಕನ್ನಡದ ಹಿನ್ನಡವಳಿಯಲ್ಲಿ ನಡೆದ ಉಲಿಗಳ ಮಾರ್‍ಪಾಡುಗಳನ್ನೇ ಮುಕ್ಯ ನೆಲೆಯಾಗಿ ಬಳಸಿಕೊಳ್ಳಬೇಕಾಗುತ್ತದೆ. ಎಂದರೆ, ಕನ್ನಡ ಮತ್ತು ಸಂಸ್ಕ್ರುತ ಪದಗಳ ನಡುವೆ ಕಾಣಿಸುವ ವ್ಯತ್ಯಾಸಗಳು ಕನ್ನಡದ ಹಿನ್ನಡವಳಿಯಲ್ಲಿ ನಡೆದಿದ್ದ ಹಲವು ಬಗೆಯ ಉಲಿಗಳ ಮಾರ್‍ಪಾಡುಗಳಿಂದಾಗಿ ಮೂಡಿಬಂದಿವೆ ಎಂಬುದಾಗಿ ತೋರಿಸಿಕೊಡಲು ಸಾದ್ಯವಾದಾಗ ಮಾತ್ರ ಕನ್ನಡ ಸಂಸ್ಕ್ರುತದಿಂದ ಬೆಳೆದುಬಂದಿದೆ ಎಂಬುದನ್ನು ಒಪ್ಪಿಕೊಳ್ಳಲು ಬರುತ್ತದೆ. ಆದರೆ, ಇದುವರೆಗೆ ಯಾರಿಗೂ ಆ ರೀತಿ ತೋರಿಸಿಕೊಡಲು ಸಾದ್ಯವಾಗಿಲ್ಲ.

ಹಾಗಾಗಿ, ಸದ್ಯಕ್ಕಂತೂ ಕನ್ನಡ ಮತ್ತು ಸಂಸ್ಕ್ರುತ ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿಲ್ಲವೆಂಬುದನ್ನು ಒಪ್ಪಿಕೊಳ್ಳಬೇಕಾಗುತ್ತದೆ, ಮತ್ತು ಕನ್ನಡದಲ್ಲಿ ಮೂಲದ್ರಾವಿಡ ನುಡಿಯಿಂದ ಬಂದ ಕನ್ನಡದವೇ ಆದ ಪದಗಳು, ಮತ್ತು ಸಂಸ್ಕ್ರುತವೇ ಮೊದಲಾದ ಬೇರೆ ನುಡಿಗಳಿಂದ ಎರವಲಾಗಿ ಬಂದ ಪದಗಳು ಎಂಬುದಾಗಿ ಎರಡು ಬಗೆಯ ಪದಗಳು ಇವೆಯೆಂಬುದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ.

ಕನ್ನಡದ ಪದಗಳಿಗೂ ಸಂಸ್ಕ್ರುತದ ಪದಗಳಿಗೂ ನಡುವೆ ಅವುಗಳ ಉಲಿಗಳಲ್ಲಿ ಮತ್ತು ಹುರುಳುಗಳಲ್ಲಿ ಹೋಲಿಕೆಯಿದೆಯಾದರೆ, ಅದಕ್ಕೆ ಹಲವು ಕಾರಣಗಳಿರಬಲ್ಲುವು. ಎತ್ತುಗೆಗಾಗಿ, ಈ ಎಲ್ಲಾ ಪದಗಳನ್ನೂ ಉಂಟುಮಾಡಿದವರು ಮಾನವರೇ ಎಂಬುದೊಂದು ಕಾರಣ; ಹೋಲಿಕೆ ಬರಿಯ ಆಕಸ್ಮಿಕವಾಗಿರಬಹುದೆಂಬುದಿನ್ನೊಂದು ಕಾರಣ. ಹಾಗಾಗಿ, ಒಂದು ನುಡಿ ಇನ್ನೊಂದರಿಂದ ಎರವಲು ಪಡೆದಿದೆಯೆಂಬುದು ಪದಗಳ ನಡುವಿರುವ ಹೋಲಿಕೆಗಳಿಗಿರುವ ಹಲವು ಕಾರಣಗಳಲ್ಲಿ ಒಂದು ಮಾತ್ರ. ಇದಲ್ಲದೆ, ಇಲ್ಲಿಯೂ ಒಂದು ಪದವನ್ನು ಯಾವ ನುಡಿ ಯಾವ ನುಡಿಯಿಂದ ಎರವಲಾಗಿ ಪಡೆದಿದೆ ಎಂಬುದನ್ನು ತೀರ್‍ಮಾನಿಸುವಲ್ಲಿ ಅರಕೆಗೆ ನೆಲೆಯಿದೆ.

ಸಾಮಾನ್ಯವಾಗಿ, ಒಂದು ಪದದ ಹರಹು ಎಂತಹದು ಎಂಬುದರ ಮೇಲೆ ಅದರ ಹಿನ್ನಡವಳಿಯೆಂತಹದು ಎಂಬುದನ್ನು ತೀರ್‍ಮಾನಿಸಲಾಗುತ್ತದೆ; ಎತ್ತುಗೆಗಾಗಿ, ಕನ್ನಡದ ಒಂದು ಪದಕ್ಕೆ ಸಮಾನವಾದ ಪದಗಳು ತಮಿಳು, ತೆಲುಗು, ಗೋಂಡಿ, ಕುಡುಕ್ ಮೊದಲಾದ ಬೇರೆ ಹಲವು ದ್ರಾವಿಡ ನುಡಿಗಳಲ್ಲೂ ಕಾಣಿಸಿಕೊಳ್ಳುತ್ತಿವೆಯಾದರೆ, ಮತ್ತು ಸಂಸ್ಕ್ರುತವನ್ನು ಹೊರತುಪಡಿಸಿ ಉಳಿದ ಲ್ಯಾಟಿನ್, ಗ್ರೀಕ್, ಪರ್‍ಶಿಯನ್ ಮೊದಲಾದ ಇಂಡೋ-ಯುರೋಪಿಯನ್ ನುಡಿಗಳಲ್ಲಿ ಕಾಣಿಸುವುದಿಲ್ಲವಾದರೆ, ಅದು ಕನ್ನಡದ್ದೇ ಆದ ಪದ, ಮತ್ತು ಸಂಸ್ಕ್ರುತಕ್ಕೇನೇ ಅದು ದ್ರಾವಿಡ ನುಡಿಗಳಿಂದ ಎರವಲಾಗಿ ಬಂದಿದೆ ಎಂದು ಹೇಳಬೇಕಾಗುತ್ತದೆ.

ಇಂತಹ ಅರಕೆಗಳನ್ನು ನಡೆಸದೆ ಬರಿಯ ಹೋಲಿಕೆಯ ಮೇಲೆ ಎಲ್ಲವೂ ಸಂಸ್ಕ್ರುತದಿಂದ ಬಂದಿವೆಯೆಂದು ಹೇಳುವುದನ್ನು ಒಂದು ಅರಿಮೆಯ ಹೇಳಿಕೆಯೆಂದು ತಿಳಿಯಲು ಬರುವುದಿಲ್ಲ.

(ಈ ಬರಹ ವಿಜಯಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 33: ಕನ್ನಡ ನುಡಿಯ ಸೊಗಡು

ದಿನಾಂಕ: 2014-04-14
ಮೂಲ URL: http://dnshankarabhat.net/%e0%b2%95%e0%b2%a8%e0%b3%8d%e0%b2%a8%e0%b2%a1-%e0%b2%a8%e0%b3%81%e0%b2%a1%e0%b2%bf%e0%b2%af-%e0%b2%b8%e0%b3%8a%e0%b2%97%e0%b2%a1%e0%b3%81/

ನುಡಿಯರಿಮೆಯ ಇಣುಕುನೋಟ – 33

ಎಲ್ಲಾ ನುಡಿಗಳಿಗೂ ಅವುಗಳದೇ ಆದ ಒಂದು ಸೊಗಡುಎಂಬುದಿರುತ್ತದೆ. ಇದನ್ನು ಬರಹಗಳು ಹೆಚ್ಚು ಕೆಡದಂತೆ ಉಳಿಸಿಕೊಳ್ಳಬೇಕು. ಇಲ್ಲವಾದರೆ ಅವು ತಮ್ಮ ಜೀವಂತಿಕೆಯನ್ನು ಕಳೆದುಕೊಳ್ಳುತ್ತವೆ, ಮತ್ತು ಸಾಮಾನ್ಯ ಜನರಿಂದ ದೂರವಾಗುತ್ತವೆ. ಅಂತಹ ಬರಹಗಳನ್ನು ಕಲಿಯುವ ಮತ್ತು ಬಳಸುವ ಕೆಲಸವೂ ಆ ನುಡಿಯನ್ನಾಡುವ ಜನರಿಗೆ ತುಂಬಾ ತೊಡಕಿನದಾಗುತ್ತದೆ. ನುಡಿಗಳಿಗಿರುವ ಈ ಸೊಗಡು ಅವುಗಳ ಪದಗಳಲ್ಲಿ ಬರುವ ಉಲಿಗಳಲ್ಲಿ, ಉಲಿಗಳ ಓರಣಗಳಲ್ಲಿ, ಪದಗಳಿಗೆ ಒಟ್ಟು(ಪ್ರತ್ಯಯ)ಗಳನ್ನು ಇಲ್ಲವೇ ಬೇರೆ ಪದಗಳನ್ನು ಸೇರಿಸಿದಾಗ ಅವುಗಳ ಉಲಿಗಳಲ್ಲಿ ನಡೆಯುವ ಮಾರ್ಪಾಡುಗಳಲ್ಲಿ, ಪದಗಳನ್ನು ಸೇರಿಸಿ ಬೇರೆ ಪದಗಳನ್ನು ಉಂಟುಮಾಡುವ ಬಗೆಗಳಲ್ಲಿ, ಮತ್ತು ಪದಗಳಿಂದ ಪದಕಂತೆಗಳನ್ನು ಮತ್ತು ಸೊಲ್ಲುಗಳನ್ನು ಉಂಟುಮಾಡುವ ಬಗೆಗಳಲ್ಲಿ ಕಾಣಿಸಿಕೊಳ್ಳುತ್ತದೆ.

ಕನ್ನಡಕ್ಕೂ ಇಂತಹ ತನ್ನದೇ ಆದ ಒಂದು ಸೊಗಡಿದೆ, ಮತ್ತು ಅದು ಸಂಸ್ಕ್ರುತ, ಹಿಂದಿ, ಇಂಗ್ಲಿಶ್ ಮೊದಲಾದ ಬೇರೆ ನುಡಿಗಳಿಗಿರುವ ಸೊಗಡಿಗಿಂತ ತೀರ ಬೇರಾಗಿದೆ; ಕನ್ನಡದ ಉಲಿಗಳು, ಅವುಗಳ ಓರಣಗಳು, ಅವುಗಳ ಸೇರಿಕೆಯ ಮಾರ್ಪಾಡುಗಳು, ಕನ್ನಡದಲ್ಲಿ ಪದ, ಪದಕಂತೆ ಮತ್ತು ಸೊಲ್ಲುಗಳನ್ನು ಉಂಟುಮಾಡುವ ಬಗೆಗಳು ಮೊದಲಾದುವನ್ನು ಸಂಸ್ಕ್ರುತದಂತಹ ಬೇರೆ ನುಡಿಗಳಲ್ಲಿ ಕಾಣಿಸುವ ಬಗೆಗಳೊಂದಿಗೆ ಹೋಲಿಸಿ ನೋಡಿದಾಗ, ನಿಜಕ್ಕೂ ಕನ್ನಡದ ಸೊಗಡು ಎಂತಹದು ಎಂಬುದು ಗೊತ್ತಾಗುತ್ತದೆ.

(1) ಸಂಸ್ಕ್ರುತ ಪದಗಳಲ್ಲಿ ಬಳಕೆಯಾಗುವ ಖಛಠಥಫ ಮತ್ತು ಘಝಢಧಭಗಳೆಂಬ ಒತ್ತುಸಿರಿನ ಬರಿಗೆಗಳು (ಮಹಾಪ್ರಾಣಾಕ್ಶರಗಳು) ಕನ್ನಡ ಪದಗಳಲ್ಲಿಲ್ಲ; ಆದರೆ, ಸಂಸ್ಕ್ರುತ ಪದಗಳಲ್ಲಿ ಕಾಣಿಸದಿರುವ ಗಿಡ್ಡ ಎಕಾರ ಮತ್ತು ಒಕಾರಗಳು ಕನ್ನಡ ಪದಗಳಲ್ಲಿವೆ. ಸಂಸ್ಕ್ರುತದಲ್ಲಿರುವ ಋಕಾರ ಮತ್ತು ಷಕಾರಗಳು ಕನ್ನಡದಲ್ಲಿಲ್ಲ; ಆದರೆ, ಸಂಸ್ಕ್ರುತದಲ್ಲಿಲ್ಲದ ಎಯ್, ಒಯ್, ಉಯ್, ಆಯ್, ಒವ್, ಇವ್ ಮೊದಲಾದ ಹಲವು ಸ್ವರ ಮತ್ತು ಯಕಾರ ಇಲ್ಲವೇ ವಕಾರಗಳ ಜೋಡಿಗಳು ಕನ್ನಡದಲ್ಲಿವೆ.

(2) ಈ ಎರಡು ನುಡಿಗಳಿಗೂ ಸಮಾನವಾಗಿರುವ ಅಕ್ಶರಗಳು ಹಲವಿವೆಯಾದರೂ ಅವು ಒಂದೇ ರೀತಿಯಾಗಿ ಬಳಕೆಯಾಗುವುದಿಲ್ಲ. ಸಂಸ್ಕ್ರುತದಲ್ಲಿ ಒತ್ತಕ್ಶರಗಳಿಂದ ಮೊದಲಾಗುವ ಪದಗಳು ಸಾಕಶ್ಟಿವೆ (ಕ್ರಾಂತಿ, ಕ್ಷಮೆ, ಜ್ಞಾನ, ಜ್ಯೋತಿ, ದ್ವೇಷ, ಮ್ಲೇಚ್ಛ). ಆದರೆ ಕನ್ನಡದವೇ ಆದ ಪದಗಳಲ್ಲಿ ಆ ರೀತಿ ಒತ್ತಕ್ಶರಗಳು ಪದಗಳ ಮೊದಲಿಗೆ ಬರುವುದಿಲ್ಲ. ಪದಗಳ ನಡುವೆ ಬರಬಲ್ಲ ಒತ್ತಕ್ಶರಗಳಲ್ಲೂ ಸಂಸ್ಕ್ರುತ ಮತ್ತು ಕನ್ನಡ ನುಡಿಗಳ ನಡುವೆ ವ್ಯತ್ಯಾಸವಿದೆ. ಸಂಸ್ಕ್ರುತದ ಭಕ್ತ, ಅಜ್ಞಾನ, ವತ್ಸ, ಮತ್ಸ್ಯ ಮೊದಲಾದ ಪದಗಳಲ್ಲಿ ನಡುವೆ ಬಂದಿರುವ ಕ್ತ್, ಜ್ಞ್, ತ್ಸ್, ತ್ಸ್ಯ್ ಮೊದಲಾದ ಹಲವು ಬಗೆಯ ಒತ್ತಕ್ಶರಗಳು ಕನ್ನಡ ಪದಗಳಲ್ಲಿ ಕಾಣಿಸುವುದಿಲ್ಲ.

(3) ಎರಡು ಇಲ್ಲವೇ ಹೆಚ್ಚು ಪದಗಳನ್ನು ಒಟ್ಟುಸೇರಿಸಿ ಹೊಸ ಪದಗಳನ್ನು ತಯಾರಿಸುವ ಹೊಲಬುಗಳು ಈ ಎರಡು ನುಡಿಗಳಲ್ಲಿ ಬೇರೆ ಬೇರಾಗಿವೆ. ಸಂಸ್ಕ್ರುತದಲ್ಲಿ ಸಾಮಾನ್ಯವಾಗಿ ಹೆಸರುಪದಗಳನ್ನು ಮಾತ್ರ ಇಂತಹ ರಚನೆಗಳಲ್ಲಿ ಬಳಸಲಾಗುತ್ತದೆ; ಆದರೆ, ಕನ್ನಡದಲ್ಲಿ ಹೆಸರುಪದ (ತಲೆಗೂದಲು, ಬಯಲಾಟ), ಎಸಕಪದ (ಚುಚ್ಚುಮದ್ದು, ಕಡೆಗೋಲು) ಮತ್ತು ಪರಿಚೆಪದಗಳೆಂಬ (ದೊಡ್ಡಮ್ಮ, ಬಿಸಿನೀರು) ಮೂರು ಬಗೆಯ ಪದಗಳನ್ನೂ ಇಂತಹ ರಚನೆಗಳಲ್ಲಿ ಬಳಸಲು ಬರುತ್ತದೆ.

(4) ಕನ್ನಡದಲ್ಲಿ ಸಾಮಾನ್ಯವಾಗಿ ಎರಡಕ್ಕಿಂತ ಹೆಚ್ಚು ಪದಗಳನ್ನು ಈ ರೀತಿ ಜೋಡಿಸುವುದು ಅಪರೂಪ; ಆದರೆ, ಸಂಸ್ಕ್ರುತದಲ್ಲಿ ಮೂರು-ನಾಲ್ಕು ಪದಗಳನ್ನು ಸೇರಿಸಿ ರಚಿಸಿರುವ ಜೋಡುಪದಗಳೂ ಬೇಕಾದಶ್ಟಿವೆ (ಪೂರ್ವಜನ್ಮಕೃತಂ, ಮತ್ತಮಾತಂಗಗಾಮಿ, ಸಕಲನೀತಿಶಾಸ್ತ್ರತತ್ವಜ್ಞಃ).

(5) ಒಟ್ಟು(ಪ್ರತ್ಯಯ)ಗಳನ್ನು ಸೇರಿಸಿ ಹೊಸ ಪದಗಳನ್ನು ತಯಾರಿಸುವ ವಿಶಯದಲ್ಲೂ ಕನ್ನಡ ಸಂಸ್ಕ್ರುತಕ್ಕಿಂತ ಬೇರಾಗಿದೆ. ಕನ್ನಡದಲ್ಲಿ ಒಂದಕ್ಕಿಂತ ಹೆಚ್ಚು ಒಟ್ಟುಗಳನ್ನು ಸೇರಿಸಿ ರಚಿಸಿರುವ ಪದಗಳು ತುಂಬಾ ಕಡಿಮೆ; ಆದರೆ, ಸಂಸ್ಕ್ರುತದ ಹೆಚ್ಚಿನ ಪದಗಳಲ್ಲೂ ಎರಡು ಇಲ್ಲವೇ ಹೆಚ್ಚು ಒಟ್ಟುಗಳು ಸೇರಿರುವುದನ್ನು ಕಾಣಬಹುದು (ಅ-ಜ್ಞಾನ್-ಇ, ಕರ್-ತೃ-ತ್ವ). ಕನ್ನಡದಲ್ಲಿ ಒಟ್ಟುಗಳನ್ನು ಪದಗಳ ಕೊನೆಯಲ್ಲಿ ಮಾತ್ರ ಬಳಸಲು ಬರುತ್ತದೆ; ಆದರೆ, ಸಂಸ್ಕ್ರುತದಲ್ಲಿ ಅವನ್ನು ಪದಗಳ ಮೊದಲಿಗೂ ಬಳಸಬಹುದು (ಸತ್ಯ-ಅಸತ್ಯ, ಸ್ವಾಗತ-ಸುಸ್ವಾಗತ, ಜೀವಿ-ನಿರ್ಜೀವಿ, ರಕ್ಷಣೆ-ಸಂರಕ್ಷಣೆ).

(6) ಪದಕ್ಕೆ ಪದ ಸೇರಿದಾಗ, ಇಲ್ಲವೇ ಪದಕ್ಕೆ ಒಟ್ಟು ಸೇರಿದಾಗ, ಅವುಗಳಲ್ಲಿ ನಡೆಯುವ ಸೇರಿಕೆಯ ಬದಲಾವಣೆಗಳು ಕನ್ನಡ ಮತ್ತು ಸಂಸ್ಕ್ರುತ ನುಡಿಗಳಲ್ಲಿ ಬೇರೆ ಬೇರಾಗಿವೆ: ಇಕಾರದ ಅನಂತರ ಅಕಾರ ಬಂದಾಗ, ಕನ್ನಡದಲ್ಲಿ ಇಕಾರ ಬಿದ್ದುಹೋಗಿ ಅಕಾರ ಉಳಿಯುತ್ತದೆ (ಅಲ್ಲಿ+ಅಲ್ಲಿ=ಅಲ್ಲಲ್ಲಿ); ಆದರೆ, ಸಂಸ್ಕ್ರುತದಲ್ಲಿ ಇಕಾರ ಯಕಾರವಾಗುತ್ತದೆ (ಅತಿ+ಅಲ್ಪ=ಅತ್ಯಲ್ಪ). ಅಕಾರದ ಅನಂತರ ಇಕಾರ ಬಂದರೂ ಕನ್ನಡದಲ್ಲಿ ಇಂತಹದೇ ಮೊದಲನೆಯ ಸ್ವರ ಬಿದ್ದುಹೋಗಿ ಎರಡನೆಯದು ಉಳಿಯುತ್ತದೆ (ಅಲ್ಲಿಂದ+ಇಳಿದು=ಅಲ್ಲಿಂದಿಳಿದು); ಆದರೆ, ಸಂಸ್ಕ್ರುತದಲ್ಲಿ ಅವೆರಡೂ ಬಿದ್ದುಹೋಗಿ ಹೊಸದೊಂದು ಸ್ವರ (ಏಕಾರ) ಬಂದುಸೇರುತ್ತದೆ (ರಾಜ+ಇಂದ್ರ=ರಾಜೇಂದ್ರ).

(7) ಒಟ್ಟುಗಳನ್ನು ಸೇರಿಸಿ ಹೊಸಪದಗಳನ್ನು ರಚಿಸುವಲ್ಲಿ ಕನ್ನಡ ಮತ್ತು ಸಂಸ್ಕ್ರುತಗಳ ನಡುವೆ ಹಲವು ಮುಕ್ಯವಾದ ವ್ಯತ್ಯಾಸಗಳಿವೆ: ಸಂಸ್ಕ್ರುತ ಪದಗಳಿಗೆ ಯ ಇಲ್ಲವೇ ಇಕ ಒಟ್ಟನ್ನು ಸೇರಿಸಿದಾಗ, ಹಲವು ತೊಡಕಾದ ಸೇರಿಕೆಯ ನಿಯಮಗಳು ಬಳಕೆಯಾಗುತ್ತವೆ. ಪದಗಳ ಮೊದಲಿಗೆ ಬರುವ ಗಿಡ್ಡ ಅಕಾರ ಉದ್ದ ಆ ಎಂದಾಗುವುದು (ಚಪಲ-ಚಾಪಲ್ಯ, ಪ್ರಮಾಣ-ಪ್ರಾಮಾಣಿಕ), ಇ, ಈ ಮತ್ತು ಏ ಸ್ವರಗಳು ಐ ಎಂದಾಗುವುದು (ನಿಸರ್ಗ-ನೈಸರ್ಗಿಕ, ದೀನ-ದೈನ್ಯ, ಚೇತನ-ಚೈತನ್ಯ), ಉ, ಊ ಮತ್ತು ಓ ಸ್ವರಗಳು ಔ ಎಂದಾಗುವುದು (ಸುಖ-ಸೌಖ್ಯ, ಪೂರ್ವಾಹ್ನ-ಪೌರ್ವಾಹ್ನಿಕ, ಲೋಕ-ಲೌಕಿಕ) ಮೊದಲಾದವು ಇಂತಹ ಕೆಲವು ಸಂಸ್ಕ್ರುತದ ನಿಯಮಗಳು.

ಆದರೆ, ಕನ್ನಡದಲ್ಲಿ ಒಟ್ಟುಗಳನ್ನು ಸೇರಿಸಿ ಪದಗಳನ್ನು ರಚಿಸುವಲ್ಲಿ ಇವಕ್ಕಿಂತ ತೀರ ಬೇರಾಗಿರುವ ಸೇರಿಕೆಯ ನಿಯಮಗಳು ಬಳಕೆಯಾಗುತ್ತವೆ. ಇವು (ಕನ್ನಡಿಗರ ಮಟ್ಟಿಗೆ) ಸಂಸ್ಕ್ರುತದ ಸೇರಿಕೆಯ ನಿಯಮಗಳಶ್ಟು ತೊಡಕಿನವಾಗಿಲ್ಲ. ಕನ್ನಡ ಪದಗಳಿಗೆ ಇಕೆ ಒಟ್ಟನ್ನು ಸೇರಿಸಿದಾಗ ಪದಗಳ ಕೊನೆಯ ಉಕಾರ ಬಿದ್ದುಹೋಗುತ್ತದೆ (ಬಳಲು-ಬಳಲಿಕೆ, ಹೊಗಳು-ಹೊಗಳಿಕೆ, ಅಂಜು-ಅಂಜಿಕೆ) ಮತ್ತು ಪದಗಳ ಕೊನೆಯ ಇಕಾರ ಹಾಗೆಯೇ ಉಳಿದು ಇಕೆ ಒಟ್ಟಿನ ಮೊದಲ ಸ್ವರ ಬಿದ್ದುಹೋಗುತ್ತದೆ (ಇರಿ-ಇರಿಕೆ, ತಿರಿ-ತಿರಿಕೆ, ಇಳಿ-ಇಳಿಕೆ).

ಕನ್ನಡದ ಸೊಗಡು ಸಂಸ್ಕ್ರುತದ ಸೊಗಡಿಗಿಂತ ತೀರ ಬೇರಾದುದು ಎಂಬುದನ್ನು ಅವು ಬಳಸುವ ಪದಗಳ ಸ್ವರೂಪದಲ್ಲಿ ಕಾಣಿಸುವಂತಹ ಈ ವ್ಯತ್ಯಾಸಗಳು ತುಂಬಾ ಸ್ಪಶ್ಟವಾಗಿ ತೋರಿಸಿಕೊಡುತ್ತವೆ. ಕನ್ನಡ ಬರಹದಲ್ಲಿ ಹೆಚ್ಚು ಹೆಚ್ಚು ಸಂಸ್ಕ್ರುತ ಪದಗಳನ್ನು ಅವುಗಳಲ್ಲಿ ಸ್ವಲ್ಪವೂ ಬದಲಾವಣೆಯನ್ನು ಮಾಡದೆ ಬಳಸಿದಲ್ಲಿ ಅಂತಹ ಬರಹ ತನ್ನದೇ ಆದ ಸೊಗಡನ್ನು ಪೂರ್ತಿ ಕಳೆದುಕೊಳ್ಳುತ್ತದೆ. ಈ ರೀತಿ ತನ್ನ ಹುಟ್ಟುಸೊಗಡನ್ನು ಕಳೆದುಕೊಳ್ಳುವ ಬರಹ ತನ್ನತನವನ್ನೂ ಕಳೆದುಕೊಳ್ಳುತ್ತದೆ, ಮತ್ತು ಅದರ ಜೀವಂತಿಕೆ ನಶ್ಟವಾಗಿ ಅದರಲ್ಲಿ ಕ್ರುತಕತೆ ತುಂಬಿಕೊಳ್ಳುತ್ತದೆ. ಇದಲ್ಲದೆ, ಅಂತಹ ಬರಹಕ್ಕೂ ಹೆಚ್ಚಿನ ಕನ್ನಡಿಗರ ಮಾತಿಗೂ ನಡುವೆ ದೊಡ್ಡ ಕಂದಕವೇರ್ಪಟ್ಟು, ಅದು ಅವರೆಲ್ಲರಿಂದಲೂ ದೂರವಾಗುತ್ತದೆ. ಯಾಕೆಂದರೆ, ಬರಹ ಆ ರೀತಿ ಬದಲಾದಾಗಲೂ ಜನರ ಆಡುನುಡಿ ಅದಕ್ಕನುಗುಣವಾಗಿ ಬದಲಾಗುವುದಿಲ್ಲ. ಅದು ತನ್ನ ಪದಸ್ವರೂಪವನ್ನು ಮತ್ತು ಜೀವಂತಿಕೆಯನ್ನು ಉಳಿಸಿಕೊಂಡಿರುತ್ತದೆ.

ಇದಕ್ಕೆ ಕಾರಣವೇನೆಂದರೆ, ಆಡುನುಡಿಯನ್ನು ಮಕ್ಕಳು ತಮ್ಮ ಬೆಳವಣಿಗೆಯ ಅಂಗವಾಗಿ ಪಡೆಯುತ್ತಾರೆ; ಅದನ್ನು ಮಕ್ಕಳಿಗೆ ಯಾರೂ ಕಲಿಸಿಕೊಡಬೇಕಾಗಿಲ್ಲ. ಹಾಗಾಗಿ, ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಮಾರೆಡೆಗೊಳ್ಳುವಾಗ, ಅದು ತಿರುತಿರುಗಿ ಹೊಸತನವನ್ನು ಮತ್ತು ಜೀವಂತಿಕೆಯನ್ನು ಪಡೆಯುತ್ತಿರುತ್ತದೆ. ಆದರೆ, ಬರಹವನ್ನು ಮಕ್ಕಳು ಶಾಲೆಯಲ್ಲಿ ದೊಡ್ಡವರ ನೆರವಿನಿಂದ ಕಲಿಯಬೇಕಾಗುತ್ತದೆ; ಅದನ್ನು ಅವರು ತಮ್ಮ ಬೆಳವಣಿಗೆಯ ಅಂಗವಾಗಿ ಪಡೆಯುವುದಿಲ್ಲ.

ಹಾಗಾಗಿ, ಬರಹಗಾರರು ಕಾಲದಿಂದ ಕಾಲಕ್ಕೆ ಅದನ್ನು ಹೊಸದಾಗಿಸಿಕೊಳ್ಳದಿದ್ದರೆ, ಮತ್ತು ಆಡುನುಡಿಗೆ ಹತ್ತಿರವಾಗುವಂತೆ ಮಾರ್ಪಡಿಸಿಕೊಳ್ಳದಿದ್ದರೆ, ಅದು ಕ್ರುತಕವಾಗುತ್ತಾ ಹೋಗಿ ತನ್ನ ಹುಟ್ಟುಸೊಗಡನ್ನು ಮತ್ತು ಜೀವಂತಿಕೆಯನ್ನು ಕಳೆದುಕೊಳ್ಳುತ್ತದೆ. ಕನ್ನಡದಲ್ಲಿ ಕತೆ-ಕಾದಂಬರಿಗಳನ್ನು ಬರೆಯುವವರು ತಮ್ಮ ಬರಹ ಈ ರೀತಿ ಕ್ರುತಕವಾಗದಂತೆ ನೋಡಿಕೊಳ್ಳುತ್ತಾರೆ; ಆದರೆ, ಬೇರೆ ಬಗೆಯ ಬರಹಗಳನ್ನು ಬರೆಯುವವರು ಇದನ್ನು ಮಾಡಲು ಹೋಗದುದರಿಂದಾಗಿ ಇವತ್ತು ಅಂತಹ ಬರಹಗಳು ತುಂಬಾ ಕ್ರುತಕವಾಗಿದ್ದು ಸಾಮಾನ್ಯ ಜನರಿಗೆ ತಿಳಿಯದ ಹಾಗಾಗಿವೆ.

(ಈ ಬರಹ ವಿಜಯಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)


ಭಾಗ 35: ದ್ರಾವಿಡ ನುಡಿಗಳು ಅಯ್ದಲ್ಲ, ಇಪ್ಪತ್ತಾರು!

ಮೂಲ URL: https://dnshankarabhat.net/%e0%b2%a6%e0%b3%8d%e0%b2%b0%e0%b2%be%e0%b2%b5%e0%b2%bf%e0%b2%a1-%e0%b2%a8%e0%b3%81%e0%b2%a1%e0%b2%bf%e0%b2%97%e0%b2%b3%e0%b3%81-%e0%b2%85%e0%b2%af%e0%b3%8d%e0%b2%a6%e0%b2%b2%e0%b3%8d%e0%b2%b2/

ನುಡಿಯರಿಮೆಯ ಇಣುಕುನೋಟ – 35

ಕನ್ನಡ, ತಮಿಳು, ಮಲಯಾಳ, ತೆಲುಗು ಮತ್ತು ತುಳು ಎಂಬುದಾಗಿ ಒಟ್ಟು ದ್ರಾವಿಡ ನುಡಿಗಳ ಎಣಿಕೆ ಅಯ್ದು ಮಾತ್ರ (ಪಂಚದ್ರಾವಿಡ) ಎಂಬ ಅನಿಸಿಕೆ ಇವತ್ತಿಗೂ ಹಲವು ಜನರಲ್ಲಿದೆ. ಕೆಲವರು ಈ ಪಟ್ಟಿಯಲ್ಲಿ ತುಳುವಿನ ಬದಲು ಮರಾಟಿಯನ್ನು ಸೇರಿಸುತ್ತಾರೆ; ಆದರೆ, ಮರಾಟಿ ದ್ರಾವಿಡ ನುಡಿಯಲ್ಲ, ಇಂಡೋ-ಆರ‍್ಯನ್ ನುಡಿ.

ಕರ‍್ನಾಟಕದಲ್ಲೇನೇ ಕೊಡಗು ಎಂಬ ಇನ್ನೊಂದು ದ್ರಾವಿಡ ನುಡಿ ಇರುವುದನ್ನು ಈ ದ್ರಾವಿಡ ನುಡಿಗಳ ಪಟ್ಟಿಯನ್ನು ಕೊಡುವವರು ಮರೆತಂತಿದೆ. ದಕ್ಶಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೊರಗ ಎಂಬ ಮತ್ತೊಂದು ದ್ರಾವಿಡ ನುಡಿಯೂ ಬಳಕೆಯಲ್ಲಿದೆ. ಇದಲ್ಲದೆ, ನೀಲಗಿರಿಯ ಗುಡ್ಡಕಾಡುಗಳಲ್ಲಿ ತೊದ, ಕೋತ, ಕುರುಂಬ, ಮತ್ತು ಇರುಳ ಎಂಬ ಬೇರೆಯೂ ನಾಲ್ಕು ದ್ರಾವಿಡ ನುಡಿಗಳು ಬಳಕೆಯಲ್ಲಿವೆ.

ಮೇಲಿನ ಈ ಹನ್ನೊಂದು ನುಡಿಗಳಲ್ಲಿ ತೆಲುಗು ನುಡಿಯೊಂದನ್ನು ಬಿಟ್ಟು ಉಳಿದ ಹತ್ತು ನುಡಿಗಳನ್ನು ತೆಂಕುದ್ರಾವಿಡ ಎಂಬ ನುಡಿಗುಂಪಿನಲ್ಲಿ ಸೇರಿಸಿ ಹೇಳಲಾಗುತ್ತದೆ, ಮತ್ತು ತೆಲುಗು ನುಡಿಯನ್ನು ಬೇರೆ ಏಳು ನುಡಿಗಳೊಂದಿಗೆ ಸೇರಿಸಿ ತೆಂಕು-ನಡುದ್ರಾವಿಡವೆಂಬ ಬೇರೊಂದು ನುಡಿಗುಂಪನ್ನು ಮಾಡಲಾಗುತ್ತದೆ. ಈ ತೆಂಕು-ನಡುದ್ರಾವಿಡ ಗುಂಪಿನಲ್ಲಿ ತೆಲುಗು ನುಡಿಯಲ್ಲದೆ ಸುಮಾರು 24 ಲಕ್ಶ ಜನರ ಮಾತಾಗಿರುವ ಗೋಂಡಿ ಮತ್ತು ಆರೂವರೆ ಲಕ್ಶ ಜನರ ಮಾತಾಗಿರುವ ಕೂಯಿ ನುಡಿಗಳು ಬರುತ್ತವೆ. ಉಳಿದಂತೆ, ಕುವಿ, ಕೊಂಡ, ಪೆಂಗೊ, ಮತ್ತು ಮಂಡ ಎಂಬ ನುಡಿಗಳೂ ಈ ಗುಂಪಿನಲ್ಲಿ ಸೇರುತ್ತವೆ.

ಕೋಲಾಮಿ, ನಾಯ್ಕಿ, ಪಾರ‍್ಜಿ, ಒಲ್ಲಾರಿ, ಮತ್ತು ಗದಬ ಎಂಬ ಅಯ್ದು ನುಡಿಗಳನ್ನು ನಡುದ್ರಾವಿಡವೆಂಬ ಬೇರೆಯೇ ಒಂದು ನುಡಿಗುಂಪಿನಲ್ಲಿ ಸೇರಿಸಲಾಗುತ್ತದೆ. ಈ ನುಡಿಗಳನ್ನಾಡುವವರು ಮುಕ್ಯವಾಗಿ ಆಂದ್ರಪ್ರದೇಶ, ಮದ್ಯಪ್ರದೇಶ ಮತ್ತು ಒರಿಸ್ಸಾಗಳಲ್ಲಿ ನೆಲೆಸಿದ್ದಾರೆ. ಇದಲ್ಲದೆ, ಕುಡುಕ್, ಮಾಲ್ಟೋ, ಮತ್ತು ಬ್ರಾಹುಯೀ ಎಂಬ ಬೇರೆ ಮೂರು ನುಡಿಗಳನ್ನು ಬಡಗುದ್ರಾವಿಡವೆಂಬ ಇನ್ನೊಂದು ನುಡಿಗುಂಪಿನಲ್ಲಿ ಸೇರಿಸಲಾಗುತ್ತದೆ. ಈ ಮೂರು ನುಡಿಗಳಲ್ಲಿ ಕುಡುಕ್ ನುಡಿಯನ್ನು ಸುಮಾರು 20 ಲಕ್ಶ ಮಂದಿ ಆಡುತ್ತಿದ್ದು, ಇವರು ಮುಕ್ಯವಾಗಿ ಒರಿಸ್ಸಾದಲ್ಲಿ ನೆಲೆಸಿದ್ದಾರೆ; ನೇಪಾಳದ ದನಗರ‍್ ಜನಾಂಗದವರೂ ಇದೇ ನುಡಿಯನ್ನಾಡುತ್ತಾರೆ. ಮಾಲ್ಟೋ ನುಡಿಯನ್ನಾಡುವ ಒಂದು ಲಕ್ಶ ಮಂದಿ ಬಿಹಾರದ ರಾಜಮಹಲ್ ಗುಡ್ಡಗಳಲ್ಲಿ ನೆಲೆಸಿದ್ದಾರೆ, ಮತ್ತು ಬ್ರಾಹುಯೀ ನುಡಿಯನ್ನಾಡುವ 20 ಲಕ್ಶ ಮಂದಿ ಮುಕ್ಯವಾಗಿ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನೆಲೆಸಿದ್ದಾರೆ; ಅಪ್ಗಾನಿಸ್ತಾನ ಮತ್ತು ಇರಾನ್ನಲ್ಲೂ ಬ್ರಾಹುಯೀ ನುಡಿಯನ್ನಾಡುವವರು ಹಲವರಿದ್ದಾರೆ.

ಈ ರೀತಿ, ನಾಲ್ಕು ಮುಕ್ಯ ಗುಂಪುಗಳಲ್ಲಿ ಸೇರುವ ದ್ರಾವಿಡ ನುಡಿಗಳ ಒಟ್ಟು ಎಣಿಕೆ ಇಪ್ಪತ್ತಾರು ಎಂದು ಹೇಳಬಹುದು. ಆದರೆ, ಹಲವೆಡೆಗಳಲ್ಲಿ ಯಾವುದನ್ನು ಒಂದು ನುಡಿ ಎಂದು ಕರೆಯಬೇಕು, ಮತ್ತು ಯಾವುದನ್ನು ಬರಿಯ ಒಳನುಡಿ ಎಂದು ತಿಳಿಯಬೇಕು ಎಂಬುದನ್ನು ಕಚಿತವಾಗಿ ತೀರ‍್ಮಾನಿಸಲು ಬರುವುದಿಲ್ಲ. ಎತ್ತುಗೆಗಾಗಿ, ನೀಲಗಿರಿಯಲ್ಲಿ ಬಳಕೆಯಲ್ಲಿರುವ ಬಡಗ ಜನರ ಮಾತನ್ನು ಕೆಲವರು ಕನ್ನಡದ ಒಳನುಡಿಯೆಂದು ಕರೆಯುತ್ತಾರೆ, ಮತ್ತು ಬೇರೆ ಕೆಲವರು ಅದೊಂದು ಬೇರೆಯೇ ನುಡಿಯೆಂದೂ ಹೇಳುತ್ತಾರೆ. ಹಾಗಾಗಿ, ಒಟ್ಟು ದ್ರಾವಿಡ ನುಡಿಗಳು ಎಶ್ಟಿವೆ ಎಂಬುದನ್ನು ಕಚಿತವಾಗಿ ಹೇಳಲು ಬರುವುದಿಲ್ಲ; ಹಾಗಿದ್ದರೂ, ಅದು ಅಯ್ದಕ್ಕಿಂತ ಹೆಚ್ಚು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ.

ಹಿಂದಿನ ಒಂದು ಕಾಲದಲ್ಲಿ ದ್ರಾವಿಡರು ಬಾರತದಲ್ಲಿ ಎಲ್ಲೆಡೆಗಳಲ್ಲೂ ನೆಲೆಸಿದ್ದಿರಬೇಕು, ಮತ್ತು ಇಂಡೋ-ಆರ‍್ಯನ್ ನುಡಿಗಳನ್ನಾಡುವ ಜನರು ಬಡಗು ನಾಡುಗಳಿಂದ ಬಾರತಕ್ಕೆ ವಲಸೆ ಬಂದ ಮೇಲೆ, ಹಲವಾರು ಮಂದಿ ದ್ರಾವಿಡ ನುಡಿಗಳನ್ನಾಡುವ ಜನರು ತಮ್ಮ ನುಡಿಗಳನ್ನು ಕಳೆದುಕೊಂಡು ಮರಾಟಿ, ಗುಜರಾತಿ, ಒಡಿಯಾ, ಹಿಂದಿ ಮೊದಲಾದ ಇಂಡೋ-ಆರ‍್ಯನ್ ನುಡಿಗಳನ್ನಾಡುವಂತಾಗಿರಬೇಕೆಂದು ಹಲವು ಮಂದಿ ಅರಿವಿಗರು ತೀರ‍್ಮಾನಕ್ಕೆ ಬಂದಿದ್ದಾರೆ. ಬಾರತದಲ್ಲಿ ಬಳಕೆಯಲ್ಲಿರುವ ಈ ಇಂಡೋ-ಆರ‍್ಯನ್ ನುಡಿಗಳು ಹಲವು ವಿಶಯಗಳಲ್ಲಿ ದ್ರಾವಿಡ ನುಡಿಗಳನ್ನು ಹೋಲುತ್ತಿರುವುದಕ್ಕೆ ಅವುಗಳ ಆಡುಗರು ಮೊದಲಿಗೆ ದ್ರಾವಿಡ ನುಡಿಗಳನ್ನಾಡುತ್ತಿದ್ದುದೇ ಕಾರಣವಿರಬೇಕೆಂದೂ ತಿಳಿಯಲಾಗುತ್ತಿದೆ.

ಬಾರತದಲ್ಲಿ ಬಳಕೆಯಲ್ಲಿರುವ ಹಿಂದಿ, ಮರಾಟಿ, ಗುಜರಾತಿ ಮೊದಲಾದ ಇಂಡೋ-ಆರ‍್ಯನ್ ನುಡಿಗಳನ್ನು ಯುರೋಪಿನ ಇಂಗ್ಲಿಶ್, ಜರ‍್ಮನ್, ಸ್ಪೇನಿಶ್, ಇಟೇಲಿಯನ್ ಮೊದಲಾದ ನುಡಿಗಳೊಂದಿಗೆ ಸಂಬಂದಿಸಲು ಸಾದ್ಯವಾಗಿದೆ; ಆದರೆ, ದ್ರಾವಿಡ ನುಡಿಗಳನ್ನು ಆ ರೀತಿ ಬೇರೆ ಯಾವ ನುಡಿಗಳೊಂದಿಗೂ ಎಲ್ಲರಿಗೂ ಒಪ್ಪಿಗೆಯಾಗುವಂತೆ ಇದುವರೆಗೆ ಸಂಬಂದಿಸಲು ಸಾದ್ಯವಾಗಿಲ್ಲ. ಹಾಗಾಗಿ, ಇಂಡೋ-ಆರ‍್ಯನ್ ನುಡಿಗಳು ಬಾರತಕ್ಕೆ ಹೊರಗಿನಿಂದ ಬಂದುವೆಂದು ಹೇಳಲು ಸಾದ್ಯವಾಗುವಂತೆ ದ್ರಾವಿಡ ನುಡಿಗಳು ಹೊರಗಿನಿಂದ ಬಂದುವೆಂದು ಹೇಳಲು ಸಾದ್ಯವಾಗುವುದಿಲ್ಲ.

ನುಡಿಗಳ ಎಣಿಕೆಯ ಕುರಿತು ಮಾತನಾಡುವಾಗ ಇನ್ನೊಂದು ಸಂಶಯವೂ ಹಲವರನ್ನು ಕಾಡುತ್ತದೆ; ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳ ಎಂಬ ನಾಲ್ಕು ನುಡಿಗಳಿಗೆ ಅವುಗಳದೇ ಆದ ಲಿಪಿಯಿದೆ; ಆದರೆ, ಉಳಿದವುಗಳಲ್ಲಿ ಯಾವುದಕ್ಕೂ ಅದರದೇ ಆದ ಲಿಪಿಯಿಲ್ಲ (ಇತ್ತೀಚೆಗೆ ಅವುಗಳಲ್ಲಿ ಕೆಲವಕ್ಕೆ ಲಿಪಿಗಳನ್ನು ಅಳವಡಿಸಲಾಗಿದೆ). ಲಿಪಿಯಿಲ್ಲದ ನುಡಿಗಳನ್ನು ಲಿಪಿಯಿರುವವುಗಳೊಂದಿಗೆ ಸರಿದೂಗಿಸಬಹುದೇ ಎಂಬುದೇ ಈ ಸಂಶಯ. ಅಯ್ದನೆಯ ದ್ರಾವಿಡ ನುಡಿಯಾಗಿ ಕೆಲವರು ತುಳುವಿನ ಬದಲು ಮರಾಟಿಯನ್ನು ಹೆಸರಿಸುತ್ತಿರುವುದಕ್ಕೆ ಇದೇ ಕಾರಣವಿರಬಹುದು.

ಆದರೆ, ನುಡಿಗಳ ಎಣಿಕೆಗೂ ಅವಕ್ಕೆ ಲಿಪಿಯಿದೆಯೇ, ಎಂದರೆ ಅವನ್ನು ಬರಹಕ್ಕೆ ಇಳಿಸಲಾಗಿದೆಯೇ ಎಂಬುದಕ್ಕೂ ನಡುವೆ ಯಾವ ಸಂಬಂದವೂ ಇಲ್ಲ. ಮುಕ್ಯವಾಗಿ, ಎರಡು ನುಡಿಗಳ ನಡುವೆ ವ್ಯತ್ಯಾಸ ಎಶ್ಟಿದೆ ಎಂಬುದರ ಮೇಲೆ ಅವೆರಡು ಒಂದೇ ನುಡಿಯ ಒಳನುಡಿಗಳೇ ಇಲ್ಲವೇ ಬೇರೆ ಬೇರೆ ನುಡಿಗಳೇ ಎಂಬುದನ್ನು ತೀರ‍್ಮಾನಿಸಲಾಗುತ್ತದೆ. ಇದಲ್ಲದೆ, ಇಂಡೋ-ಆರ‍್ಯನ್, ದ್ರಾವಿಡ ಎಂಬಂತಹ ನುಡಿಗಳ ಗುಂಪಿಸುವಿಕೆಗೂ ಅವು ಬಳಸುವ ಲಿಪಿಗಳಿಗೂ ನಡುವೆ ಯಾವ ಸಂಬಂದವೂ ಇಲ್ಲ. ನಿಜಕ್ಕೂ ಬಾರತದ ನುಡಿಗಳು ಬಳಸುವ ಲಿಪಿಗಳಲ್ಲಿ ಹೆಚ್ಚಿನವೂ ಬ್ರಾಹ್ಮೀ ಲಿಪಿ ಎಂಬ ಒಂದೇ ಮೂಲದಿಂದ ಬಂದಿವೆ.

ಹಲವು ನುಡಿಗಳು ಒಂದೇ ಲಿಪಿಯನ್ನು ಬಳಸುತ್ತಿರಬಲ್ಲುವು, ಮತ್ತು ಒಂದೇ ನುಡಿ ಹಲವು ಲಿಪಿಗಳನ್ನು ಬಳಸುತ್ತಿರಬಲ್ಲುದು: ಮರಾಟಿ, ಹಿಂದಿ, ಮತ್ತು ನೇಪಾಲಿ ನುಡಿಗಳು ಬಳಸುವ ಲಿಪಿಗಳ ನಡುವೆ ಹೆಚ್ಚಿನ ವ್ಯತ್ಯಾಸವೇನಿಲ್ಲ, ಮತ್ತು ತೆಲುಗು ಹಾಗೂ ಕನ್ನಡ ಲಿಪಿಗಳು ಹದಿನೆಂಟನೇ ಶತಮಾನದ ವರೆಗೆ ಒಂದೇ ಲಿಪಿಯಾಗಿದ್ದುವು. ಕೊಂಕಣಿ ನುಡಿ ರೋಮನ್, ನಾಗರಿ, ಮತ್ತು ಕನ್ನಡ ಲಿಪಿಗಳನ್ನು ಬಳಸುತ್ತಿದೆ, ಮತ್ತು ಸಿಂದಿ ನುಡಿ ನಾಗರಿ ಮತ್ತು ಪರ‍್ಸೋ-ಅರೇಬಿಕ್ ಲಿಪಿಗಳನ್ನು ಬಳಸುತ್ತಿದೆ. ಇದಲ್ಲದೆ, ಮಣಿಪುರಿ, ಮಲಯಾಳ ಮೊದಲಾದ ಬೇರೆ ಕೆಲವು ನುಡಿಗಳು ತಮ್ಮಲ್ಲಿ ಬಳಕೆಯಲ್ಲಿದ್ದ ಲಿಪಿಯನ್ನು ಬಿಟ್ಟುಕೊಟ್ಟು ಬೇರೆ ಲಿಪಿಯನ್ನು ಬಳಸತೊಡಗಿವೆ. ಹಾಗಾಗಿ, ನುಡಿಗಳು ಲಿಪಿಯನ್ನು ಬಳಸುವುದು ಒಂದು ಮಟ್ಟಿಗೆ ಜನರು ಉಡುಪನ್ನು ಬಳಸುವ ಹಾಗೆ ಎನ್ನಬಹುದು.

ಆದರೆ, ದ್ರಾವಿಡ ಮತ್ತು ಇಂಡೋ-ಆರ‍್ಯನ್ ಎಂಬ ನುಡಿಗಳ ವಿಂಗಡನೆಗೆ ಅವುಗಳ ನಡುವಿನ ವ್ಯತ್ಯಾಸವೇ ಮುಕ್ಯ ಆದಾರವಾಗಿದೆ: ಎರಡು ನುಡಿಗಳು ಒಂದೇ ನುಡಿಕುಟುಂಬಕ್ಕೆ ಸೇರಿವೆಯೆಂದು ಹೇಳಬೇಕಿದ್ದಲ್ಲಿ, ಅವೆರಡರ ನಡುವೆ ಕಾಣಿಸುವ ವ್ಯತ್ಯಾಸಗಳಲ್ಲಿ ಹೆಚ್ಚಿನವೂ ಅವುಗಳ ಹಿನ್ನಡವಳಿಯಲ್ಲಿ ನಡೆದ ಮಾರ‍್ಪಾಡುಗಳಿಂದಾಗಿ ಮೂಡಿಬಂದಿವೆಯೆಂಬುದನ್ನು ತೋರಿಸಿಕೊಡಲು ಸಾದ್ಯವಾಗಬೇಕು. ಮೇಲೆ ಪಟ್ಟಿಮಾಡಿದ ಇಪ್ಪತ್ತಾರು ದ್ರಾವಿಡ ನುಡಿಗಳ ನಡುವೆ ಕಾಣಿಸುವ ವ್ಯತ್ಯಾಸಗಳಲ್ಲಿ ಹೆಚ್ಚಿನವನ್ನೂ ಈ ರೀತಿ ಅವುಗಳ ಹಿನ್ನಡವಳಿಯಲ್ಲಿ ನಡೆದಿವೆಯೆಂದು ಹೇಳಹುದಾದ ಮಾರ‍್ಪಾಡುಗಳ ಮೂಲಕ ವಿವರಿಸಲು ಸಾದ್ಯವಾಗಿದೆ. ಹಾಗಾಗಿ, ಅವನ್ನೆಲ್ಲ ಒಟ್ಟಿಗೆ ಒಂದೇ ನುಡಿಕುಟುಂಬದಲ್ಲಿ ಗುಂಪಿಸಲಾಗಿದೆ.

(ಈ ಬರಹ ವಿಜಯಕರ‍್ನಾಟಕ ಸುದ್ದಿಹಾಳೆಯ ’ಎಲ್ಲರ ಕನ್ನಡ’ ಅಂಕಣದಲ್ಲಿ ಮೊದಲು ಮೂಡಿಬಂದಿತ್ತು)